ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ಆರೋಪ: ಮೈಸೂರಿನಲ್ಲಿ ಗೃಹಿಣಿ ಸಾವು
ಮೈಸೂರು, ಆಗಸ್ಟ್ 15: ಮೈಸೂರಿನ ಕೆ.ಆರ್ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ಗೃಹಿಣಿಯೊಬ್ಬರು ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ.
ಮೈಸೂರಿನ ದೊಡ್ಡಾಸ್ಪತ್ರೆಯಲ್ಲಿ ಕಾಡುತ್ತಿದೆ ಸಿಬ್ಬಂದಿ ಕೊರತೆ
ಶಿಲ್ಪಾ (25) ಎಂಬುವವರು ಸಾವನ್ನಪ್ಪಿದ್ದು, ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದಿರುವುದೇ ಅವರ ಸಾವಿಗೆ ಕಾರಣ ಎಂದು ಆಕೆಯ ಪೋಷಕರು ದೂರಿದ್ದಾರೆ. ಶಿಲ್ಪಾ ಎಚ್.ಡಿ.ಕೋಟೆ ತಾಲೂಕಿನ ಮಾದಪುರ ಗ್ರಾಮದ ನಿವಾಸಿಯಾಗಿದ್ದು, ಕಳೆದ ರಾತ್ರಿಯಷ್ಟೇ ಅಪೆಂಡಿಕ್ಸ್ ಸಮಸ್ಯೆಗೆ ಕೆ.ಆರ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಕಳೆದ ರಾತ್ರಿ ಆಸ್ಪತ್ರೆಯಲ್ಲಿ ವೈದ್ಯರಿರಲಿಲ್ಲ. ಆ ವೇಳೆ ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಶಿಲ್ಪಾ ಪ್ರಾಣ ಬಿಟ್ಟಿದ್ದಾರೆ ಎನ್ನಲಾಗಿದೆ.
ತಮ್ಮ ಮಗಳ ಸಾವಿಗೆ ನ್ಯಾಯ ಕೊಡಿಸುವವರು ಯಾರು ಎಂಬ ಪೋಷಕರ ಕೂಗು ಕರುಳು ಹಿಂಡುವಂತಿತ್ತು. ಈ ಹಿಂದೆಯೂ ಕೆ ಆರ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲವೆಂದು ಸಾರ್ವಜನಿಕರೊಬ್ಬರು ಚಿತ್ರೀಕರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸದ್ಯ ಅದಕ್ಕೆ ಪುಷ್ಟಿ ನೀಡುವಂತೆ ಇಂತಹ ಘಟನೆಗಳು ಪುನರಾವರ್ತಿತವಾಗುತ್ತಿದ್ದು, ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮ ತೆಗೆದುಕೊಳ್ಳಬೇಕಿದೆ.