ಮೈಸೂರು ದಸರಾ 2020: ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಏನು?
ಮೈಸೂರು,ಅಕ್ಟೋಬರ್ 10: ಮೈಸೂರು ದಸರಾಗೆ ಸಂಬಂಧಿಸಿದಂತೆ ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಕೆಲವು ಶಿಫಾರಸು ಮಾಡಿದೆ.
ಅ.17ರಂದು ದಸರಾ ಉದ್ಘಾಟನೆಗೆ 200 ಹಾಗೂ ಅ.26ರಂದು ಜಂಬೂಸವಾರಿಗೆ 300 ಜನರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು. ಗಣ್ಯರು, ಸಿಬ್ಬಂದಿ, ಕಲಾವಿದರು ಹಾಗೂ ಭದ್ರತಾ ಸಿಬ್ಬಂದಿ ಕೂಡ ಇದರೊಳಗಿರಲಿದ್ದಾರೆ.
ಇನ್ನುಳಿದಂತೆ ಸಾರ್ವಜನಿಕರಿಗೆ ವರ್ಚುವಲ್ ಆಗಿ ವೀಕ್ಷಣೆಗೆ ಅವಕಾಶ ಮಾಡಿಕೊಡಬೇಕು ಎಂದು ಅಧ್ಯಕ್ಷ ಡಾ. ಎಂ.ಕೆ. ಸುದರ್ಶನ್ ನೇತೃತ್ವದ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ದಸರಾ ಆಚರಣೆ ಸಂದರ್ಭದಲ್ಲಿ ಸೋಂಕು ಹರಡದಂತೆ ಮುಂಜಾಗ್ರತೆ, ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸಮಿತಿ ಅಂಬಾವಿಲಾಸ ಅರಮನೆ ಹಾಗೂ ಚಾಮುಂಡಿಬೆಟ್ಟಕ್ಕೆ ನೀಡಿ ಮಾಹಿತಿ ಸಂಗ್ರಹಿಸಿದೆ.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಇತರೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಲಾಗಿದೆ.ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರು ಅ.14ರ ನಂತರ ಕೊವಿಡ್ ಪರೀಕ್ಷೆ ಮಾಡಿಸಿಕೊಂಡಿರುವ ವರದಿ ನೀಡಬೇಕು.
ಮೈಸೂರಿಗೆ ಇಂದು ಆರೋಗ್ಯ ಇಲಾಖೆ ತಾಂತ್ರಿಕ ತಜ್ಞರ ತಂಡ ಆಗಮನ
ದಸರಾ ಸಂದರ್ಭದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕೇವಲ 50 ಮಂದಿಗೆ ಅವಕಾಶ ನೀಡಬೇಕು, ಸ್ಥಳೀಯ ಕಲಾವಿದರಿಗೆ ಮಾತ್ರ ಅವಕಾಶ ನೀಡಿ ಕಾರ್ಯಕ್ರಮವನ್ನು 2 ಗಂಟೆಯ ಅವಧಿಗೆ ಸೀಮಿತಗೊಳಿಸಬೇಕು ಎಂದು ಶಿಫಾರಸು ಮಾಡಲಾಗಿದೆ.
ವಿಶ್ವವಿಖ್ಯಾತ ಮೈಸೂರು ದಸರಾ 2020ರ ಅರಮನೆ ಪಾರಂಪರಿಕ ದಸರಾ ಕಾರ್ಯಕ್ರಮಗಳ ಪಟ್ಟಿ ಸಿದ್ಧಗೊಂಡಿದೆ. ಜಿಲ್ಲಾಧಿಕಾರಿ ಕಚೇರಿಯಿಂದ ಅಧೀಕೃತ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ.
ಅಕ್ಟೋಬರ್ 17ರಂದು 7.45ರಿಂದ 8.15ರ ಶುಭ ಮುಹೂರ್ತದಲ್ಲಿ ಯದುವಂಶದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಗೆ ಕಂಕಣಧಾರಣೆ ನೆರವೇರಿಸಲಾಗುತ್ತಿದೆ.
ಬೆಳಿಗ್ಗೆ 10 ಗಂಟೆಗೆ ಕಳಸ ಪೂಜೆ ಸೇರಿ ಇತರ ಧಾರ್ಮಿಕ ಆಚರಣೆ ನಡೆಯಲಿದ್ದು, ನಂತರ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಕೊರೊನಾ ಕಾರಣಕ್ಕೆ ಖಾಸಗಿ ದರ್ಬಾರ್ ಗೆ ಮಾಧ್ಯಮಗಳಿಗೂ ನಿರ್ಬಂಧ ವಿಧಿಸಲಾಗಿದೆ.