ಅ.17 ರಂದು ಮೈಸೂರು ದಸರಾ ಉದ್ಘಾಟನೆ: ಅಭಿಮನ್ಯು ಹೆಗಲಿಗೆ ಅಂಬಾರಿ
ಮೈಸೂರು, ಸೆಪ್ಟೆಂಬರ್ 13: ನಾಡಹಬ್ಬ ದಸರಾವನ್ನು ಸರಳವಾಗಿ ಆಚರಿಸಲು ತೀರ್ಮಾನಿಸಿದ ಮೇರೆಗೆ ಅಕ್ಟೋಬರ್ 17 ರಂದು ವಿದ್ಯುಕ್ತವಾಗಿ ಉದ್ಘಾಟನೆಗೊಳ್ಳಲಿದೆ.
ದಸರಾ ಮಹೋತ್ಸವ ಅ.17 ರಂದು ಬೆಳಗ್ಗೆ 7:45 ರಿಂದ 8:15ರೊಳಗಿನ ಶುಭ ಮುಹೂರ್ತದಲ್ಲಿ ಉದ್ಘಾಟನೆಯಾಗಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ ರವಿ ಉಪಸ್ಥಿತಿಯಲ್ಲಿ ದಸರಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು.
ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ಆಚರಣೆ ಚಾಮುಂಡಿ ಬೆಟ್ಟ ಹಾಗೂ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿರುತ್ತದೆ. ಅ.2 ರಂದು ಮೈಸೂರು ಅರಮನೆ ಆವರಣದಲ್ಲಿ ಮಧ್ಯಾಹ್ನ 12:18 ಗಂಟೆಗೆ ದಸರಾ ಗಜಪಡೆ ಸ್ವಾಗತ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಈ ಹಿಂದೆ ವೀರನ ಹೊಸಹಳ್ಳಿಯಲ್ಲಿ ನಡೆಯುತ್ತಿದ್ದ ಗಜಪಯಣ ಸಮಾರಂಭ ಇರುವುದಿಲ್ಲ. ನೇರವಾಗಿ ಮೈಸೂರು ಅರಮನೆ ಆವರಣಕ್ಕೆ ಐದು ಅನೆಗಳ ಗಜಪಡೆಯ ಆಗಮನವಾಗಲಿದೆ. ಈ ಬಾರಿ ಕೊರೊನಾ ವಾರಿಯರ್ಸ್ ಗಳಿಂದ ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವ ಉದ್ಘಾಟನೆಯಾಗಲಿದೆ.
ಐವರು ಕೊರೊನಾ ವಾರಿಯರ್ಸ್ ಗಳ ಪೈಕಿ ಒಬ್ಬರು ದಸರಾ ಉದ್ಘಾಟನೆ ಮಾಡಲಿದ್ದು, ಉಳಿದವರಿಗೆ ಸನ್ಮಾನ ಮಾಡಲಾಗುತ್ತದೆ. ಈ ಸನ್ಮಾನಿತರ ಪಟ್ಟಿಯಲ್ಲಿ ಕೋವಿಡ್ ಶವ ಸಂಸ್ಕಾರ ಮಾಡಿದ ವ್ಯಕ್ತಿಯನ್ನು ಸೇರಿಸಿಕೊಳ್ಳಲು ತೀರ್ಮಾನಿಸಲಾಯಿತು.
ದಸರಾ ದೀಪಾಲಂಕಾರ ಪ್ರತಿ ಬಾರಿಯಂತೆಯೇ ವಿದ್ಯುತ್ ನಿಗಮದ ವತಿಯಿಂದ ಇರಲಿದೆ. ಜಂಬೂ ಸವಾರಿ ಮೆರವಣಿಗೆ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಲಿದೆ. ಅರಮನೆ ಆವರಣದ ಒಳಗೆ ನಡೆಯುವ ಜಂಬೂ ಸವಾರಿಗೆ ಎರಡು ಸಾವಿರ ಮಂದಿಗೆ ಅವಕಾಶ ಸಾಮರ್ಥ್ಯವಿದೆ. ಆದರೆ ಎಷ್ಟು ಜನರನ್ನು ಸೇರಿಸಲು ಅನುಮತಿ ಸಿಗುತ್ತದೋ ನೋಡಿ, ಆಹ್ವಾನಿತರ ಸಂಖ್ಯೆಯನ್ನು ನಿರ್ಧರಿಸುವ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.
ಈ ಬಾರಿಯ ದಸರಾದಲ್ಲಿ ಅಂಬಾರಿ ಹೊರುವ ಆನೆಯ ಕುರಿತು ಭಾರೀ ಚರ್ಚೆ ಉಂಟಾಗಿತ್ತು. ಆದರೆ ಇದೀಗ ಮೆರವಣಿಗೆಯಲ್ಲಿ ಅಭಿಮನ್ಯು ಆನೆ ಚಿನ್ನದ ಅಂಬಾರಿ ಹೊತ್ತು ಸಾಗಲಿದ್ದಾನೆ ಎಂಬುದು ಖಚಿತವಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಅರ್ಜುನನಿಗೆ 60 ವರ್ಷ ಮೀರಿರುವುದರಿಂದ ಅಂಬಾರಿ ಹೊರುವ ಅವಕಾಶವಿಲ್ಲ. ಅಭಿಮನ್ಯು ಜೊತೆಗೆ ವಿಕ್ರಮ, ಗೋಪಿ, ವಿಜಯ ಮತ್ತು ಕಾವೇರಿ ಆನೆಗಳು ದಸರಾ ಮಹೋತ್ಸವದಲ್ಲಿ ಭಾಗಿಯಾಗಲಿವೆ.
ನವರಾತ್ರಿಯ ಎಲ್ಲಾ ದಿನ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರನ್ನು ಕಾರ್ಯಕ್ರಮ ನೀಡಲು ಆಹ್ವಾನಿಸಲಾಗುವುದು. ಎಲ್ಲಾ ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರ ಮಾಡುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.












Click it and Unblock the Notifications