'ಕಾಂಗ್ರೆಸ್ಗೆ ಅಧಿಕಾರ ಉಳಿಸಿಕೊಳ್ಳಲು ಮಾತ್ರ ಅಹಿಂದ ಬೇಕು, ಅಭಿವೃದ್ಧಿಗೆ ಬೇಡ'
ಮೈಸೂರು, ಡಿಸೆಂಬರ್ 12: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ ನಿಗಮಗಳಿಗೆ ಹಣ ಬಿಡುಗಡೆ ಮಾಡಿಲ್ಲ ಎಂದು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಆರೋಪಿಸಿದರು.
ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಸಂತಾಪ ಸಲ್ಲಿಸಿದರು. ಬಳಿಕ ಮಾತು ಮುಂದುರೆಸಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಆಗಿದೆ. ಕಾಂಗ್ರೆಸ್ ಮತ ಬ್ಯಾಂಕಿನ ಮೇಲೆ ಅಧಿಕಾರ ಮಾಡುವ ಕೆಲಸ ಮಾಡುತ್ತಿದೆ. ಬದುಕು ಕಟ್ಟಿಕೊಡುವ ಯಾವುದೇ ಯೋಜನೆಗಳು ಕಾಂಗ್ರೆಸ್ನಲ್ಲಿ ಇಲ್ಲ ಎಂದರು.

ದೂರದೃಷ್ಟಿ ಉಳ್ಳ ಯಾವುದೇ ಯೋಜನೆಗಳು ಇಲ್ಲ. ಗ್ಯಾರಂಟಿ ಯೋಜನೆ ಹಣವನ್ನು ಚುನಾವಣೆ ವೇಳೆ ಬಿಡುಗಡೆ ಮಾಡುವ ಕೆಲಸ ಮಾಡುತ್ತಿದೆ. ರಾಜಕಾರಣದಲ್ಲಿ ಅಧಿಕಾರ ಮಾಡಲು, ಅಧಿಕಾರ ಉಳಿಸಿಕೊಳ್ಳಲು ಮಾತ್ರ ಅಹಿಂದ ಬೇಕು. ಆದರೆ ಅಹಿಂದ ಸಮುದಾಯಕ್ಕೆ ಯಾವುದೇ ಯೋಜನೆಗಳನ್ನು ಜಾರಿ ಮಾಡಿಲ್ಲ ಎಂದು ಕಿಡಿಕಾರಿದರು.
ಸಿದ್ದರಾಮಯ್ಯ ಬ್ಯಾಕ್ ವರ್ಡ್ ಕ್ಲಾಸ್ನ ಚಾಂಪಿಯನ್ ಅಂತಾರೆ. ಆದರೆ ಇದುವರೆಗೂ ಹಿಂದುಳಿದ ವರ್ಗಗಳ ನಿಗಮಗಳಿಗೆ ಹಣ ಬಿಡುಗಡೆ ಮಾಡಿಲ್ಲ. ಈ ಹಿಂದೆ ಬಸವರಾಜ ಬೊಮ್ಮಾಯಿ ಸರ್ಕಾರ ಇದ್ದಾಗ 546 ಕೋಟಿ ಅನುದಾನ ವಿವಿಧ ನಿಗಮಗಳಿಗೆ ಬಿಡುಗಡೆ ಮಾಡಿತ್ತು. ಆದರೆ, ಸಿದ್ದರಾಮಯ್ಯನವರ ಸರ್ಕಾರ ಅಧಿಕಾರಕ್ಕೆ ಬಂದಾಗ ಕೇವಲ 170 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಸವಿತಾ ಸಮುದಾಯದ ಅಭಿವೃದ್ಧಿಗೆ ಕೇವಲ 2 ಕೋಟಿ ಬಿಡುಗಡೆ ಮಾಡಿದೆ ಎಂದರು.

ಹಿಂದಿನ ಸರ್ಕಾರಗಳು ಬಿಡುಗಡೆ ಮಾಡಿದಷ್ಟು ಅನುದಾನ ಬಿಡುಗಡೆ ಮಾಡಬೇಕಿತ್ತು. ಈ ಕೆಲಸವನ್ನು ಕೂಡ ಸರ್ಕಾರ ಮಾಡಿಲ್ಲ. ಈಗ ರಾಜ್ಯ ಸರ್ಕಾರದ ಬೊಕ್ಕಸ ಖಾಲಿ ಆಗಿರೋದನ್ನು ಇದು ತೋರಿಸುತ್ತದೆ. ಹಿಂದುಳಿದ ವರ್ಗಗಳ ನಿಗಮಗಳ ಬಾಗಿಲು ಮುಚ್ಚಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಗ್ಯಾರಂಟಿ ಯೋಜನೆ ಬಿಟ್ಟರೆ ಈ ಸರ್ಕಾರಕ್ಕೆ ಏನು ಕಾಣುತ್ತಿಲ್ಲ. ರಾಜ್ಯ ಸರ್ಕಾರದ ಈ ನಡೆ ಖಂಡಿಸಿ ಪ್ರಥಮ ಹಂತದಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ಮೈಸೂರಿನಲ್ಲೂ ನಾಳೆ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಹೇಳಿದರು.
ಪಂಚಮಸಾಲಿ ಸಮುದಾಯದ ಬೆಂಬಲ
ಪಂಚಮಸಾಲಿ ಸಮುದಾಯ ಹೋರಾಟ ವಿಚಾರ ಕುರಿತು ಪ್ರತಿಕ್ರಿಯಿಸಿದ ರಘು ಕೌಟಿಲ್ಯ, ಪಂಚಮಸಾಲಿ ಸಮುದಾಯದ ಹೋರಾಟಕ್ಕೆ ನಮ್ಮ ಬೆಂಬಲ ಇದೆ. ಹೋರಾಟಗಾರರ ಮೇಲಿನ ಹಲ್ಲೆ ಖಂಡಿಸುತ್ತೇವೆ ಎಂದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಮೈ.ನಾ.ಲೋಕೇಶ್, ಪಿ.ಗಿರೀಶ್, ಮಹೇಶ್ ರಾಜೇ ಅರಸ್, ಬಾಲಚಂದ್ರ, ರವಿಶಂಕರ್, ಪರಶುರಾಮಪ್ಪ, ದಯಾನಂದ ಪಟೇಲ್ ಉಪಸ್ಥಿತರಿದ್ದರು.












Click it and Unblock the Notifications