ಹಿಂದೂ ಕಾರ್ಯಕರ್ತರ ಹತ್ಯೆ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನೆ
ಮೈಸೂರು, ಜುಲೈ11 : ಜಿಹಾದಿ ಪ್ರೇರಿತ ಭಯೋತ್ಪಾದನಾ ಸಂಘಟನೆಗಳ ಪ್ರೇರಣೆಯಿಂದ ನಡೆಯುತ್ತಿರುವ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಸರಣಿ ಹತ್ಯೆಯನ್ನು ಖಂಡಿಸಿ ಹಾಗೂ ಎಲ್ಲಾ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾದಳದ ವಶಕ್ಕೆ ಒಪ್ಪಿಸಿ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ ಮೈಸೂರು ನಗರ ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿತು.
ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ, ಕರ್ನಾಟಕದಲ್ಲಿ ಈವರೆಗೂ ಸಂಭವಿಸಿದ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಹತ್ಯೆಯ ತನಿಖೆಯನ್ನು ಈ ಕೂಡಲೇ ಎನ್.ಐ.ಎ. ಗೆ ಒಪ್ಪಿಸಬೇಕೆಂದು ಒತ್ತಾಯಿಸಿದರು. ಬಿ.ಸಿರೋಡ್ ಸಜಿಪಗ್ರಾಮದ ಶರತ್ ಮಡಿವಾಳ ಹತ್ಯೆಯನ್ನು ಖಂಡಿಸಿದರಲ್ಲದೇ ಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಶಿಕ್ಷೆಗೆ ಒಳಪಡಿಸಿ ಎಂದು ಒತ್ತಾಯಿಸಿದರು.

ರಾಜ್ಯದ ವಿವಿಧ ಭಾಗಗಳಲ್ಲಿ ಅಕ್ರಮವಾಗಿ ವಿದೇಶಗಳಿಂದ ಬಂದು ನೆಲೆಸಿರುವ ನೆಲೆಸುತ್ತಿರುವ ಜಿಹಾದಿ ಮನಸ್ಥಿತಿಯುಳ್ಳ ವ್ಯಕ್ತಿಗಳು ಮತ್ತು ಗುಂಪುಗಳನ್ನು ಗುರುತಿಸಿ ದೇಶದಿಂದ ಹೊರ ಹಾಕುವುದಕ್ಕೆ ಮತ್ತು ಬಂಧಿಸಿ ಶಿಕ್ಷಿಸುವುದಕ್ಕೆ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವುದಕ್ಕೆ ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಜಿಲ್ಲಾಡಳಿತದೊಂದಿಗೆ ಜಾಗೃತ ದಳವನ್ನು ರಚಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭ ಶರತ್ ಮಡಿವಾಳ ಅವರ ಭಾವಚಿತ್ರಕ್ಕೆ ಪುಚ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿ, ಒಂದು ನಿಮಿಷ ಮೌನಾಚರಣೆ ನಡೆಸಿದರು.
ಉಚಿತ ಪಾಸ್ ನೀಡುವಂತೆ ಪ್ರತಿಭಟನೆ
ಬರದ ಹಿನ್ನೆಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ವಿತರಿಸಲು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ ವತಿಯಿಂದ ಪ್ರತಿಭಟನೆ ನಡೆಯಿತು.
ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಬರಗಾಲವಿದ್ದು, ಬೆಲೆಏರಿಕೆಯ ಜನಜೀವನದಿಂದ ತತ್ತರಿಸಿದ ರೈತರು ಸಾಲಗಳಿಂದ ಬೇಸತ್ತು, ಬೆಳೆಗಳಿಗೆ ಸರಿಯಾದ ದರ ಸಿಗದೇ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.

ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದು,ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸದಲ್ಲಿ ಪ್ರಮುಖ ಪಾತ್ರ ವಹಿಸುವ ಶಿಕ್ಷಣವನ್ನು ಪಡೆಯಲು ಸಾಲ ಸಂಕಷ್ಟಗಳನ್ನು ಎದುರಿಸಬೇಕಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವಂತೆ ಒತ್ತಾಯಿಸಿದರು. ಬಸ್ ಪಾಸ್ ಗೆ ತೆಗೆದುಕೊಂಡಿರುವ ಹಣವನ್ನು ವಾಪಸ್ ನೀಡಿ, ಪದವಿ, ಇಂಜಿನಿಯರಿಂಗ್ ಹಾಗೂ ಎಲ್ಲಾ ಸೆಮಿಸ್ಟರ್ ಅಡಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ 12 ತಿಂಗಳಿಗೆ ಬಸ್ ಪಾಸ್ ನೀಡಿ ಎಂದರು.












Click it and Unblock the Notifications