ಕರ್ತವ್ಯ ನಿರ್ಲಕ್ಷ್ಯ; ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಿಗೆ ನೋಟಿಸ್
ಮೈಸೂರು, ಜೂನ್ 24: ಕೋವಿಡ್ 19 ಆಸ್ಪತ್ರೆಗೆ ಆಹಾರ ಪದಾರ್ಥಗಳನ್ನು ಸರಬರಾಜು ಮಾಡುವಲ್ಲಿ ನಿರ್ಲಕ್ಷ್ಯ ತೋರಿದ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ನೋಟಿಸ್ ನೀಡಲಾಗಿದೆ.
ಮೈಸೂರು ಜಿಲ್ಲೆಯಲ್ಲಿ 2ನೇ ಹಂತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ಇದನ್ನು ತಡೆಯಲು ಜಿಲ್ಲಾಡಳಿತ ವ್ಯವಸ್ಥಿತ ಪ್ರಯತ್ನ ನಡೆಸುತ್ತಿದೆ. ಇದಕ್ಕಾಗಿ ಅಧಿಕಾರಿಗಳ ತಂಡವನ್ನೂ ರಚಿಸಿದೆ.
ಕೊರೊನಾ ಕೆಲಸಕ್ಕೆ ಡೋಂಟ್ ಕೇರ್: 14 ಅಧಿಕಾರಿಗಳಿಗೆ ನೋಟಿಸ್
ಈ ತಂಡದಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಕೊರೊನಾ ಸೋಂಕಿತರು ಹಾಗೂ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು ಹಾಗೂ ಇತರ ಸಿಬ್ಬಂದಿಗೆ ಆಹಾರ ಸರಬರಾಜು ಮತ್ತು ಆಹಾರ ತ್ಯಾಜ್ಯ ವಿಲೇವಾರಿ ಕರ್ತವ್ಯ ನಿರ್ವಹಿಸಲು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸ್ ಅವರನ್ನು ನೇಮಕ ಮಾಡಲಾಗಿತ್ತು.
ಆದರೆ, ಇವರು ತಮಗೆ ವಹಿಸಿದ ಕೆಲಸವನ್ನು ಸರಿಯಾಗಿ ನಿರ್ವಹಿಸದೇ ಕೋವಿಡ್ ಆಸ್ಪತ್ರೆಗೆ ಸರಿಯಾದ ಸಮಯದಲ್ಲಿ ಆಹಾರ ಸರಬರಾಜು ಮಾಡದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಬಗ್ಗೆ ಕಾರಣ ಕೇಳಿ ಉಪ ವಿಭಾಗದ ಅಧಿಕಾರಿ ಹಾಗೂ ನೋಡಲ್ ಅಧಿಕಾರಿ ಶೋ ಕಾಸ್ ನೋಟಿಸ್ ನೀಡಿದ್ದು, ನೋಟಿಸ್ ನೀಡಿದ 24 ಗಂಟೆಯೊಳಗೆ ಉತ್ತರ ನೀಡುವಂತೆ ತಿಳಿಸಲಾಗಿದೆ.