ಮಹಾರಾಣಿ ಕಾಲೇಜು ಕುಸಿತ: ಮೈಸೂರಿನಲ್ಲಿ ಪಾರಂಪರಿಕ ಕಟ್ಟಡ ಉಳಿಸಿ ಅಭಿಯಾನ
ಮೈಸೂರು ಅಕ್ಟೋಬರ್ 24: ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿನ ಪ್ರಯೋಗಾಲಯ ಕಟ್ಟಡ ಭಾರಿ ಮಳೆಗೆ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಮೈಸೂರಿನ ಪಾರಂಪರಿಕ ಕಟ್ಟಡವನ್ನು ಸಂರಕ್ಷಿಸಬೇಕು ಎನ್ನುವ ಕೂಗು ಕೇಳಿಬರುತ್ತಿದೆ.
ಈ ಹಿನ್ನೆಲೆಯಲ್ಲಿ ಪಾರಂಪರಿಕ ಕಟ್ಟಡವನ್ನು ಸಂರಕ್ಷಿಸಬೇಕು ಎಂದು ಒತ್ತಾಯಿಸಿ ಲೆಟ್ಸ್ ಡೂ ಇಟ್ ಮೈಸೂರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಮೇಣದ ಬತ್ತಿ ಹಿಡಿದು ಭಾನುವಾರ ಸಂಜೆ ಪ್ರತಿಭಟನೆ ನಡೆಸಿದರು.
ಮೈಸೂರು ನಗರದ ಸರಸ್ವತಿಪುರಂನಲ್ಲಿರುವ ಅಗ್ನಿಶಾಮಕ ದಳದ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಣೆ ಮಾಡುವಲ್ಲಿ ಹಾಗೂ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲು ರಾಜ್ಯ ಸರಕಾರ ಮುಂದಾಗಬೇಕು ಎಂದು ಅಗ್ರಹಿಸಿದರು.

ಈ ಪ್ರತಿಭಟನೆ ವೇಳೆ ಪಾರಂಪರಿಕ ತಜ್ಞ ಪ್ರೊ.ಎನ್.ಎಸ್. ರಂಗರಾಜು ಮಾತನಾಡಿ, "ನಗರದಲ್ಲಿ ನೂರೈವತ್ತು ವರ್ಷ ಪೂರೈಸಿದ 125 ಕಟ್ಟಡಗಳಿವೆ. ಇದರಲ್ಲಿ 25 ಕಟ್ಟಡಗಳು ಸಂಪೂರ್ಣ ಶಿಥಿಲವಾಗಿದ್ದು, ಈ ಕಟ್ಟಡಗಳು ಯಾವಾಗ ಬೇಕಾದರೂ ಕುಸಿದು ಬೀಳುವ ಸಾಧ್ಯತೆ ಇದೆ. ಆದರೆ, ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಣೆ ಮಾಡಬೇಕು ಎಂಬ ಕಾಳಜಿ ಸರಕಾರಕ್ಕೆ ಹಾಗೂ ಜನಪ್ರತಿನಿಧಿಗಳಿಗೂ ಇಲ್ಲ. ಸರ್ಕಾರಕ್ಕೆ ಕಾಳಜಿ ಇಲ್ಲದ ಮೇಲೆ ಮೈಸೂರಿಗಿರುವ ಪಾರಂಪರಿಕ ನಗರಿ ಎಂಬ ಬಿರುದನ್ನು ಸರಕಾರ ವಾಪಾಸ್ ಪಡೆಯಲಿ," ಎಂದು ಬೇಸರ ವ್ಯಕ್ತಪಡಿಸಿದರು.
ಬಳಿಕ ಮಾತನಾಡಿದ ಮೇಣದ ಬತ್ತಿ ಪ್ರತಿಭಟನೆ ಆಯೋಜಕರಾದ ಬಿ.ಎಸ್. ಪ್ರಶಾಂತ್ ಮಾತನಾಡಿ, "ಯಶವಂತಪುರಕ್ಕೆ ದಸರಾ ಟಿಕೆಟ್ಗಳನ್ನು ತೆಗೆದುಕೊಂಡು ಹೋದ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ಪಾರಂಪರಿಕ ಕಟ್ಟಡ ಉಳಿಸಲು ಮೈಸೂರಿಗೆ ಎಷ್ಟು ಅನುದಾನ ತಂದಿದ್ದಾರೆ..?" ಎಂದು ಪ್ರಶ್ನಿಸಿದರು.

ನಿನ್ನೆ(ಅಕ್ಟೋಬರ್ 23)ರಂದು ನಡೆದ ಪ್ರತಿಭಟನೆಯಲ್ಲಿ ಮೈಸೂರು ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ, ದೇವರಾಜ ಅರಸು ರಸ್ತೆಯ ವರ್ತಕರ ಸಂಘದ ಅಧ್ಯಕ್ಷ ವೀರಭದ್ರಪ್ಪಘ, ಜೆ.ಪಿ.ಅರಸ್, ಅಶೋಕ್, ಎ.ಸಿ.ರವಿ, ರವಿ ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದರು.












Click it and Unblock the Notifications