ಮೈಸೂರು: ಜನಸ್ನೇಹಿ ಆಡಳಿತ ನೀಡುವಂತೆ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ
ಮೈಸೂರು, ಆಗಸ್ಟ್, 08: ಸಾರ್ವಜನಿಕರು ಹಲವಾರು ಕೆಲಸಗಳು, ಸೌಲಭ್ಯಗಳಿಗೆ ಕಂದಾಯ ಇಲಾಖೆಗಳಿಗೆ ಅರ್ಜಿ ಸಲ್ಲಿಸುತ್ತಾರೆ. ಅವರ ಅರ್ಜಿಗಳನ್ನು ಸಕಾಲದಲ್ಲಿ ವಿಲೆವಾರಿ ಮಾಡಬೇಕು. ಅನಗತ್ಯವಾಗಿ ವಿಳಂಬ ಮಾಡಬಾರದು. ಆಡಳಿತ ವರ್ಗ ಜನರ ನಿರೀಕ್ಷೆಗೆ ತಕ್ಕಂತೆ ಚುರುಕಾಗಿ ಕಾರ್ಯನಿರ್ವಹಿಸುವ ಮೂಲಕ ಜನಸ್ನೇಹಿ ಆಡಳಿತ ನೀಡಿ ಸರ್ಕಾರಕ್ಕೆ ಉತ್ತಮ ಹೆಸರು ತರಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮೈಸೂರಿನಲ್ಲಿ ಅಧಿಕಾರಿಗಳಿಗೆ ತಿಳಿಸಿದರು.
ಇಂದು ಪ್ರಾದೇಶಿಕ ಆಯುಕ್ತರ ಕಚೇರಿಯ ಚಾಮುಂಡೇಶ್ವರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮೈಸೂರು ವಿಭಾಗದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿ, ಕಂದಾಯ ಇಲಾಖೆಯು ನೇರವಾಗಿ ಜನರೊಂದಿಗೆ ಸಂಪರ್ಕ ಹೊಂದಿರುವ ಇಲಾಖೆ. ಜನಪರ ಆಡಳಿತ ನೀಡುವುದು ಮಾತೃ ಇಲಾಖೆಯಾದ ಕಂದಾಯ ಇಲಾಖೆಯಿಂದ ಆರಂಭವಾಗಬೇಕು. ಮೈಸೂರು ವಿಭಾಗದ ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇಕಡಾ 30ರಷ್ಟು ಮಳೆ ಕೊರತೆಯಾಗಿದೆ. ಮುಂದೆಯೂ ಮಳೆ ಕಡಿಮೆಯಾಗುವ ಸಾಧ್ಯತೆಯಿರುವುದರಿಂದ ರೈತರು ಹೆಚ್ಚಿನ ನೀರನ್ನು ಬಳಸುವ ಬೆಳೆಗಳನ್ನು ಬೆಳೆಯಬಾರದು ಎಂದರು.

ಮಳೆಯಿಂದ ಮಾನವ ಜೀವ ಹಾನಿ ಆಗಿದ್ದು, ಮುಂದೆ ಈ ರೀತಿ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಅಪಾಯದ ಸ್ಥಳದಲ್ಲಿ ಇರುವವರನ್ನು ಬೇರೆಡೆಗೆ ಸ್ಥಳಾಂತರಿಸಿ ಪ್ರಾಣಹಾನಿ ಆಗದಂತೆ ತಡೆಗಟ್ಟಬೇಕು. ಉಡುಪಿ ಮತ್ತು ಮಂಗಳೂರು ಜಿಲ್ಲೆಗಳಲ್ಲಿ ಕಾಲು ಸಂಕಗಳು ಹಾಗೂ ವೆಂಟೆಡ್ ಡ್ಯಾಮ್ಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. ವಿಪತ್ತು ನಿರ್ವಹಣೆ ಪರಿಹಾರದಲ್ಲಿಯೂ ಅಕ್ರಮ ಆಗುತ್ತಿದ್ದು, ಅನರ್ಹರು ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬರ, ಪ್ರವಾಹ ಹಾಗೂ ಕೋವಿಡ್ಗೆ ಸಂಬಂಧಿಸಿದಂತೆ ಕ್ಯಾಲಾಮಿಟಿ ಫಂಡ್ನಲ್ಲಿ ಕೈಗೊಂಡಿರುವ ಕಾಮಗಾರಿಗಳು 4 ವರ್ಷಗಳಿಂದ ಬಾಕಿ ಉಳಿದಿದ್ದು, ಇದರಲ್ಲಿಯೂ ಬಾಕಿ ಇರುವುದಕ್ಕೆ ಅಸಮದಾನ ವ್ಯಕ್ತಪಡಿಸಿದ ಅವರು ಅದೇ ವರ್ಷಗಳಲ್ಲಿ ಕಾಮಗಾರಿಗಳು ಮುಗಿಯಬೇಕು ಎಂದು ತಾಕೀತು ಮಾಡಿದರು.
