ಕೆಆರ್ ಎಸ್ ಉಳಿವಿಗಾಗಿ ಡಿ.8ರಂದು ಪೂರ್ವಭಾವಿ ಸಮಾಲೋಚನಾ ಸಭೆ
ಮೈಸೂರು, ಡಿಸೆಂಬರ್ 7: ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದಾಗಿ ಕೆಆರ್ಎಸ್ ಅಣೆಕಟ್ಟೆಗೆ ಅಪಾಯ ಬಂದೊದಗಿದೆ. ಈ ಹಿನ್ನೆಲೆಯಲ್ಲಿ ಕೆಆರ್ಎಸ್ ಉಳಿವಿಗಾಗಿ ಪೂರ್ವಭಾವಿ ಸಮಾಲೋಚನಾ ಸಭೆಯನ್ನು ಡಿ.8ರಂದು ಬೆಳಿಗ್ಗೆ 11ಕ್ಕೆ ಹುಣಸೂರು ರಸ್ತೆಯಲ್ಲಿರುವ ಕೃಷಿ ಮಾರುಕಟ್ಟೆ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಹಿರಿಯ ಸಮಾಜವಾದಿ ಪ.ಮಲ್ಲೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರ ಅಣೆಕಟ್ಟೆ ಸಮೀಪದಲ್ಲಿರುವ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಗಣಿಗಾರಿಕೆಯಲ್ಲಿ ರಾಜಕಾರಣಿಗಳು ಹಾಗೂ ಅಧಿಕಾರಿಗಳೇ ಶಾಮೀಲಾಗಿರುವುದರಿಂದ ಗಣಿಗಾರಿಕೆಗೆ ಶಾಶ್ವತ ಪರಿಹಾರ ದೊರೆಯುತ್ತಿಲ್ಲ.
ಹಾಗಾಗಿ ಜನಾಂದೋಲನ ನಡೆಸಿ ಇಡೀ ಸಮಾಜವೇ ಇದರ ವಿರುದ್ಧ ಧ್ವನಿ ಎತ್ತುವಂತೆ ಮಾಡಲು ಮೈಸೂರಿನಲ್ಲಿ ಕೆಆರ್ಎಸ್ ಉಳಿವಿಗಾಗಿ ಸಮಾಲೋಚನಾ ಸಮಿತಿ ಅಸ್ತಿತ್ವಕ್ಕೆ ಬಂದಿದೆ ಎಂದರು. ಮಂಡ್ಯದ ಯುವಕನೊಬ್ಬ ಗಣಿಗಾರಿಕೆ ನಡೆಸದಂತೆ ನ್ಯಾಯಾಲಯದಿಂದ ತಡೆ ಆಜ್ಞೆ ತಂದಿದ್ದರೂ ಗಣಿಗಾರಿಕೆ ನಡೆಸಲು ಸರ್ಕಾರ ಪರವಾನಗಿ ನೀಡುತ್ತಿದೆ.

ಪರಿಸರವಾದಿಗಳು, ದಲಿತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಮಹಿಳಾ ಮತ್ತು ಸಾಂಸ್ಖತಿಕ ಸಂಘಟನೆಗಳು, ವಿದ್ಯಾರ್ಥಿಗಳು ಹಾಗೂ ಯುವ ಜನರು ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.












Click it and Unblock the Notifications