ಸಚಿವ ಸಾರಾ ಮಹೇಶ್ ಕಾರು ತಡೆದಿದ್ದಕ್ಕೆ ಪೊಲೀಸ್ ಪೇದೆಗೆ ಅಮಾನತು ಆದೇಶ
ಮೈಸೂರು, ಮಾರ್ಚ್ 27: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಜಯಶಂಕರ್ ನಾಮಪತ್ರ ಸಲ್ಲಿಸುವ ವೇಳೆ ಸಚಿವ ಸಾ.ರಾ.ಮಹೇಶ್ ಅವರ ಕಾರನ್ನು ಅರ್ಧ ನಿಮಿಷ ತಡೆದ ಕುವೆಂಪು ನಗರ ಠಾಣೆ ಹೆಡ್ ಕಾನ್ಸ್ಟೇಬಲ್ ವೆಂಕಟೇಶ್ ಅವರನ್ನು ಅಮಾನತುಗೊಳಿಸಲಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ನಗರದ ಜೆಎಲ್ ಬಿ ರಸ್ತೆಗೆ ಹೊಂದಿಕೊಂಡಂತಿರುವ ಜಿಲ್ಲಾಧಿಕಾರಿ ಕಚೇರಿ ಪ್ರವೇಶದ್ವಾರದ ಬಳಿ ಬ್ಯಾರಿಕೇಡ್ ಹಾಕಲಾಗಿತ್ತು. ಸಾ.ರಾ.ಮಹೇಶ್ ಕಾರು ತಡೆದ ಕಾನ್ಸ್ಟೇಬಲ್ ಕಿಟಕಿ ಗಾಜು ಇಳಿಸಿ ಸಚಿವರ ಮುಖ ನೋಡಿ, ಒಳಗೆಷ್ಟು ಮಂದಿ ಇದ್ದಾರೆ ಎಂದು ಖಚಿತಪಡಿಸಿಕೊಂಡ ಬಳಿಕ ಬಿಟ್ಟಿದ್ದಾರೆ. ಇದಕ್ಕೆ ಸುಮಾರು ಅರ್ಧ ನಿಮಿಷ ಹಿಡಿದಿದೆ.
ಇದರಿಂದ ಕೋಪಗೊಂಡ ಸಾ.ರಾ.ಮಹೇಶ್, ಕಾರಣ ಇಲ್ಲದೆ ತಡೆದಿದ್ದು ಸರಿ ಇಲ್ಲ ಎಂದು ಸ್ಥಳದಲ್ಲೇ ಪೊಲೀಸರ ಮೇಲೆ ಹರಿಹಾಯ್ದಿದ್ದಾರೆ. ಬಳಿಕ ಕಾನ್ಸ್ಟೇಬಲ್ ಮೇಲೆ ಕ್ರಮ ಕೈಗೊಳ್ಳಲು ಮೌಖಿಕ ಸೂಚನೆ ನೀಡಿದರು ಎನ್ನಲಾಗಿದೆ.

ಈ ಸಂಬಂಧ ಸಚಿವ ಸಾ.ರಾ ಮಹೇಶ್ ಮುಖ್ಯ ಪೇದೆ ವರ್ತನೆ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಇದೀಗ ಮುಖ್ಯಪೇದೆ ವೆಂಕಟೇಶ್ ಅವರನ್ನು ಅಮಾನತುಗೊಳಿಸಿ ಡಿಸಿಪಿ ಮುತ್ತುರಾಜು ಆದೇಶ ಹೊರಡಿಸಿದ್ದಾರೆ.
ಒಬ್ಬ ಅಭ್ಯರ್ಥಿ ಜತೆ ಮೂರು ವಾಹನಗಳು ಜಿಲ್ಲಾಧಿಕಾರಿ ಕಚೇರಿ ಆವರಣ ಪ್ರವೇಶಿಸುವುದಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೂ, ಕಾನ್ಸ್ಟೇಬಲ್ ತಡೆದಿರುವುದು ತಪ್ಪು. ಹೀಗಾಗಿ, ಅಮಾನತು ಮಾಡಲಾಗಿದೆ ಎಂದು ಡಿಸಿಪಿ ಮುತ್ತುರಾಜ್ ತಿಳಿಸಿದರು.
ಮುಖ್ಯ ಪೇದೆ ಅಮಾನತು ವಿಚಾರಕ್ಕೆ ಪ್ರತಿಕ್ರಿಯಿಸಿರುವ ಸಚಿವ ಸಾ ರಾ ಮಹೇಶ್, ಮುಖ್ಯ ಪೇದೆ ಅನುಚಿತವಾಗಿ ವರ್ತಿಸಿದ್ದು ನಿಜ. ನಾಮಪತ್ರ ಸಲ್ಲಿಕೆ ವೇಳೆ ಜಿಲ್ಲಾಧಿಕಾರಿ ಕಚೇರಿ ಸುತ್ತ 100 ಮೀಟರ್ ನಿಷೇಧಾಜ್ಞೆ ಇತ್ತು. ಆದರೆ ನನ್ನ ಕಾರನ್ನು ಅರ್ಧ ಕಿಲೋಮೀಟರ್ ಹಿಂದೆ ತಡೆದಿದ್ದರು. ಮುಖ್ಯ ಪೇದೆಗೆ ಕಾನೂನಿನ ಅರಿವಿರಲಿಲ್ಲ. ಅವರ ಅಮಾನತಿಗೂ ನನಗೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.












Click it and Unblock the Notifications