ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ರಣಕಹಳೆ, ಬಿಜೆಪಿಯಲ್ಲಿ ಪುಳಕ
ಮೈಸೂರು, ಏಪ್ರಿಲ್ 09: ಪ್ರಧಾನಿ ಮೋದಿ ಅವರ ಹೆಸರೇಳಿಕೊಂಡು ಮತ ಕೇಳುತ್ತಿರುವ ಬಿಜೆಪಿ ಅಭ್ಯರ್ಥಿಗಳು ಇದೀಗ ಮೋದಿ ಅವರೇ ರಾಜ್ಯಕ್ಕೆ ಭೇಟಿ ನೀಡುತ್ತಿರುವುದರಿಂದ ಪುಳಕಗೊಂಡಿದ್ದಾರೆ. ಮೋದಿಯವರು ರಾಜ್ಯಕ್ಕೆ ಬಂದು ಪ್ರಚಾರ ಮಾಡಿ ಹೋದರೆ ತಮ್ಮ ಗೆಲುವಿಗೆ ಸಹಾಯವಾಗುತ್ತದೆ ಎಂಬ ನಂಬಿಕೆಯಲ್ಲಿರುವ ನಾಯಕರು, ಅಭ್ಯರ್ಥಿಗಳು ಖುಷಿಪಡುತ್ತಿದ್ದು ಕಾತರದಿಂದ ಕಾಯುತ್ತಿದ್ದಾರೆ.
ಮಂಗಳವಾರ ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ ಅವರು ಎರಡು ಕಡೆ ಬಹಿರಂಗ ಪ್ರಚಾರ ನಡೆಸಲಿದ್ದು, ಚುನಾವಣೆ ಘೋಷಣೆಯಾದ ಬಳಿಕ ಪ್ರಥಮ ಬಾರಿಗೆ ರಾಜ್ಯಕ್ಕೆ ಬರುತ್ತಿರುವುದರಿಂದ ರಾಜ್ಯದ ಜನರಲ್ಲಿಯೂ ಕುತೂಹಲ ಮನೆ ಮಾಡಿದೆ.
ಈಗಾಗಲೇ ಮೋದಿ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಟೀಕೆ ಮಾಡುತ್ತಿದ್ದು ಅವರಿಂದ ದೇಶಕ್ಕೆ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಈಡೇರಿಸಿಲ್ಲ ಎಂಬಿತ್ಯಾದಿ ಆರೋಪಗಳನ್ನು ಮಾಡುತ್ತಿದ್ದಾರೆ.

ಇದಕ್ಕೆ ಮೋದಿ ಯಾವ ರೀತಿಯಲ್ಲಿ ಉತ್ತರ ನೀಡುತ್ತಾರೆ ಮತ್ತು ತಮ್ಮ ಐದು ವರ್ಷಗಳ ಆಡಳಿತದ ಬಗ್ಗೆ ಮಾತನಾಡುವ ವಿಪಕ್ಷಗಳಿಗೆ ಯಾವ ರೀತಿಯಲ್ಲಿ ಟಾಂಗ್ ನೀಡಬಹುದು ಎಂಬಿತ್ಯಾದಿ ವಿಚಾರಗಳ ಬಗ್ಗೆ ಜನ ಕುತೂಹಲಗೊಂಡಿದ್ದಾರೆ.
ಚಿತ್ರದುರ್ಗಕ್ಕೆ ಮಧ್ಯಾಹ್ನ 1 ಗಂಟೆಗೆ ಆಗಮಿಸುವ ಮೋದಿ ಅವರು ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಲಿದ್ದು, ಸ್ಥಳೀಯ ಅಭ್ಯರ್ಥಿ ಎ.ನಾರಾಯಣಸ್ವಾಮಿ ಪರ ಮತಯಾಚನೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಮಾರು ಎರಡು ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.
ಚಿತ್ರದುರ್ಗದಲ್ಲಿ ನಡೆದ ಕಾರ್ಯಕ್ರಮದ ಬಳಿಕ ಸಂಜೆ 4ಗಂಟೆ ವೇಳೆಗೆ ಮೈಸೂರಿಗೆ ಆಗಮಿಸಲಿದ್ದು, ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೆ ಸ್ಥಳೀಯ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹಪರ ಮತಯಾಚನೆ ಮಾಡಲಿದ್ದಾರೆ.
ಚುನಾವಣೆ ಘೋಷಣೆಗೆ ಮುನ್ನವೇ ರಾಜ್ಯಕ್ಕೆ ಬಂದು ಹೋಗಿರುವ ಮೋದಿ ಇದೀಗ ಮತ್ತೆ ಆಗಮಿಸುತ್ತಿದ್ದು, ಚುನಾವಣೆ ಘೋಷಣೆಯಾದ ಬಳಿಕ ಪ್ರಥಮ ಬಾರಿಗೆ ರಾಜ್ಯಕ್ಕೆ ಬರುತ್ತಿರುವುದರಿಂದ ಮೋದಿ ಆಗಮನ ಬಿಜೆಪಿಗೆ ಅನುಕೂಲವಾಗುತ್ತದೆಯಾ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ಸದ್ಯ ಹುರುಪಿನಲ್ಲಿರುವ ಬಿಜೆಪಿ ನಾಯಕರು ಕಾರ್ಯಕರ್ತರು ಮೋದಿ ಆಗಮನಕ್ಕಾಗಿ ಕಾಯುತ್ತಿದ್ದಾರೆ.












Click it and Unblock the Notifications