ಕುರುಬ ಸಮುದಾಯದ ಸ್ವಾಮೀಜಿಗೆ ಟಾಂಗ್ ನೀಡಿದ ಸಿದ್ದರಾಮಯ್ಯ
ಮೈಸೂರು, ಫೆಬ್ರವರಿ 9: ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಕಾಗಿನೆಲೆ ಕನಕ ಗುರುಪೀಠದ ಸ್ವಾಮೀಜಿಗಳ ನೇತೃತ್ವದಲ್ಲಿ ಪಾದಯಾತ್ರೆ ಮತ್ತು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅದೇ ಸಮುದಾಯದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗೈರಾಗಿದ್ದರು.
ಮಂಗಳವಾರ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದರೆ ಮೋದಿಗೆ ಬೆಂಬಲ ಎಂಬ ಕುರುಬ ಸಮಾಜದ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಬಹಳ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಇದು ಯಾರೋ ಒಬ್ಬರು ಮಾಡುವ ತೀರ್ಮಾನವಲ್ಲ. ಯಾವುದೋ ಸಭೆ-ಸಮಾರಂಭದಲ್ಲಿ ಆಗುವ ತೀರ್ಮಾನ ಅಲ್ಲ. ಚುನಾವಣೆಯಲ್ಲಿ ಜನರು ತೀರ್ಮಾನ ಮಾಡುತ್ತಾರೆ. ಯಾರ ಪರ, ಯಾರ ವಿರೋಧ ಅನ್ನೋದು ಜನರ ತೀರ್ಪು ಎಂದು ಕುರುಬ ಸಮುದಾಯದ ಸ್ವಾಮೀಜಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದರು.

ಎಸ್.ಟಿ ಮೀಸಲಾತಿ ಹೋರಾಟದಲ್ಲಿ ನಾಯಕತ್ವ ವಹಿಸಿದ ವಿಷಯಕ್ಕೆ ಸಂಬಂಧಿಸಿದಂತೆ, ನಾಯಕರು ಜನರ ಮಧ್ಯದಿಂದ ಹುಟ್ಟಿ ಬರಬೇಕು. ತಾನಾಗಿಯೇ ನಾನೊಬ್ಬ ನಾಯಕ ಎಂದು ಹೇಳಿಕೊಳ್ಳೋದಲ್ಲ. ಜನರು ಯಾರು ನಾಯಕ ಅನ್ನೋದನ್ನು ತೀರ್ಮಾನ ಮಾಡ್ತಾರೆ ಎಂಂದು ಮೈಸೂರಿನ ಸುತ್ತೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಇದೇ ವೇಳೆ ರಾಜ್ಯದಲ್ಲಿ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರಿಗೆ ಅನ್ಯಾಯವಾದರೆ ರಸ್ತೆಗಿಳಿದು ಹೋರಾಟ ಮಾಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಮೀಸಲಾತಿ ವಿರುದ್ಧ ಇವೆ. ಖಾಸಗೀಕರಣದ ಹೆಸರಿನಲ್ಲಿ ಮೀಸಲಾತಿ ಕಿತ್ತುಕೊಳ್ಳುತ್ತಿವೆ. ಅಂತಹ ಪರಿಸ್ಥಿತಿ ಬಂದರೆ ಅಹಿಂದ ಪರವಾಗಿ ಹೋರಾಟ ಮಾಡುತ್ತೇನೆ. ಕುರುಬರಿರಲಿ ಅಥವಾ ಯಾರೇ ಇರಲಿ ಅವರಿಗೆ ಸಂವಿಧಾನಾತ್ಮಕವಾಗಿ ಮೀಸಲಾತಿ ಸಿಗುವುದಿದ್ದರೆ ಸಿಗಲಿ. ಕುರುಬರನ್ನು ಎಸ್.ಟಿ ಸೇರಿಸುವುದಕ್ಕೆ ನಾನು ವಿರೋಧ ಮಾಡುವುದಿಲ್ಲ ಎಂದು ತಿಳಿಸಿದರು.
ನವದೆಹಲಿಯಲ್ಲಿ ಗಣರಾಜ್ಯ ದಿನದಂದು ಗಲಾಟೆ ಮಾಡಿದ ದೀಪ್ ಸಿದ್ದು ಬಂಧನ ವಿಚಾರವಾಗಿ ಮಾತನಾಡಿ, ದೀಪ್ ಸಿದ್ದು ಬಂಧಿಸಿದ್ದು ಒಳ್ಳೆಯದಾಯಿತು. ಅವನೇ ಅಲ್ಲವೇ ಬಾವುಟ ಹಾರಿಸಿದ್ದು? ಅವನೇ ಅಲ್ಲಿದ್ದವರನ್ನು ಪ್ರಚೋದಿಸಿ ಗಲಾಟೆ ಮಾಡಿಸಿದ್ದು. ಅವನ ಬಂಧನದಿಂದ ಒಳ್ಳೆಯದಾಗಿದೆ ಎಂದು ಮೈಸೂರಿನ ಸುತ್ತೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.












Click it and Unblock the Notifications