ಸಿದ್ದು ಆರೋಪಕ್ಕೆ ಉತ್ತರ ಕೊಡಲು ಖುದ್ದು ಮೋದಿಯೇ ಫೆ. 19ಕ್ಕೆ ಮೈಸೂರಿಗೆ
ಮೈಸೂರು, ಫೆಬ್ರವರಿ 10 : ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 19ರಂದು ಮೈಸೂರಿಗೆ ಭೇಟಿ ನೀಡಲಿದ್ದಾರೆ.
ಕೇಂದ್ರದ ನೆರವಿನಿಂದ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಲೋಕಾರ್ಪಣೆ ಮಾಡುವುದರೊಂದಿಗೆ ಕೆಲವು ಪ್ರಮುಖ ಕಾಮಗಾರಿಗಳಿಗೆ ಮೋದಿ ಅಂದು ಚಾಲನೆ ನೀಡಲಿದ್ದಾರೆ. ಅಂದು ಬೆಳಗ್ಗೆ ಮೈಸೂರಿಗೆ ಬರುವ ಅವರು, ಮೊದಲು ಮೈಸೂರು- ಬೆಂಗಳೂರು ಜೋಡಿ ಹಳಿ ರೈಲು ಮಾರ್ಗವನ್ನು ಸಂಚಾರಕ್ಕೆ ಮುಕ್ತಗೊಳಿಸುತ್ತಾರೆ.
ಈ ಮಾರ್ಗದ ವಿದ್ಯುದ್ದೀಕರಣಕ್ಕೆ ಸಹ ಚಾಲನೆ ನೀಡಲಿದ್ದಾರೆ. ಇದೇ ವೇಳೆ ಮೈಸೂರು - ರಾಜಸ್ತಾನ ನಡುವಿನ ಹೊಸ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ನಾಗನಹಳ್ಳಿ ಸ್ಯಾಟಲೈಟ್ ರೈಲ್ವೆ ನಿಲ್ದಾಣವನ್ನು ಅಧಿಕೃತವಾಗಿ ಘೋಷಣೆ ಮಾಡುವ ನಿರೀಕ್ಷೆ ಇದೆ. ನನೆಗುದಿಗೆ ಬಿದ್ದಿರುವ ಮೈಸೂರು - ಬೆಂಗಳೂರು ಅಷ್ಟ ಪಥ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಮೋದಿ, ಇಎಸ್ಐ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ.

ಮುಖ್ಯಮಂತ್ರಿ ತವರು ಜಿಲ್ಲೆ ಮೈಸೂರಿನಲ್ಲಿ ಕಾಂಗ್ರೆಸ್ ಸರಕಾರದ ಆಡಳಿತಾವಧಿಯಲ್ಲಿ ನಡೆದಿರುವ ಹಗರಣಗಳನ್ನು ಬಯಲು ಮಾಡಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ. ಇದಕ್ಕಾಗಿ ಮೈಸೂರು ನಗರವನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಗೊಳ್ಳುವ ಮುನ್ನವೇ ಮೈಸೂರಿನಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶ ಏರ್ಪಡಿಸುವಂತೆ ರಾಜ್ಯ ಘಟಕಕ್ಕೆ ಸೂಚಿಸಿದ್ದಾರೆ.
ರಾಜ್ಯ ಬಿಜೆಪಿ ನಾಯಕರ ಪ್ರಕಾರ, ಸಿದ್ದರಾಮಯ್ಯನವರು ಮಾಡಿರುವ ಆರೋಪಗಳಿಗೆ ಈ ಸಮಾವೇಶ ಉತ್ತರ ನೀಡಲಿದೆ. ಅಂದು ಸಂಜೆ 4ಕ್ಕೆ ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ಮತ್ತು ಸ್ಥಳೀಯ ಬಿಜೆಪಿ ಮುಖಂಡರು ಸಜ್ಜಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಕೇಂದ್ರ ಪ್ರಾಯೋಜಿತ ಅಭಿವೃದ್ಧಿ ಕಾರ್ಯಗಳನ್ನು ಜನತೆಗೆ ಸಮರ್ಪಿಸುವುದರೊಂದಿಗೆ ತಮ್ಮ ವಿರುದ್ಧದ ಟೀಕೆಗೆ ಸಮರ್ಥ ಉತ್ತರ ನೀಡಲು ಪ್ರಧಾನಿ ಉದ್ದೇಶಿಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.












Click it and Unblock the Notifications