ಮೈಸೂರು: ಕೆರೆದಂಡೆಯಲ್ಲಿ ಧ್ವಜಾರೋಹಣ ಮಾಡಿ ಹುತಾತ್ಮ ಯೋಧನನ್ನು ನೆನೆದ ಪೋಷಕರು
ಮೈಸೂರು, ಆಗಸ್ಟ್, 16: ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ ಗ್ರಾಮೀಣ ಭಾಗದ ಜಲಮೂಲಗಳನ್ನು ಸಂರಕ್ಷಿಸುವ ಸಲುವಾಗಿ ಮೈಸೂರು ತಲೂಕಿನಲ್ಲಿ ಉತ್ತಮ ಯೋಜನೆಯನ್ನು ರೂಪಿಸಲಾಗಿತ್ತು. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೈಗೊಳ್ಳಲಾದ 'ಅಮೃತ ಸರೋವರ' ಅಭಿಯಾನದಲ್ಲಿ ನಾಲ್ಕು ಕೆರೆ ದಂಡೆಯನ್ನು ಅಭಿವೃದ್ಧಿಪಡಿಸಲಾಗಿತ್ತು. ಇದೇ ಸ್ಥಳದಲ್ಲಿ ಹುತಾತ್ಮ ಯೋಧರ ಕುಟುಂಬದವರು ಧ್ವಜಾರೋಹಣ ನೆರವೇರಿಸಿದ್ದಾರೆ.
ಮೈಸೂರು ತಾಲೂಕಿನ ಗುಂಗ್ರಾಲ್ ಛತ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಡದಕಲ್ಲಹಳ್ಳಿ ಗ್ರಾಮದ ಬಚ್ಚಲಗೆರೆ, ಡಿಎಂಜಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾದಳ್ಳಿ ಕೆರೆ, ಬೀರಿಹುಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಮಾರಬೀಡು ಗ್ರಾಮದ ಗೆಂಡೆಕೆರೆ ಹಾಗೂ ಗೋಪಾಲಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಗರ್ತಹಳ್ಳಿ ಕೆರೆಯ ಬಳಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ನಡೆಸಲಾಯಿತು.
ದಡದಕಲ್ಲಹಳ್ಳಿ ಗ್ರಾಮದ ಬಚ್ಚಲಗೆರೆ ದಂಡೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಹುತಾತ್ಮ ಯೋಧ ಎ.ಪಿ.ಪ್ರಶಾಂತ್ ತಂದೆ ಪೊನ್ನಪ್ಪ ಮಾತನಾಡಿ, ನಮ್ಮ ಹಿರಿಯ ಮಗ ಬಾಲ್ಯದಲ್ಲೇ ಸೇನೆಗೆ ಸೇರಿದ್ದ. ಐದು ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿದ. ಈ ಅವಧಿಯಲ್ಲಿ ಎಂಟು ಪದಕಗಳನ್ನು ಪಡೆದುಕೊಂಡಿದ್ದ. ಜಮ್ಮುವಿನ ಸುರಾನ್ ಕೋಟ್ ಜಿಲ್ಲೆಯ ಮಕ್ಸಂದರ್ ಗ್ರಾಮದಲ್ಲಿ ಉಗ್ರರ ಗುಂಡಿನ ದಾಳಿಯಲ್ಲಿ ಅವನು ಹುತಾತ್ಮನಾದ ಎಂದು ಹೇಳುತ್ತಾ ಭಾವುಕರಾದರು.
ನಮ್ಮ ಮಗ ಸೇನೆಯಲ್ಲಿದ್ದ ಎಂಬುದೇ ನಮಗೆ ಹೆಮ್ಮೆಯ ಸಂಗತಿ. ಆತನ ತಂದೆ ತಾಯಿ ಆಗಿದ್ದಕ್ಕೆ ಇಂತಹ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ದೊರಕಿತು. ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದ್ದು ಅವಿಸ್ಮರಣೀಯ ಎಂದು ಅಭಿಪ್ರಾಯಪಟ್ಟರು. ತಾಲೂಕು ಪಂಚಾಯತ್ ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರಾದ ಕೆ.ಎಂ.ರಘುನಾಥ್ ಅವರು ಮಾತನಾಡಿ, ನಾವು 75ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಲ್ಲಿದ್ದೇವೆ. ಸರ್ಕಾರವು ಗ್ರಾಮೀಣ ಪ್ರದೇಶದ ಅಭಿವೃದ್ಧಿ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ. ಅದರಲ್ಲಿ ಜಲಮೂಲಗಳನ್ನು ರಕ್ಷಣೆ ಮಾಡುವಂತಹ ಕಾರ್ಯಕ್ರಮಗಳು ಮಹತ್ವವಾಗಿವೆ ಎಂದು ಹೇಳಿದರು.
ಅಮೃತ ಸರೋವರ ಕಾರ್ಯಕ್ರಮದಡಿ ಗ್ರಾಮೀಣ ಭಾಗದ ಕೆರೆಗಳನ್ನು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ತಾಲೂಕಿನ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆರೆಗಳನ್ನು ಉತ್ತಮವಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಡಿ.ಗಿರೀಶ್, ಹುತಾತ್ಮ ಯೋಧನ ತಾಯಿ ಸರೋಜ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಲೀಲಾವತಿ, ಉಪಾಧ್ಯಕ್ಷರಾದ ಮಂಜುಳಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರದೀಪ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.