ಕೊರೊನಾ ವೈರಸ್ ಆತಂಕ; ಇಂದಿನಿಂದ ಗಣಪತಿ ಆಶ್ರಮದ ಹಲವು ಸ್ಥಳಗಳು ಬಂದ್
ಮೈಸೂರು, ಮಾರ್ಚ್ 9: ವಿಶ್ವದೆಲ್ಲೆಡೆ ಆತಂಕ ಮೂಡಿಸಿರುವ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಎಲ್ಲೆಡೆ ಮೈಸೂರಿನಲ್ಲೂ ಕಟ್ಟೆಚ್ಚರವಹಿಸಲಾಗುತ್ತಿದೆ. ಅದರಂತೆ ಸಾಂಸ್ಕೃತಿಕ ನಗರಿ ಮೈಸೂರಿನ ಅವಧೂತ ದತ್ತಪೀಠದಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ.
ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದ ನಂಜನಗೂಡು ರಸ್ತೆಯಲ್ಲಿರುವ ಅವಧೂತ ದತ್ತಪೀಠದ ಶುಕವನ, ಕಿಷ್ಕಿಂಧ ಮೂಲಿಕಾ ಬೋನ್ಸಾಯಿ ಗಾರ್ಡನ್, ವಿಶ್ವಂ ವಸ್ತು ಸಂಗ್ರಹಾಲಯಗಳನ್ನು ಮಾ.9ರಿಂದ ಅನಿರ್ದಿಷ್ಟಾವಧಿವರೆಗೆ ಬಂದ್ ಮಾಡಲಾಗಿದೆ.
ಆ ಮೂಲಕ ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮ ವಹಿಸಲಾಗಿದ್ದು, ಅವಧೂತ ದತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಆಶ್ರಮದ ವೆಬ್ಸೈಟ್ನಲ್ಲಿ ಕನ್ನಡ, ಇಂಗ್ಲಿಷ್, ತೆಲುಗು ಭಾಷೆಯಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಆಶ್ರಮದಲ್ಲಿನ ಗಿಳಿವಿಂಡು, ಬೋನ್ಸಾಯ್ ಗಿಡಿಗಳನ್ನು ನೋಡಲು ಬರುವವರಲ್ಲಿ ಬಹುತೇಕ ಜನರು ವಿದೇಶಿಗರೇ ಆಗಿರುವ ಹಿನ್ನೆಲೆಯಲ್ಲಿ ಈ ಕ್ರಮ ವಹಿಸಲಾಗಿದೆ. ಅಲ್ಲದೇ ಮಠಕ್ಕೆ ಆಗಮಿಸುವ ಭಕ್ತರಿಗೆ ಉಚಿತವಾಗಿ ಮಾಸ್ಕ್ ವಿತರಣೆ ಮಾಡಲಾಗುತ್ತಿದೆ.

ಈ ಬಗ್ಗೆ ಮಾತನಾಡಿರುವ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಆಶ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸದಂತೆ ಭಕ್ತರಿಗೆ ಮನವಿ ಮಾಡಿದ್ದು, ಕೊರೊನಾದಿಂದ ಆರೋಗ್ಯ ರಕ್ಷಿಸಿಕೊಳ್ಳಲು ಇದೆಲ್ಲವೂ ಅನಿವಾರ್ಯವಾಗಿದೆ ಎಂದರು.












Click it and Unblock the Notifications