"ಇನ್ನು ನಾಲ್ಕು ವಾರಗಳಲ್ಲಿ ಕೊರೊನಾ ಸೋಂಕಿಗೆ ಲಸಿಕೆ ಸಾಧ್ಯತೆ"
ಮೈಸೂರು, ನವೆಂಬರ್ 24: "ಇನ್ನು ನಾಲ್ಕು ವಾರಗಳಲ್ಲಿ ಕೊರೊನಾ ಸೋಂಕಿಗೆ ಲಸಿಕೆ ಬರಬಹುದು. ಅದಕ್ಕಾಗಿ ಸಿದ್ಧತೆ ಮಾಡಿಕೊಳ್ಳಲು ಪ್ರಧಾನಿ ಸೂಚಿಸಿದ್ದಾರೆ" ಎಂದು ಸಿಎಂ ಯಡಿಯೂರಪ್ಪ ಅವರು ತಿಳಿಸಿದರು.
ಎರಡು ದಿನಗಳ ಜಿಲ್ಲಾ ಪ್ರವಾಸಕ್ಕಾಗಿ ಮೈಸೂರಿಗೆ ಸಿಎಂ ಯಡಿಯೂರಪ್ಪ ಆಗಮಿಸಿದ್ದು, ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳಿಗೆ ಮೈಸೂರು ಉಸ್ತುವಾರಿ ಸಚಿವ ಸೋಮಶೇಖರ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಸಂಸದ ಪ್ರತಾಪ್ ಸಿಂಹ, ಮೇಯರ್ ತನ್ನೀಂ ಅವರು ಸ್ವಾಗತ ಕೋರಿದರು.
ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಇಂದು ಪ್ರಧಾನಿ ಮೋದಿ ಅವರು ಹಲವು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆಯನ್ನು ಕರೆದಿದ್ದರು. ಕೊರೊನಾ ಲಸಿಕೆ ಸಂಬಂಧಿಸಿದಂತೆ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಕೊರೊನಾ ಲಸಿಕೆಯು ನಾಲ್ಕು ವಾರದೊಳಗೆ ಲಭ್ಯವಾಗುವ ಸಾಧ್ಯತೆಯಿರುವುದಾಗಿ ತಿಳಿಸಿದ್ದಾರೆ. ಅದಕ್ಕಾಗಿ ಮೋದಿಯವರು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚಿಸಿದ್ದಾರೆ" ಎಂದು ತಿಳಿಸಿದರು.

"ನಾವು ಜಿಲ್ಲಾ ಮಟ್ಟದಲ್ಲಿ ಲಸಿಕೆ ಹಂಚಲು ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದೇವೆ. ಅದಕ್ಕಾಗಿ ಸೂಕ್ತ ತಯಾರಿಯನ್ನು ಮಾಡಿಕೊಳ್ಳಲು ಪ್ರತಿ ಜಿಲ್ಲೆಗಳಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ" ಎಂದು ತಿಳಿಸಿದರು.
ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಸಿಎಂ ಯಡಿಯೂರಪ್ಪನವರು ಆಗಮಿಸಿದ್ದು, ಮಂಗಳವಾರ ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಬುಧವಾರ ನಂಜನಗೂಡು ತಾಲೂಕಿನ ಸುತ್ತೂರು ಕ್ಷೇತ್ರಕ್ಕೆ ಭೇಟಿ ನೀಡಿ ನಂತರ ಗ್ರಾಮ ದೇವತೆ ದೊಡ್ಡಮ್ಮತಾಯಿ ದೇವಸ್ಥಾನ ಮೂರ್ತಿ ಪ್ರತಿಷ್ಠಾಪನೆಯ ಉದ್ಘಾಟನೆ ಮಾಡಲಿದ್ದಾರೆ. ಜೊತೆಗೆ ಡಿಸೆಂಬರ್ 14ರಂದು ತಲಕಾಡಿನಲ್ಲಿ ನಡೆಯಲಿರುವ ಪಂಚಲಿಂಗ ದರ್ಶನ ಆಚರಣೆ ಸಂಬಂಧ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪರಿವೀಕ್ಷಣಾ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಸಲಿರುವುದಾಗಿ ತಿಳಿದುಬಂದಿದೆ.












Click it and Unblock the Notifications