"ಆವೇಶದಿಂದ ಮಾತಾಡಿದ್ದೆ": ಪೊಲೀಸರ ಕ್ಷಮೆ ಯಾಚಿಸಿದ ಪ್ರತಾಪ್ ಸಿಂಹ
ಮೈಸೂರು, ಅಕ್ಟೋಬರ್ 9: ವಿಜಯದಶಮಿಗೂ ಮೊದಲು ಚಾಮುಂಡಿ ಬೆಟ್ಟದಲ್ಲಿ ಪೊಲೀಸರಿಗೆ ಅವಮಾನಕಾರಿಯಾಗಿ ಮಾತಾಡಿದ್ದಕ್ಕೆ ಪೊಲೀಸ್ ಕಮೀಷನರ್ ಹಾಗೂ ಡಿಸಿಪಿ ಅವರ ಬಳಿ ತಾವು ಕ್ಷಮೆ ಯಾಚಿಸಿರುವುದಾಗಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಬುಧವಾರ ಪತ್ರಕರ್ತರ ಜತೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, "ದಸರಾ ಹಬ್ಬದ ಆಚರಣೆ ಯಶಸ್ವಿಯಾಗಿ ನಡೆದಿದೆ. ಇಡೀ ಪೋಲೀಸ್ ಇಲಾಖೆ ಉತ್ತಮವಾಗಿ ಕಾರ್ಯ ನಿರ್ವಹಿಸಿದೆ. ಕಾನ್ಸ್ಟೇಬಲ್ ಇಂದ ಕಮೀಷನರ್ ವರೆಗೂ ಎಲ್ಲರೂ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಮಾಧ್ಯಮದವರು ಮನಸ್ಸಿನಲ್ಲಿ ಏನೂ ಇಟ್ಟುಕೊಳ್ಳಬೇಡಿ. ಸೆಪ್ಟೆಂಬರ್ 27ರಂದು ಚಾಮುಂಡಿಗೆ ಪುಷ್ಪಾರ್ಚನೆ ಮಾಡಿ ನಮ್ಮ ಅಧಿದೇವತೆ ಎಂದು ನಾವು ಹೊತ್ತು ಮೆರೆಯುತ್ತೇವೆ. ಹಾಗೆಯೇ ಚಾಮುಂಡಿಗೆ ಅವಳು, ಇವಳು ಎಂದು ಮಾತನಾಡಿ ಪುಷ್ಪಾರ್ಚನೆ ಮಾಡಿದರೆ ಆ ದೇವರು ಹಾಗೂ ಸಮಾಜ ಮೆಚ್ಚುವುದಿಲ್ಲ. ಇದಕ್ಕೆ ತಡೆ ಒಡ್ಡುವ ಕೆಲಸವನ್ನು ನಾವು ಮಾಡಿದ್ದೇವೆ. ಇದಕ್ಕೆ ವಿಪರೀತ ಅರ್ಥ ಕಲ್ಪಿಸಬೇಕಿಲ್ಲ" ಎಂದರು.
"ನಾನು ಅಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದಾಗ ಮನಸ್ಸಿಗೆ ನೋವಾಯಿತು. ಶಾಮಿಯಾನ ಹಾಕಿ ಅಪಚಾರ ಮಾಡಲು ಹೊರಟಿರುವುದನ್ನು ಕಂಡು ಆವೇಶಭರಿತನಾಗಿ ಮಾತನಾಡಿದ್ದೇನೆ. ಈಗಾಗಲೇ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಹಾಗೂ ಡಿಸಿಪಿ ಮುತ್ತುರಾಜ್ ಅವರ ಬಳಿ ವೈಯಕ್ತಿಕವಾಗಿ ಭೇಟಿಯಾಗಿ ಕ್ಷಮೆ ಯಾಚಿಸಿದ್ದೇನೆ. ನಾವೆಲ್ಲ ಒಂದೇ ಕುಟುಂಬದಂತೆ ಕೆಲಸ ಮಾಡಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ" ಎಂದು ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದರು.

ಸೆಪ್ಟೆಂಬರ್ 27ರಂದು ಬೆಟ್ಟದ ಮೇಲಿನ ಮಹಿಷಾಸುರ ಮೂರ್ತಿ ಬಳಿ ಮಹಿಷ ದಸರಾ ನಡೆಸುವ ಸಲುವಾಗಿ ಶಾಮಿಯಾನ, ವೇದಿಕೆ ಹಾಕಿ ತಯಾರಿ ಮಾಡಲಾಗುತ್ತಿತ್ತು. ಈ ವಿಷಯ ತಿಳಿದು ಪ್ರತಾಪ್ ಸಿಂಹ ಸ್ಥಳಕ್ಕೆ ಭೇಟಿ ನೀಡಿ ಇಲ್ಲಿ ವೇದಿಕೆ ಹಾಕೋದಕ್ಕೆ ಯಾರು ನಿಮಗೆ ಅನುಮತಿ ಕೊಟ್ಟರು? ಇದನ್ನು ಮೊದಲು ಇಲ್ಲಿಂದ ತೆಗೆಯಿರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ನಿಮ್ಮಿಂದ ಇಂತಹ ಕೆಲಸ ನಿರೀಕ್ಷೆ ಮಾಡಿರಲಿಲ್ಲ ಎಂದು ಪೊಲೀಸರ ಮೇಲೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು.












Click it and Unblock the Notifications