ಮೈಸೂರಿನಲ್ಲಿ 16 ಕೋಟಿ ವೆಚ್ಚದ ಪೊಲೀಸ್ ತರಬೇತಿ ಶಾಲೆ ಲೋಕಾರ್ಪಣೆ
ಮೈಸೂರು, ನವೆಂಬರ್, 10; ಮೈಸೂರಿನಲ್ಲಿ ಪೊಲೀಸ್ ತರಬೇತಿ ಶಾಲೆ ಮತ್ತು ನೂತನ ಆಡಳಿತ ಕಟ್ಟಡ ಉದ್ಘಾಟನಾ ಸಮಾರಂಭವನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ನೂತನ ಕಟ್ಟಡವನ್ನು ವೀಕ್ಷಣೆ ಮಾಡಿ ಮಾತನಾಡಿದ ಅವರು, ಹಲವು ಕಟ್ಟಡಗಳು ಹಾಗೂ 16 ಕೋಟಿ ರೂಪಾಯಿ ವೆಚ್ಚದಲ್ಲಿ ಪೊಲೀಸ್ ತರಬೇತಿ ಶಾಲೆಯನ್ನು ಉದ್ಘಾಟನೆ ಮಾಡಲಾಗಿದೆ. ಒಂದೇ ವರ್ಷದಲ್ಲಿ 200 ಕೋಟಿ ವೆಚ್ಚದಲ್ಲಿ ಸುಮಾರು 117 ಹೊಸ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದರು.
ಆನ್ಲೈನ್ ಎಫ್ಐಆರ್ ಜಾರಿಗೆ ತರಲಾಗಿದೆ. ಇ ಬೀಟ್ ಸಿಸ್ಟಮ್ ಮೂಲಕ ಮೊಬೈಲ್ ನಂಬರ್ಗೆ ಎಸ್ಎಂಎಸ್ ಕಳುಹಿಸಿದರೆ ಪೊಲೀಸ್ ಇಲಾಖೆ ನಿಮಗೆ ಸಹಾಯ ಮಾಡಲಿದೆ. ಹರಿಯಾಣದಲ್ಲಿ ಎರಡನೇ ಉನ್ನತ ಮಟ್ಟದ ಅಧಿಕಾರಿಗಳ ಸಮಾವೇಶದಲ್ಲಿ ನಮ್ಮ ದೇಶದ ಕೇಂದ್ರ ಗೃಹಸಚಿವರು ರಾಜ್ಯದ ಪೊಲೀಸ್ ಇಲಾಖೆಗೆ ಅಭಿನಂದನೆ ತಿಳಿಸಿದ್ದಾರೆ. ಪೊಲೀಸ್ ಇಲಾಖೆಗೆ ಎಲ್ಲ ರೀತಿಯ ತರಬೇತಿ ನೀಡಲಾಗುತ್ತಿದೆ. ನಮಗೆ ಸವಾಲಿನ ಕೆಲಸ ಅಂದರೆ ಸೈಬರ್ ಕ್ರೈಮ್ ಪ್ರಕರಣಗಳು ಆಗಿವೆ. ಹಾಗಾಗಿ ಸೈಬರ್ ಕ್ರೈಮ್ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ವಿಶೇಷ ತರಬೇತಿ ಪಡೆದುಕೊಳ್ಳಬೇಕು. ಕಾನ್ಸ್ಟೇಬಲ್ಗಳಿಗೆ ಎಲ್ಲವೂ ಸಾಧ್ಯವಾಗಿದೆ. ದೊಡ್ಡ ದೊಡ್ಡ ಪ್ರಕರಣದಲ್ಲಿ ಕಾನ್ಸ್ಬಲ್ಗಳ ಪಾತ್ರ ಮುಖವಾಗಿರುತ್ತದೆ.

