'ಪರೀಕ್ಷೆ ಕಡಿಮೆ ಮಾಡಿದ್ದೇ ಕೋವಿಡ್ ಹರಡಲು ಕಾರಣ'- ಸಂಸದ ಪ್ರತಾಪ್
ಮೈಸೂರು, ಮೇ 27: ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದೆ. ಈ ನಡುವೆ ಈ ಬಗ್ಗೆ ಹೇಳಿಕೆ ನೀಡಿರುವ ಮೈಸೂರು ಸಂಸದ ಪ್ರತಾಪ್ ಸಿಂಹ, ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ಕಡಿಮೆ ಮಾಡಿದ್ದು ಸೋಂಕು ಹರಡಲು ಕಾರಣ ಎಂದು ಹೇಳಿದ್ದಾರೆ.
ಈ ಬಗ್ಗೆ ನಗರದಲ್ಲಿ ಹೇಳಿಕೆ ನೀಡಿದ ಸಂಸದ ಪ್ರತಾಪ್ ಸಿಂಹ, ನಾವು ಕೋವಿಡ್ ಪರೀಕ್ಷೆ ಕಡಿಮೆ ಮಾಡಬಾರದಿತ್ತು, ಮ್ಮ ಹಾಗೂ ಜನರ ನಿರ್ಲಕ್ಷ್ಯದಿಂದಾಗಿ ಜಿಲ್ಲೆಯಲ್ಲಿ ಕೋವಿಡ್ ಹರಡಿದೆ. ಇದನ್ನು ನಾನು ಮುಕ್ತವಾಗಿ ಒಪ್ಪಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
ಮೈಸೂರಿನಲ್ಲಿ ಜೂನ್ 7ರವರೆಗೆ ಸಂಪೂರ್ಣ ಲಾಕ್ಡೌನ್
ಈಗ ಗ್ರಾಮಾಂತರ ಪ್ರದೇಶಗಳಲ್ಲೂ ಕೊರೊನಾ ಹರಡಿದೆ. ಪಂಚಸೂತ್ರ ಯೋಜನೆ ಮೂಲಕ ಸೋಂಕು ನಿಯಂತ್ರಣಕ್ಕೆ ನಾವು ಕ್ರಮಕೈಗೊಂಡಿದ್ದೇವೆ ಎಂದು ಹೇಳಿದ ಸಂಸದರು, ಕೊರೊನಾ ದೃಢಪಟ್ಟ ಬಳಿಕ ಕೋವಿಡ್ ಸೆಂಟರ್ಗೆ ಬರುವುದು ಕಡ್ಡಾಯ, ಒಂದು ವೇಳೆ ಬರದಿದ್ದರೆ ನಾವೇ ಬಲವಂತವಾಗಿ ಕೋವಿಡ್ ಸೆಂಟರ್ಗೆ ಕರೆತರುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ನಾವು ಜಿಲ್ಲೆಯಲ್ಲಿ ಹೋಂ ಐಸೋಲೇಷನ್ ಅನ್ನು ಕಡ್ಡಾಯವಾಗಿ ರದ್ದು ಮಾಡುತ್ತೇವೆ. ಯಾರೇ ಆದರೂ ಸೋಂಕು ದೃಢಪಟ್ಟ ಬಳಿಕ ಕಡ್ಡಾಯವಾಗಿ ಆಸ್ಪತ್ರೆಗೆ ಬರಬೇಕು ಅಥವಾ ಕೋವಿಡ್ ಸೆಂಟರ್ಗೆ ಹೋಗಬೇಕು. ಇನ್ಮುಂದೆ ಯಾರೂ ಕೂಡಾ ಯಾವುದೇ ವಿನಾಯಿತಿ ಕೋರುವಂತಿಲ್ಲ ಎಂದು ಕೂಡಾ ಸಂಸದರು ಹೇಳಿದ್ದಾರೆ.
ಕೋವಿಡ್ ಲಸಿಕೆ ಪಡೆಯಲು ಮೈಸೂರಿನ ಹಾಡಿಯ ಜನರ ಹಿಂದೇಟು
ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಕಾರಣದಿಂದ ಮೇ 29ರಿಂದ ಜೂನ್ 7 ರವರೆಗೆ ಲಾಕ್ಡೌನ್ಗೆ ಆದೇಶಿಸಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾಡಳಿತ ಹಾಗೂ ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದರೂ ಸೋಂಕು ಪ್ರಮಾಣ ಏರಿಕೆಯಾಗಿದೆ. ಈ ಹಿನ್ನೆಲೆ ಜಿಲ್ಲೆಯ ತಹಸಿಲ್ದಾರ್, ಜಿಲ್ಲಾ ಹಾಗೂ ತಾಲ್ಲೂಕುಗಳ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರ ಅಭಿಪ್ರಾಯ ಪಡೆದು ಜಿಲ್ಲೆಯಲ್ಲಿ ಲಾಕ್ಡೌನ್ ಮಾಡಲಾಗಿದೆ.
ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲ: ಎಚ್.ವಿಶ್ವನಾಥ್
ಈ ನಡುವೆ ಜಿಲ್ಲೆಯ ಹಾಡಿಗಳಲ್ಲಿ ವಾಸಿಸುವ ಕೆಲವು ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ, ಆದರೆ ಸೋಂಕಿನ ವಿರುದ್ಧದ ಲಸಿಕೆ ಪಡೆಯಲು ಜನರು ಹಿಂದೇಟು ಹಾಕುತ್ತಿದ್ದಾರೆ ಎಂದು ವರದಿಯಾಗಿದೆ. ಮೇ 26ರ ವರದಿಯಂತೆ ಮೈಸೂರು ಜಿಲ್ಲೆಯಲ್ಲಿ 2792 ಹೊಸ ಕೋವಿಡ್ ಪ್ರಕರಣ ದಾಖಲಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 1,34,448ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 16611 ಕೋವಿಡ್ ಪ್ರಕರಣಗಳು ಸಕ್ರಿಯವಾಗಿದೆ.
(ಒನ್ಇಂಡಿಯಾ ಸುದ್ದಿ)