ಕೊರೊನಾ ಆತಂಕದ ನಡುವೆ ಮಹಾಬಲೇಶ್ವರಸ್ವಾಮಿ ರಥೋತ್ಸವ: ಭಕ್ತರಿಗೆ ನಿರ್ಬಂಧ
ಮೈಸೂರು, ಏಪ್ರಿಲ್ 3: ಮಹಾಮಾರಿ ಕೊರೊನಾ ಆತಂಕದ ಕರಿನೆರಳಿನ ನಡುವೆ ಚಾಮುಂಡಿ ಬೆಟ್ಟದ ಮಹಾಬಲೇಶ್ವರಸ್ವಾಮಿ ರಥೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿತು.
ಮೈಸೂರು ಜಿಲ್ಲೆಯಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಥೋತ್ಸವಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಡಿಮೆ ಸಂಖ್ಯೆ ಭಕ್ತಾಧಿಗಳ ಸಮ್ಮುಖದಲ್ಲಿ ಮಹಾಬಲೇಶ್ವರಸ್ವಾಮಿ ರಥೋತ್ಸವ ಸರಳ ಹಾಗೂ ಸಾಂಪ್ರದಾಯಿಕವಾಗಿ ನಡೆಯಿತು.
ಕೋವಿಡ್-19 ಭೀತಿ ಹಿನ್ನಲೆ ಸರಳವಾಗಿ ನಡೆ ರಥೋತ್ಸವಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿದ್ದ ಹಿನ್ನೆಲೆಯಲ್ಲಿ ದೇವಾಲಯ ಒಳ ಆವರಣದಲ್ಲಿ ಎಲ್ಲಾ ಧಾರ್ಮಿಕ ಕಾರ್ಯಗಳು ನಡೆಯಿತು. ದೇವಸ್ಥಾನ ಅರ್ಚಕರು, ಸಿಬ್ಬಂದಿ ಸಮ್ಮುಖದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಪೂಜಾ ಕೈಂಕರ್ಯಗಳು ನಡೆದವು.
ಮಹಾಬಲೇಶ್ವರಸ್ವಾಮಿ ರಥೋತ್ಸವದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ತೆರಳಲು ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ ವಿಧಿಸಿದ್ದ ಪರಿಣಾಮ ಬೆಟ್ಟಕ್ಕೆ ತೆರಳುವ 5 ಕಡೆಗಳಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.
ಮಾಸ್ಕ್, ಸಾಮಾಜಿಕ ಅಂತರ ಮಾಯ
ಕೊರೊನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಜಿಲ್ಲಾಡಳಿತ ಮಹಾಬಲೇಶ್ವರಸ್ವಾಮಿ ರಥೋತ್ಸವಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು. ಈ ನಡುವೆ ಬೆಟ್ಟಕ್ಕೆ ಕಡಿಮೆ ಸಂಖ್ಯೆಯಲ್ಲಿ ಭಕ್ತಾಧಿಗಳು ತೆರಳಿದ್ದರೂ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಅಡ್ಡಾಡುತ್ತಿದ್ದದು ಕಂಡುಬಂದಿತು.