ಇಲಾಖೆಗೆ ಒಳ್ಳೆಯ ಹೆಸರು ತರಲು ಮನವಿ
ಈ ಹಿಂದೆ ಪೊಲೀಸ್ ಇಲಾಖೆಗೆ ಮಹಿಳೆಯರು ಸೇರುತ್ತಿರಲಿಲ್ಲ. ಆದರೆ ಈಗ ಎಲ್ಲ ವಿಭಾಗದಲ್ಲಿ ಮಹಿಳೆಯರು ಇದ್ದು, ಇದು ಸಂತಸ ತಂದಿದೆ. ಹಾಗೆಯೇ ಕಷ್ಟಪಟ್ಟು ಪರಿಶ್ರಮದಿಂದ ಕೆಲಸ ಮಾಡಿ ಪೊಲೀಸ್ ಇಲಾಖೆಗೆ ಒಳ್ಳೆಯ ಹೆಸರು ಕೊಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮೈಸೂರು ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್, ಪೊಲೀಸ್ ಆಯುಕ್ತರಾದ ಡಾ. ಚಂದ್ರಗುಪ್ತ, ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್ ಸೇರಿದಂತೆ ಮತ್ತತರರು ಉಪಸ್ಥಿತರಿದ್ದರು.

ಶೀಘ್ರದಲ್ಲಿಯೇ ಖಾಲಿಯಿರುವ ಹುದ್ದೆಗಳಿಗೆ ಭರ್ತಿ
ಪೊಲೀಸ್ ಇಲಾಖೆಯಲ್ಲಿ 12 ಸಾವಿರ ಹುದ್ದೆಗಳು ಖಾಲಿ ಇವೆ. ಸದ್ಯ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಶೀಘ್ರದಲ್ಲಿಯೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮೈಸೂರಿನಲ್ಲಿ ತಿಳಿಸಿದರು. ನಗರ ಪೊಲೀಸ್ ಘಟಕದಿಂದ ನಿರ್ಮಿಸಿರುವ ಹೆಬ್ಬಾಳು ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟಿಸಲಾಯಿತು. ಈ ವೇಳೆ ಮಾತನಾಡಿದ ಅವರು, ಪ್ರಸ್ತುತ ಪೊಲೀಸ್ ಇಲಾಖೆಯಲ್ಲಿ 12 ಸಾವಿರ ಹುದ್ದೆಗಳು ಖಾಲಿ ಇವೆ. ಈಗ ಐದು ಸಾವಿರ ಹುದ್ದೆಗಳ ಭರ್ತಿಗೆ ಕ್ರಮವಹಿಸಲಾಗಿದೆ.
ಬಿಜೆಪಿ ಸರ್ಕಾರ ಬರುವ ಮುನ್ನ ಪೊಲೀಸ್ ಇಲಾಖೆಯಲ್ಲಿ 35 ಸಾವಿರ ಹುದ್ದೆಗಳು ಖಾಲಿ ಇದ್ದವು. ಪ್ರತಿ ವರ್ಷ ಸಾವಿರಾರು ಖಾಲಿ ಹುದ್ದೆ ಭರ್ತಿ ಮಾಡುವ ಮೂಲಕ ಇಲಾಖೆಗೆ ಶಕ್ತಿ ತುಂಬುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಶೇಕಡಾ 49ರಷ್ಟು ಪೊಲೀಸರಿಗೆ ಸರ್ಕಾರ ವಸತಿ ಗೃಹ ವ್ಯವಸ್ಥೆ ಕಲ್ಪಿಸಿದೆ. ಒಂದು ಕೋಣೆ ಬದಲು ಎರಡು ಕೋಣೆಯ ಮನೆಗಳನ್ನು ನಿರ್ಮಿಸಿ ಕೊಡಲಾಗುತ್ತಿದೆ. 200 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದೆಲ್ಲೆಡೆ 117 ಪೊಲೀಸ್ ಠಾಣೆ ನಿರ್ಮಿಸಲಾಗಿದೆ ಎಂದರು.

