ಮೈಸೂರು: ಕೊರೊನಾ ಸೋಂಕಿನಿಂದ ಮೃತಪಟ್ಟರೆ 5 ಲಕ್ಷ ರೂ. ಪರಿಹಾರ
ಮೈಸೂರು, ಮೇ 19: ಮಹಾನಗರ ಪಾಲಿಕೆಯ ಯಾವುದೇ ನೌಕರರು ಕೊರೊನಾ ಸೋಂಕಿನಿಂದ ಮೃತಪಟ್ಟರೆ 5 ಲಕ್ಷ ರೂ. ಪರಿಹಾರ ನೀಡಲಿದ್ದೇವೆ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪನಾಗ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾಲಿಕೆ ಆಯುಕ್ತೆ ಶಿಲ್ಪನಾಗ್, ಮೈಸೂರು ಮಹಾನಗರ ಪಾಲಿಕೆಯ 6 ಮಂದಿ ಪೌರಕಾರ್ಮಿಕರು ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ. ಈ ಪೈಕಿ ನಾಲ್ವರು ಹೋಮ್ ಐಸೋಲೇಷನ್ ನಲ್ಲಿದ್ದಾರೆ. ಉಳಿದ ಇಬ್ಬರು ಕೋವಿಡ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ ಸೋಂಕಿತರ ಬಗ್ಗೆ ಸದಾ ಕಾಳಜಿ ವಹಿಸಿ ನಿಗಾ ಇಡಲಾಗುತ್ತಿದೆ. ಫ್ರಂಟ್ ಲೈನ್ ವಾರಿಯರ್ಸ್ ಗಳಿಗೆ ಪ್ರತ್ಯೇಕ ಆಸ್ಪತ್ರೆ ಮಾಡುವ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ್ದೇವೆ ಎಂದು ಶಿಲ್ಪನಾಗ್ ಹೇಳಿದರು.
ಬ್ಲ್ಯಾಕ್ ಫಂಗಸ್ ನಿಂದ ಮೈಸೂರು ಪಾಲಿಕೆಯ ಒಬ್ಬ ಗುತ್ತಿಗೆ ಕಾರ್ಮಿಕ ಸಾವನ್ನಪ್ಪಿದ್ದಾನೆ. ನಿನ್ನೆ ಪಾಲಿಕೆಯ ಇಬ್ಬರು ಹೊರಗುತ್ತಿಗೆ ನೌಕರರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಈ ಪೈಕಿ ರವಿ ಎಂಬ ಡ್ರೈವರ್ ಮಾತ್ರ ಬ್ಲ್ಯಾಕ್ ಫಂಗಸ್ ಗೆ ಸಾವನ್ನಪ್ಪಿದ್ದಾರೆ. ಇನ್ನೊಬ್ಬ ನೌಕರ ವಿನೋದ್ ಕೋವಿಡ್ ನಿಂದ ಸಾವನ್ನಪ್ಪಿದ್ದು, ಇದರಿಂದ ಸಾಕಷ್ಟು ಬೇಸರವಾಗಿದೆ ಎಂದು ತಿಳಿಸಿದರು.
ಮೈಸೂರು ಪಾಲಿಕೆಯಲ್ಲಿ ಯಾವುದೇ ನೌಕರರು ಸೋಂಕಿನಿಂದ ಮೃತಪಟ್ಟರೆ 5 ಲಕ್ಷ ರೂ. ಪರಿಹಾರ ನೀಡಲಿದ್ದೇವೆ. ಈ ಬಗ್ಗೆ ಕಳೆದ ಬಜೆಟ್ ನಲ್ಲಿ ತೀರ್ಮಾನಿಸಲಾಗಿದೆ. ಖಾಯಂ ಪೌರ ಕಾರ್ಮಿಕರಿಗೆ ಸರ್ಕಾರದಿಂದ 30 ಲಕ್ಷ ಪರಿಹಾರ ನೀಡಲಾಗುತ್ತದೆ. ಸರ್ಕಾರ ಹಣ ಬಿಡುಗಡೆ ಮಾಡುವವರೆಗೂ ಪಾಲಿಕೆಯಿಂದ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಆಯುಕ್ತೆ ಶಿಲ್ಪನಾಗ್ ಮಾಹಿತಿ ನೀಡಿದರು.