ಮೈಸೂರಿನ ಪ್ರವಾಸಿ ತಾಣಗಳ ಮೇಲಿದ್ದ ನಿರ್ಬಂಧ ತೆರವು
ಮೈಸೂರು, ಅಕ್ಟೋಬರ್ 17: ಮೈಸೂರು ಹಾಗೂ ಮೈಸೂರು ಸುತ್ತಮುತ್ತಲ ಪ್ರವಾಸಿ ತಾಣಗಳ ಮೇಲೆ ಪ್ರವಾಸಿಗರಿಗೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಇಂದು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಅವರು ನಿರ್ಬಂಧ ತೆರವು ಮಾಡಿರುವ ಕುರಿತು ಘೋಷಣೆ ಮಾಡಿದರು.
ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಆದೇಶದ ಮೇರೆಗೆ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ದಸರಾ ಹಬ್ಬಕ್ಕೆ ಹೆಚ್ಚು ಮಂದಿ ಪ್ರವಾಸಿಗರು ಜಿಲ್ಲೆಗೆ ಬರುತ್ತಾರೆ ಎಂಬ ಕಾರಣಕ್ಕೆ ಮೈಸೂರು ಜಿಲ್ಲಾಡಳಿತವು ಅಕ್ಟೋಬರ್ 17ರಿಂದ ನವೆಂಬರ್ 1ರವರೆಗೆ ಮೈಸೂರು ಹಾಗೂ ಮೈಸೂರಿನ ಸುತ್ತಮುತ್ತಲ ಪ್ರವಾಸಿ ತಾಣಗಳ ಮೇಲೆ ನಿರ್ಬಂಧವನ್ನು ಹೇರಿತ್ತು.

ಈ ನಿರ್ಬಂಧಕ್ಕೆ ಎಲ್ಲೆಡೆಯಿಂದಲೂ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಮೈಸೂರಿನ ಹಲವು ಸಂಘ ಸಂಸ್ಥೆಗಳು ಈ ಕುರಿತು ಮುಖ್ಯಮಂತ್ರಿಗಳಿಗೆ ಮಾಡಿದ್ದವು. ಮನವಿಗೆ ಸ್ಪಂದಿಸಿದ ಯಡಿಯೂರಪ್ಪನವರು ನಿರ್ಬಂಧ ತೆರವುಗೊಳಿಸುವಂತೆ ಸೂಚಿಸಿದ್ದಾರೆ. ಇದೀಗ ಚಾಮುಂಡಿ ಬೆಟ್ಟ, ನಂಜನಗೂಡು, ಶ್ರೀಕಂಠೇಶ್ವರ ದೇವಸ್ಥಾನ, ಅರಮನೆ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ದೊರೆತಿದ್ದು, ಎಲ್ಲಾ ಪ್ರವಾಸಿತಾಣಗಳು ಪ್ರವಾಸಿಗರಿಗೆ ಮುಕ್ತವಾಗಿವೆ. ಮಂಡ್ಯದ ರಂಗನತಿಟ್ಟು, ಕೆ.ಆರ್.ಎಸ್ ಗೂ ಪ್ರವೇಶ ಮುಕ್ತವಾಗಿದೆ.
ಈ ಕುರಿತು ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್, ʻಕೆಆರ್ಎಸ್, ಮೈಸೂರು ಮೃಗಾಲಯ, ಚಾಮುಂಡಿಬೆಟ್ಟ ಹಾಗೂ ಅರಮನೆಗೆ ಪ್ರವಾಸಿಗರನ್ನು ದಸರಾ ಮುಗಿಯುವವರೆಗೆ ಪ್ರವೇಶ ನಿರ್ಬಂಧ ಹೇರಿರುವ ಕ್ರಮವನ್ನು ಮುಖ್ಯಮಂತ್ರಿಗಳು ಹಿಂಪಡೆಯುವಂತೆ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳು ಶುಕ್ರವಾರ ಸಭೆ ನಡೆಸುವ ವೇಳೆ ಈ ಬಗ್ಗೆ ವಿವರಣೆ ಪಡೆದು, ಈ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಮಾಸ್ಕ್ಗಳನ್ನು ಧರಿಸಿ, ಸಾರ್ವಜನಿಕ ಅಂತರವನ್ನು ಕಾಪಾಡಿಕೊಂಡು ಎಲ್ಲರಿಗೂ ಪ್ರವೇಶವನ್ನು ನೀಡಲು ಸೂಚನೆ ನೀಡಿದ್ದಾರೆʼ ಎಂದು ತಿಳಿಸಿದರು.












Click it and Unblock the Notifications