ಮೈಸೂರು ಪಾಲಿಕೆ ನೂತನ ಮೇಯರ್ ಆಗಿ ರುಕ್ಮಿಣಿ ಮಾದೇಗೌಡ ಆಯ್ಕೆ; ಬಿಜೆಪಿಗೆ ಮುಖಭಂಗ
ಮೈಸೂರು, ಫೆಬ್ರವರಿ 24: ಭಾರೀ ಕುತೂಹಲ ಮೂಡಿಸಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಕುತೂಹಲಕ್ಕೆ ತೆರೆಬಿದ್ದಿದ್ದು, ಮೇಯರ್ ಆಗಿ ಜೆಡಿಎಸ್ ಪಾಲಿಕೆ ಸದಸ್ಯೆ ರುಕ್ಮಿಣಿ ಮಾದೇಗೌಡ ಹಾಗೂ ಉಪ ಮೇಯರ್ ಆಗಿ ಕಾಂಗ್ರೆಸ್ಸಿನ ಅನ್ವರ್ ಬೇಗ್ ಆಯ್ಕೆ ಫೈನಲ್ ಆಗಿದೆ.
ಆ ಮೂಲಕ ಒಪ್ಪಂದದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈಸೂರು ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಮುಂದುವರಿದಿದ್ದು, ಜೆಡಿಎಸ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡ (ವಾರ್ಡ್ ನಂ.36) ಪರ 43 ಮತ ಬಿದ್ದಿವೆ. ಮೈಸೂರು ಮಹಾನಗರ ಪಾಲಿಕೆ ನೂತನ ಮೇಯರ್ ಆಗಿ ರುಕ್ಮಿಣಿ ಮಾದೇಗೌಡ ಆಯ್ಕೆಯಾಗಿದ್ದಾರೆ.
ಮೈಸೂರು ಮಹಾನಗರ ಪಾಲಿಕೆ ಉಪ ಮೇಯರ್ ಆಗಿ ವಾರ್ಡ್ ನಂ 10ರ ಅನ್ವರ್ ಬೇಗ್ ಆಯ್ಕೆಯಾಗಿದ್ದಾರೆ. ಒಟ್ಟು 43 ಮತಗಳನ್ನು ಪಡೆದು ಕಾಂಗ್ರೆಸ್ ಅಭ್ಯರ್ಥಿ ಉಪ ಮೇಯರ್ ಸ್ಥಾನಕ್ಕೇರಿದರು.
ಈ ನಡುವೆ ಪಾಲಿಕೆಯ ದೊಡ್ಡ ಪಕ್ಷವೆಂದು ಗುರುತಿಸಿಕೊಂಡಿದ್ದ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಪಾಲಿಕೆ ಮೇಯರ್ ಸ್ಥಾನಕ್ಕಾಗಿ ಬಿಜೆಪಿ ನಾಯಕರು ಕೊನೆ ಕ್ಷಣದವರೆಗೂ ಭಾರೀ ಕಸರತ್ತು ನಡೆಸಿದ್ದರು. ಜೆಡಿಎಸ್ ತಮಗೆ ಬೆಂಬಲ ನೀಡಲಿದ್ದಾರೆ ಎಂದು ಭಾವಿಸಿದ್ದರು. ಆದರೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಒಂದು ಕರೆ ಇಡೀ ಚಿತ್ರಣವನ್ನೇ ಬದಲಾಯಿಸಿತು.
ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಡುವಿನ ರಾಜಕೀಯ ಗುದ್ದಾಟದಿಂದಾಗಿ ಮೈಸೂರು ಮೇಯರ್ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮುರಿದು ಬೀಳುವ ಸಾಧ್ಯತೆ ಇತ್ತು. ಆದರೆ ಮುಂಬರುವ ಕೇರಳ ವಿಧಾನಸಭೆ ಚುನಾವಣೆಯಲ್ಲಿ ತಪ್ಪು ಸಂದೇಶ ಹೋಗಬಾರದೆಂಬ ದೇವೇಗೌಡರ ರಾಜಕೀಯ ದೂರದೃಷ್ಟಿಯಿಂದ ಬಿಜೆಪಿ ಜೊತೆಗಿನ ಮೈತ್ರಿ ಮಾಡಿಕೊಳ್ಳುವ ಸ್ಥಳೀಯ ಜೆಡಿಎಸ್ ನಾಯಕರ ಯೋಚನೆ ತಲೆಕೆಳಗಾಯಿತು ಎಂದು ಹೇಳಲಾಗಿದೆ.