ಸ್ವಂತ ಕಟ್ಟಡವಿಲ್ಲದೇ ಎದುರಾಗಿದ್ದ ಸಮಸ್ಯೆ
ನಂತರ ಶಾಸಕ ಎಲ್.ನಾಗೇಂದ್ರ ಮಾತನಾಡಿ, ಹೆಬ್ಬಾಳು ಪೊಲೀಸ್ ಠಾಣೆ ಹಲವು ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿತ್ತು. ಚಾಮರಾಜ ಕ್ಷೇತ್ರ ವ್ಯಾಪ್ತಿಯ ಕೆಲ ಪೊಲೀಸ್ ಠಾಣೆಗಳಿಗೆ ಸ್ವಂತ ಕಟ್ಟಡವಿಲ್ಲದೇ ಸಮಸ್ಯೆ ಆಗಿತ್ತು. ಇದರಿಂದ ಕರ್ತವ್ಯ ನಿರ್ವಹಿಸುವ ಪೊಲೀಸರೊಂದಿಗೆ ಸಾರ್ವಜನಿಕರಿಗೂ ಸಮಸ್ಯೆಯಾಗಿತ್ತು. ಈಗ ಹೊಸ ಕಟ್ಟಡ ನಿರ್ಮಿಸಿ ಕೊಟ್ಟಿರುವುದು ಸಂತಸ ತಂದಿದೆ ಎಂದರು.
ಈ ಸಂದರ್ಭದಲ್ಲಿ ಮೇಯರ್ ಶಿವಕುಮಾರ್, ಉಪ ಮೇಯರ್ ಡಾ.ರೂಪಾ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ ಗೌಡ, ಮೈಲ್ಯಾಕ್ ಅಧ್ಯಕ್ಷ ರಘು ಕೌಟಿಲ್ಯ, ಪಾಲಿಕೆ ಸದಸ್ಯರಾದ ಶ್ರೀನಿವಾಸ್, ಪ್ರೇಮಾ ಶಂಕರೇಗೌಡ, ಲಕ್ಷ್ಮೀ ಶಿವಣ್ಣ, ಕೆ.ವಿ.ಶ್ರೀಧರ್, ಮಾಜಿ ಪಾಲಿಕೆ ಸದಸ್ಯರಾದ ಎಂ.ಶಿವಣ್ಣ, ಮಹದೇವಪ್ಪ, ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಅರುಣ್ ಚಕ್ರವರ್ತಿ, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಡಿಸಿಪಿ ಎಂ.ಎಸ್.ಗೀತ, ಎಸಿಪಿ ಶಿವಶಂಕರ್, ಹೆಬ್ಬಾಳು ಠಾಣೆ ಇನ್ಸ್ಪೆಕ್ಟರ್ ಕೆ.ಆರ್. ಪ್ರಸಾದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ನ್ಯಾಯಾಂಗ ಬಂಧನದಲ್ಲಿರುವವರ ಸಂಖ್ಯೆ?
ಅಕ್ರಮ ನೇಮಕಾತಿ ಪ್ರಕರಣ ಸಂಬಂಧ ಸಿಐಡಿ ಅಂತಿಮ ವರದಿ ನೀಡಿದ ಮೇಲೆ ಪರೀಕ್ಷೆ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಹಿರಿಯ ಪೊಲೀಸ್ ಅಧಿಕಾರಿ ಸೇರಿದಂತೆ 107 ಜನರು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಕುರಿತಂತೆ ತನಿಖೆ ನಡೆಯುತ್ತಿದೆ. ಅಕ್ರಮ ನೇಮಕಾತಿ ಕುರಿತು ಸಿಐಡಿ ಅಂತಿಮ ವರದಿ ನೀಡುವವರೆಗೆ ಪರೀಕ್ಷೆ ನಡೆಸುವ ಪ್ರಶ್ನೆಯೇ ಇಲ್ಲ,''ಎಂದು ಸ್ಪಷ್ಟಪಡಿಸಿದರು.












Click it and Unblock the Notifications