ಟಿಪ್ಪು ಜಯಂತಿ ವಿರೋಧಿಸಿ ಮೈಸೂರಲ್ಲಿ ಬಿಜೆಪಿ ಪ್ರತಿಭಟನೆ, ಬಂಧನ
ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದರೆ. ಮತ್ತೊಂದೆಡೆ ಜಿಲ್ಲಾಡಳಿತ ಟಿಪ್ಪು ಜಯಂತಿಯನ್ನು ಗುರುವಾರ ನಗರದ ಕಲಾಮಂದಿರದಲ್ಲಿ ಸರಳವಾಗಿ ಆಚರಣೆ ಮಾಡಿ ಮುಗಿಸಿದೆ.
ಮೈಸೂರು, ನವೆಂಬರ್, 10 : ಒಂದು ಕಡೆ ಟಿಪ್ಪು ಜಯಂತಿ ವಿರೋಧಿಸಿ ಮೈಸೂರಲ್ಲಿ ಸಂಸದ ಪ್ರತಾಪ ಸಿಂಹ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ಮಾಡಿತು. ಇನ್ನೊಂದೆಡೆ ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲಾಡಳಿತ ಪೊಲೀಸ್ ಬಿಗಿ ಬಂದೋಬಸ್ತ್ ನಲ್ಲಿ ಗುರುವಾರ ಕಲಾಮಂದಿರದಲ್ಲಿ ಸರಳವಾಗಿ ಟಿಪ್ಪು ಜಯಂತಿ ಆಚರಿಸಿ ಕೈತೊಳೆದುಕೊಂಡಿದೆ.
ಟಿಪ್ಪು ಜಯಂತಿಯನ್ನು ವಿರೋಧಿಸಿ ಕಪ್ಪು ಪಟ್ಟಿ ಹಿಡಿದು ಸಂಸದ ಪ್ರತಾಪ ಸಿಂಹ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಧರಣಿ ಕುಳಿತು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. [ಮಾಗಳಿ ರವಿ ಸಾವು ಖಂಡಿಸಿ ಮೈಸೂರಲ್ಲಿ ಬೃಹತ್ ಪ್ರತಿಭಟನೆ]
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ನಗರಾಧ್ಯಕ್ಷ ಡಾ.ಮಂಜುನಾಥ್, ಮಾಜಿ ಎಂಎಲ್ ಸಿ ಗೋ ಮಧುಸೂದನ್, ಮಾಜಿ ಶಾಸಕ ವಿಜಯಶಂಕರ್, ಬಿಜೆಪಿ ಮುಖಂಡರಾದ ನಂದೀಶ್ ಪ್ರೀತಂ, ಮಲ್ಲಪ್ಪಗೌಡ ಸೇರಿದಂತೆ ಸುಮಾರು ಐವತ್ತಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆ ಮಾಡಿದರು.

ಟಿಪ್ಪು ಜಯಂತಿ ಆಚರಣೆ ಸಂದರ್ಭ ಅಹಿತಕರ ಘಟನೆ ನಡೆಯಬಹುದು ಎಂಬ ಹಿನ್ನಲೆಯಲ್ಲಿ ಎಲ್ಲೆಡೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತಲ್ಲದೆ, ಅತಿ ಸೂಕ್ಷ್ಮ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಕಣ್ಗಾವಲು ಹಾಕಲಾಗಿತ್ತು.
ಇದಕ್ಕೂ ಮೊದಲು ಮಾತನಾಡಿದ ಪ್ರತಿಭಟನಾಕಾರರು ಸರ್ಕಾರ ಹಠಕ್ಕೆ ಬಿದ್ದು ಟಿಪ್ಪು ಜಯಂತಿಯನ್ನು ಆಚರಿಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಜನತೆಗೆ ಟಿಪ್ಪು ಜಯಂತಿ ಆಚರಣೆ ಬೇಕಾಗಿರಲಿಲ್ಲ.
ಓಟ್ ಬ್ಯಾಂಕ್ ಲೆಕ್ಕಚಾರದಲ್ಲಿ ತೊಡಗಿರುವ ಸರ್ಕಾರ ಟಿಪ್ಪು ಜಯಂತಿಯನ್ನು ಆಚರಿಸುತ್ತಿದೆ. ಇದಕ್ಕೆ ತಕ್ಕ ಬೆಲೆಯನ್ನು ಸರ್ಕಾರ ತೆರಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಧಿಕಾರಿ ಕಚೇರಿ ಬಳಿ ಡಿಸಿಪಿ ಡಾ.ಶೇಖರ್ ಅವರ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.












Click it and Unblock the Notifications