ಮೈಸೂರು ವಿವಿ ಪ್ರತಿಭಟನೆಯಲ್ಲಿ "ಫ್ರೀ ಕಾಶ್ಮೀರ" ಫಲಕ; ಎಚ್ಚೆತ್ತ ಪೊಲೀಸರು
ಮೈಸೂರು, ಜನವರಿ 9: ದೆಹಲಿಯ ಜೆಎನ್ ಯು ವಿದ್ಯಾರ್ಥಿಗಳ ಮೇಲೆ ಮುಸುಕುಧಾರಿ ಗೂಂಡಾಗಳು ನಡೆಸಿದ ಹಲ್ಲೆಯನ್ನು ಖಂಡಿಸಿ ಮೈಸೂರಿನ ಮಾನಸ ಗಂಗೋತ್ರಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಬುಧವಾರ ಸಂಜೆ ಪ್ರತಿಭಟನೆ ನಡೆಸಿದ್ದು, ಈ ವೇಳೆ 'ಫ್ರೀ ಕಾಶ್ಮೀರ' ಎಂಬ ಬರಹ ಇರುವ ನಾಮಫಲಕ ಪ್ರದರ್ಶನವಾಗಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.
ಜೆಎನ್ಯುನಲ್ಲಿ ನಡೆದ ಹಲ್ಲೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಕಾಶ್ಮೀರ ಪ್ರತ್ಯೇಕತೆ ಬಗ್ಗೆ ವಿದ್ಯಾರ್ಥಿಗಳು ದನಿ ಎತ್ತಿದ್ದಾರೆ. ಪ್ರತಿಭಟನೆಯ ಮೂಲ ಉದ್ದೇಶ ಬಿಟ್ಟು ಫ್ರೀ ಕಾಶ್ಮೀರ್ ಬಗ್ಗೆ ವಿದ್ಯಾರ್ಥಿಗಳಿಂದ ಪೋಸ್ಟರ್ ಪ್ರದರ್ಶನದ ಹಿಂದೆ ಯಾರ ಕೈವಾಡವಿದೆ ಎಂಬ ಪ್ರಶ್ನೆ ಎದುರಾಗಿದೆ.
ಜೆಎನ್ಯು ವಿವಿಯ ವಿದ್ಯಾರ್ಥಿಗಳ ಮೇಲಿನ ಖಂಡಿಸಿ ಎಬಿವಿಪಿ ವಿರುದ್ಧ ಪಂಜಿನ ಮೆರವಣಿಗೆ ನಡೆಸಲಾಗಿತ್ತು. ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘ, ದಲಿತ ವಿದ್ಯಾರ್ಥಿಗಳ ಒಕ್ಕೂಟ, ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ ಬಹುಜನ ವಿದ್ಯಾರ್ಥಿ ಸಂಘದಿಂದ ಈ ಪ್ರತಿಭಟನಾ ಮೆರವಣಿಗೆ ನಡೆದಿತ್ತು. ಎಬಿವಿಪಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಘಟನೆ ಬಗ್ಗೆ ಮೈಸೂರು ಪೊಲೀಸರು ತಡವಾಗಿ ಎಚ್ಚೆತ್ತಿದ್ದು, ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತಂದವರ ವಿರುದ್ಧ ಕೂಡಲೇ ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಳ್ಳಲು ನಗರ ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಸೂಚನೆ ನೀಡಿದ್ದಾರೆ. ಈ ಕುರಿತು ನಟಿ ಮಾಳವಿಕಾ ಅವಿನಾಶ್ ಅವರೂ ಟ್ವೀಟ್ ಮೂಲಕ ಪೊಲೀಸರ ಗಮನ ಸೆಳೆದಿದ್ದರು.
ಈ ಕುರಿತು ಮೊಕದ್ದಮೆ ದಾಖಲಿಸಿಕೊಂಡಿರುವ ಪೊಲೀಸರು, ನಾಮ ಫಲಕ ಪ್ರದರ್ಶನ ವಿಚಾರವಾಗಿ ಪ್ರತಿಭಟನೆ ಆಯೋಜಿಸಿದ್ದ ಆಯೋಜಕರನ್ನು ಆರೋಪಿಯನ್ನಾಗಿಸಿದ್ದಾರೆ. ಯಾವ ಸಂಘಟನೆಯ ಪ್ರತಿಭಟನೆಗೆ ಕರೆ ಕೊಡಲಾಗಿತ್ತು ಆ ಸಂಘಟನೆಯ ಮುಖ್ಯಸ್ಥರು ಹಾಗೂ ಸದಸ್ಯರ ಮೇಲೆ ದೂರು ದಾಖಲಾಗಿದೆ. ಜೊತೆಗೆ ಪ್ರತಿಭಟನೆಯಲ್ಲಿ ಭಾಗಿಯಾದವರ ಗುರುತು ಪತ್ತೆಗೆ ತನಿಖೆ ಆರಂಭಿಸಲಾಗಿದೆ. ಮುಖ್ಯ ಸಂಗತಿಯೆಂದರೆ, ಈ ಪ್ರತಿಭಟನೆಗೆ ಆಯೋಜಕರು ಪೊಲೀಸರಿಂದ ಯಾವುದೇ ಅನುಮತಿ ಪಡೆದಿರಲಿಲ್ಲ. ಈ ಕುರಿತು ವಿಶ್ವ ವಿದ್ಯಾಲಯದ ಉಪಕುಲಪತಿಗಳಿಂದ ಮಾಹಿತಿ ಪಡೆಯಲಾಗುತ್ತಿದ್ದು, ತನಿಖೆ ಮುಂದುವರೆದಿದೆ ಎಂದು ಪೋಲೀಸರು ತಿಳಿಸಿದ್ದಾರೆ.
ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತಂದವರ ವಿರುದ್ಧ ಕೂಡಲೇ ಎಫ್.ಐ.ಆರ್ ದಾಖಲಿಸಿ ಅವರನ್ನು ವಿಶ್ವವಿದ್ಯಾನಿಲಯದಿಂದ ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರು ವಿವಿ ಕುಲಪತಿಗೆ ವಿವಿಯ ಸಿಂಡಿಕೇಟ್ ಸದಸ್ಯ ಡಾ.ಈ.ಸಿ. ನಿಂಗರಾಜ್ ಗೌಡರು ಆಗ್ರಹಿಸಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸುಳ್ಳು ಸುದ್ದಿಗಳನ್ನು ಹರಡಿ, ವಿದ್ಯಾರ್ಥಿಗಳನ್ನು, ಅಧ್ಯಾಪಕರಿಗೆ ಪ್ರಚೋದನೆ ಉಂಟು ಮಾಡಿ ವಿಶ್ವವಿದ್ಯಾನಿಲಯದ ಮತ್ತು ಸಮಾಜದ ಶಾಂತಿ ಭಂಗವಾಗುವಂತೆ ನಡೆದುಕೊಳ್ಳುತ್ತಿರುವ ಎಲ್ಲಾ ಸಂಘಟನೆಗಳನ್ನು ಮೈಸೂರು ವಿಶ್ವವಿದ್ಯಾನಿಲಯದಿಂದ ಈ ಕೂಡಲೇ ನಿಷೇಧಿಸಬೇಕೆಂದು ಡಾ.ಈ.ಸಿ. ನಿಂಗರಾಜಗೌಡ ಒತ್ತಾಯಿಸಿದ್ದಾರೆ.












Click it and Unblock the Notifications