ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಯತೀಂದ್ರ ಸಿದ್ದರಾಮಯ್ಯ ಒತ್ತಾಯ
ಮೈಸೂರು, ಮಾರ್ಚ್ 02; ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಸಚಿವರ ರಾಸಲೀಲೆ ಸಿಡಿ ಮಂಗಳವಾರ ಸಂಜೆ ಬಿಡುಗಡೆಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟು ಮಾಡಿದೆ.
ರಾಸಲೀಲೆ ಸಿಡಿ ಬಹಿರಂಗವಾಗುತ್ತಿದ್ದಂತೆ ಮಾತನಾಡಿದ ವರುಣಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ, "ಸಚಿವ ರಮೇಶ್ ಜಾರಕಿಹೊಳಿ ಅವರು, ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು" ಎಂದು ಆಗ್ರಹಿಸಿದರು.
"ಈ ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ ಇಂತಹ ಪ್ರಕರಣದಲ್ಲಿ ಬಿಜೆಪಿ ಅವರು ರಾಜೀನಾಮೆ ಕೇಳಿದ್ದರು. ಇದೀಗಾ ಅವರೇ ನೈತಿಕ ಹೊಣೆ ಹೊತ್ತು ರಾಜೀನಾಮೆ ಪಡೆಯಬೇಕು" ಎಂದು ಒತ್ತಾಯಿಸಿದರು.

ನನ್ನ ಗಮನಕ್ಕೆ ಬಂದಿಲ್ಲ; ರಾಸಲೀಲೆ ಸಿಡಿ ಬಗ್ಗೆ ಮಾತನಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ, "ಈ ಪ್ರಕರಣ ತಮ್ಮ ಗಮನಕ್ಕೆ ಬಂದಿಲ್ಲ. ನಾನು ಒಂದು ಮದುವೆ ಕಾರ್ಯಕ್ರಮದಲ್ಲಿ ಇದ್ದೇನೆ. ಮಾಹಿತಿ ಪಡೆದುಕೊಂಡು ಮಾತನಾಡುತ್ತೇನೆ" ಎಂದು ಹೇಳಿದ್ದಾರೆ.
ಜಗದೀಶ್ ಶೆಟ್ಟರ್ ಹೇಳಿಕೆ; ಸಿಡಿ ಪ್ರಕರಣದ ಬಗ್ಗೆ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್, "ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ವಿವರಗಳು ಬರಲಿ, ಈ ಬಗ್ಗೆ ಈವರೆಗೂ ರಮೇಶ್ ಜಾರಕಿಹೋಳಿ ಹಾಗೂ ಆ ಹೆಣ್ಣುಮಗಳು ಏನೂ ಹೇಳಿಲ್ಲ. ಎಲ್ಲಾ ಸತ್ಯಾ ಸತ್ಯತೆ ಹೊರ ಬರಲಿ. ಆ ನಂತರ ನಾನು ಪ್ರತಿಕ್ರಿಯೆ ನೀಡುವೆ" ಎಂದರು.
ಮೈಸೂರಿನಲ್ಲಿದ್ದ ಜಾರಕಿಹೊಳಿ; ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಆಗುವ ಸಂದರ್ಭದಲ್ಲಿ ಮೈಸೂರಿನಲ್ಲಿದ್ದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಮಂಗಳವಾರ ಮೈಸೂರಿಗೆ ಆಗಮಿಸಿದ್ದ ಅವರು ಮಧ್ಯಾಹ್ನ ಚಾಮುಂಡಿಬೆಟ್ಟ, ನಂಜನಗೂಡು ಸೇರಿದಂತೆ ಹಲವು ದೇವಾಲಯಗಳಿಗೆ ಭೇಟಿ ನೀಡಿದ್ದರು.
ರಾಸಲೀಲೆ ಸಿಡಿ ಬಹಿರಂಗವಾಗುತ್ತಿದ್ದಂತೆ ಅವರು ಭದ್ರತಾ ಸಿಬ್ಬಂದಿ, ಬೆಂಗಾವಲು ಪಡೆಯನ್ನು ಬಿಟ್ಟು ಅಜ್ಞಾತ ಸ್ಥಳಕ್ಕೆ ತೆರಳಿದರು. ರಾತ್ರಿ 9ಗಂಟೆ ಸುಮಾರಿಗೆ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.












Click it and Unblock the Notifications