ಮೈಸೂರು ಜಿಲ್ಲಾಧಿಕಾರಿ ವರ್ಗಾವಣೆಗೆ ಸಾ.ರಾ ಮಹೇಶ್ ಆಕ್ರೋಶ
ಮೈಸೂರು, ಸೆಪ್ಟೆಂಬರ್ 29: ಮೈಸೂರು ಜಿಲ್ಲಾಧಿಕಾರಿ ಬಿ.ಶರತ್ ಅವರ ದಿಢೀರ್ ವರ್ಗಾವಣೆ ಬಗ್ಗೆ ಶಾಸಕ ಸಾ.ರಾ.ಮಹೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಿಲುವಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೇವಲ 29 ದಿನಗಳ ಅವಧಿಯಲ್ಲಿ ಆಂಧ್ರದ ಓರ್ವ ಹೆಣ್ಣು ಮಗಳಿಗೋಸ್ಕರ, ಕನ್ನಡಿಗ, ದಲಿತ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ. ಇದೇ ರಾಜ್ಯ ಸರ್ಕಾರದ ಅತಿದೊಡ್ಡ ಸಾಧನೆಯಾಗಿದೆ ಎಂದು ಲೇವಡಿ ಮಾಡಿದರು.
ಮೈಸೂರು ದಸರಾ ಉನ್ನತ ಮಟ್ಟದ ಮಟ್ಟದ ಸಭೆ ನಡೆದ ಬಳಿಕ, ದಸರಾ ವಿಶೇಷಾಧಿಕಾರಿಯಾಗಿರುವ ಜಿಲ್ಲಾಧಿಕಾರಿಯನ್ನೇ ವರ್ಗಾವಣೆ ಮಾಡಿರುವುದು ಇದೇ ಮೊದಲು. ಈ ಹಿಂದೆ ಯಾವ ಸರ್ಕಾರ ಕೂಡ ಮೈಸೂರು ದಸರಾ ವಿಶೇಷಾಧಿಕಾರಿಯಾಗಿರುವ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿರಲಿಲ್ಲ ಎಂದು ರಾಜ್ಯ ಸರ್ಕಾರದ ಆಡಳಿತ ವೈಖರಿಯ ವಿರುದ್ಧ ಶಾಸಕ ಸಾ.ರಾ ಮಹೇಶ್ ಟೀಕಾ ಪ್ರಹಾರ ನಡೆಸಿದರು.

ಜಿಲ್ಲಾಧಿಕಾರಿ ಬದಲಾವಣೆ ಆದ ಸಂದರ್ಭದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಕಳೆದ 29 ದಿನಗಳಿಂದ ಮೈಸೂರಿನಲ್ಲಿ ಯಾವುದೇ ಬಿಲ್ ಗಳು ಪಾಸ್ ಆಗಿರಲಿಲ್ಲ. ಕೆಲವೊಂದು ಪ್ರಕ್ರಿಯೆಗಳು ಮುಗಿದ ಬಳಿಕ ಜಿಲ್ಲಾಧಿಕಾರಿ ಬಿಲ್ ಗಳಿಗೆ ಸಹಿ ಹಾಕಬೇಕಾಗಿರುತ್ತದೆ ಎಂದರು.
ಮೈಸೂರು ದಸರಾ ಉತ್ಸವದ ಎಲ್ಲಾ ವಿಧಿಗಳು ಪೂರ್ಣಗೊಳ್ಳುವ ಸಮಯದಲ್ಲಿ ಏಕಾಏಕಿ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿದ್ದು ಸರಿಯಲ್ಲ. ಇದರಿಂದ ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ಸಮಸ್ಯೆಗಳು ಎದುರಾಗಲಿವೆ ಎಂದು ಕೆ.ಆರ್ ನಗರ ಜೆಡಿಎಸ್ ಶಾಸಕ ಸಾ.ರಾ ಮಹೇಶ್ ವಾಗ್ದಾಳಿ ನಡೆಸಿದರು.
ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದ 2009 ಬ್ಯಾಚಿನ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.












Click it and Unblock the Notifications