ರಾಜಕೀಯದಲ್ಲಿ ಬದಲಾವಣೆ ಆಗಲೇಬೇಕು: ಸಂಸದ ಪ್ರತಾಪ್ ಸಿಂಹ
ಮೈಸೂರು, ಜುಲೈ 8: ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯದ ಆಟ ನೋಡಿದರೆ ಬದಲಾವಣೆ ಆಗಲೇಬೇಕೆಂದು ಅನಿಸುತ್ತಿದೆ ಎಂದು ಸಂಸದ ಪ್ರತಾಪಸಿಂಹ ಅಭಿಪ್ರಾಯಪಟ್ಟರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದು ವರ್ಷದಿಂದ ಶಾಸಕರಿಗೆ ಮೈತ್ರಿ ಸರ್ಕಾರದಲ್ಲಿ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿತ್ತು. ಸರ್ಕಾರ ಸಂಪೂರ್ಣ ವಿಫಲವಾಗಿರುವುದರಿಂದ ಭವಿಷ್ಯವೇನು ಎಂದು ಯೋಚಿಸುವಂತಹ ಸ್ಥಿತಿ ಕಾಂಗ್ರೆಸ್ ಮತ್ತು ಜೆಡಿಎಸ್ ನಲ್ಲಿ ಶುರುವಾಗಿದೆ. ಸರ್ಕಾರದ ಆಡಳಿತ ವೈಫಲ್ಯದಿಂದ ಶಾಸಕರು ತಮ್ಮ ಕ್ಷೇತ್ರದಲ್ಲಿ ಮುಖ ತೋರಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಈ ರೀತಿ ರಾಜೀನಾಮೆ ನೀಡಿ ಹೊರಬಂದಿದ್ದಾರೆ ಎಂದರು.
ಬ್ಯಾಂಕ್ ನೇಮಕಾತಿ:ಕನ್ನಡಿಗರ ಪರ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ ಮನವಿ
ರಾಜಕೀಯ ಬದಲಾವಣೆ ಆಗುವುದಾದರೆ ಕರ್ನಾಟಕದ ಮುಖ್ಯಮಂತ್ರಿಯಾಗಲು ಯಡಿಯೂರಪ್ಪನವರೇ ಸೂಕ್ತ ವ್ಯಕ್ತಿ. ಅವರು ಸಿಎಂ ಆಗುವ ಕಾಲ ಬೇಗ ಬರಲಿ ಅನ್ನುವುದೇ ನಮ್ಮ ಆಸೆ. ಇಂದು ನಡೆಯುತ್ತಿರುವ ಬೆಳವಣಿಗೆಗಳಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದು ತಿಳಿಸಿದರು.
ಸ್ವಪಕ್ಷದಲ್ಲೇ ಉಸಿರುಗಟ್ಟಿಸುವ ವಾತಾವರಣದಿಂದ ಬೇಸತ್ತು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ದೇಶದ ಅಭಿವೃದ್ಧಿ ಕಡೆ ಗಮನ ಹರಿಸುತ್ತಿದ್ದಾರೆಯೇ ಹೊರತು ಅವರಿಗೂ ಶಾಸಕರ ರಾಜೀನಾಮೆಗೂ ಯಾವುದೇ ಸಂಬಂಧವಿಲ್ಲ. ಇಂತಹ ಕ್ಷುಲ್ಲಕ ರಾಜಕಾರಣಕ್ಕೆ ಅವರು ತಲೆ ಹಾಕುವುದಿಲ್ಲ ಎಂದು ತಿಳಿಸಿದರು.