ಭೂಮಿ ತಂತ್ರಾಂಶದಲ್ಲಿ ಬರುವ ಕಡತಗಳನ್ನು 15 ದಿನಗಳಲ್ಲಿ ವಿಲೆವಾರಿ ಮಾಡಬೇಕು. ಮೈಸೂರು ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿಯೂ ಸಕಾಲದಲ್ಲಿ ಅರ್ಜಿಗಳು ವಿಲೇವಾರಿ ಆಗುತ್ತಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ವಿಳಂಬಕ್ಕೆ ಕಾರಣವಾದ ತಹಶೀಲ್ದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ತಹಶೀಲ್ದಾರ್ಗಳು, ಉಪ ವಿಭಾಗಾಧಿಕಾರಿಗಳು, ಹಾಗೂ ಜಿಲ್ಲಾಧಿಕಾರಿಗಳು ತಮ್ಮ ಹಂತದಲ್ಲಿ ಇರುವ ಕೋರ್ಟ್ ಪ್ರಕರಣಗಳನ್ನು ಬಾಕಿ ಉಳಿಸಿಕೊಳ್ಳಬಾರದು. ವಾರದಲ್ಲಿ 2 ದಿನ ಕೋರ್ಟ್ ತೆಗೆದುಕೊಂಡು ಆದ್ಯತೆಯ ಮೇಲೆ ಪ್ರಕರಣಗಳನ್ನು ವಿಲೇವಾರಿ ಮಾಡಬೇಕು ಎಂದು ಸೂಚನೆ ನೀಡಿದರು.
ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ ಅವರು ಮಾತನಾಡಿ, ಪದೇ ಪದೇ ಪ್ರವಾಹ ಬಂದು ಅಪಾಯ ಎದುರಿಸುತ್ತಿರುವ ಊರುಗಳ ಜನರನ್ನು ಶಾಶ್ವತವಾಗಿ ಶಿಫ್ಟ್ ಮಾಡಿ ಶಾಶ್ವತ ಪುನರ್ವಸತಿ ಕಲ್ಪಿಸುವ ಕ್ರಮವನ್ನು ಜಿಲ್ಲಾಧಿಕಾರಿಗಳು ಕೈಗೊಳ್ಳಬೇಕು. ಹಾಗೆಯೇ ತಹಶೀಲ್ದಾರ್, ಉಪವಿಭಾಗಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳು ಸಕಾಲದಲ್ಲಿ ಆಗಬೇಕು ಎಂದರು.
ಕಂದಾಯ ಮತ್ತು ವಿಪತ್ತು ನಿರ್ವಹಣೆಯ ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿ.ವಿ.ಮಹೇಶ್ ಅವರು ಮಾತನಾಡಿ, ಇಲ್ಲಿಯವರೆಗೆ ಮೈಸೂರು ವಿಭಾಗದ ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಆಗಸ್ಟ್ ತಿಂಗಳಲ್ಲಿ ವಾಡಿಕೆಗಿಂತ ಮಳೆ ಕಡಿಮೆ ಆಗುವ ಮಾಹಿತಿ ಇದೆ. ಮಳೆ ಅನಾಹುತಗಳಿಗೆ ಎಸ್ಡಿಆರ್ಎಫ್ ಅನುದಾನದಲ್ಲಿ ಪರಿಹಾರಗಳನ್ನು ವಿತರಣೆ ಮಾಡಬೇಕು. ಪಿಡಿ ಅಕೌಂಟ್ನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡಬೇಕು ಎಂದು ಸೂಚನೆ ನೀಡಿದರು.
ಮೈಸೂರು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಮಾತನಾಡಿ, ಕೆ.ಆರ್.ಎಸ್, ಕಬಿನಿ ಹಾಗೂ ಚಿಕ್ಕ ಡ್ಯಾಮ್ಗಳಾದ ನುಗು ಮತ್ತು ತಾರಕ ಜಲಾಶಯಗಳಿಂದ ಕುಡಿಯುವ ನೀರನ್ನು ಬಳಕೆ ಮಾಡಲಾಗುತ್ತಿದೆ. ರೈತರ ಬೆಳೆಗಳಿಗೆ ನೀರನ್ನು ಈಗಿನ ಪರಿಸ್ಥಿತಿಯಲ್ಲಿ ನೀಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ರೈತರು ಡ್ರೈ ಬೆಳೆಗಳಾದ ರಾಗಿ, ಜೋಳ ರೀತಿಯ ಬೆಳೆಗಳನ್ನು ಬೆಳೆಯುವಂತೆ ಅರಿವು ಮೂಡಿಸಲಾಗತ್ತಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಪ್ರಾದೇಶಿಕ ಆಯುಕ್ತರಾದ ಪ್ರಕಾಶ್, ಕಂದಾಯ ಇಲಾಖೆಯ ಆಯುಕ್ತರಾದ ಸುನೀಲ್ ಕುಮಾರ್, ಭೂಮಾಪನ ಮತ್ತು ಭೂ ದಾಖಲೆಗಳ ಇಲಾಖೆಯ ಆಯುಕ್ತರಾದ ಜೆ. ಮಂಜುನಾಥ್, ಹಾಸನ ಜಿಲ್ಲಾಧಿಕಾರಿಗಳಾದ ಸಿ.ಸತ್ಯಭಾಮ, ಕೊಡಗು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜ, ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ.ಕುಮಾರ್, ಉಡುಪಿ ಜಿಲ್ಲಾಧಿಕಾರಿಗಳಾದ ವಿಧ್ಯಾಕುಮಾರಿ, ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಾದ ಮೀನಾ ನಾಗರಾಜ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಹಿಲನ್, ಚಾಮರಾಜನಗರ ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications