ಜ.21-26ರವರೆಗೆ ಸುತ್ತೂರು ಶಿವರಾತ್ರೀಶ್ವರ ಶಿವಯೋಗಿ ಜಾತ್ರಾ ಮಹೋತ್ಸವ
ಮೈಸೂರು, ಜನವರಿ 17: ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವವು ಜನವರಿ 21 ರಿಂದ 26ರವರೆಗೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯಲಿರುವುದಾಗಿ ಜಾತ್ರಾ ಮಹೋತ್ಸವದ ಪ್ರಧಾನ ಕಾರ್ಯದರ್ಶಿ ಮಂಜುನಾಥ ಅವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, "ಆರು ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ. ಜಾತ್ರೆ ಅಂಗವಾಗಿ ವಸ್ತು ಪ್ರದರ್ಶನ, ಕೃಷಿ ಮೇಳ, ಸಾಂಸ್ಕೃತಿಕ ಮೇಳ, ದೋಣಿ ವಿಹಾರ, ಸೋಬಾನೆ ಪದ ಸ್ಪರ್ಧೆ, ಕ್ಯಾನ್ಸರ್ ತಪಸಾಣೆ ಶಿಬಿರ, ಸಾಮೂಹಿಕ ವಿವಾಹ, ರಾಜ್ಯಮಟ್ಟದ ಭಜನಾ ಮೇಳ, ಜನಗಳ ಜಾತ್ರೆ, ಗಾಳಿ ಪಟ ಸ್ಪರ್ಧೆ, ಕುಸ್ತಿ ಪಂದ್ಯಾವಳಿ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮ ಆಯೋಜನೆಗೊಂಡಿವೆ" ಎಂದು ತಿಳಿಸಿದ್ದಾರೆ.
ಕೊಪ್ಪಳ ಗವಿ ಸಿದ್ದೇಶ್ವರ ಜಾತ್ರೆ; 18 ಲಕ್ಷ ಮಿರ್ಚಿ ತಯಾರಿ!
21 ರಂದು ವೀರಭದ್ರೇಶ್ವರ ಕೊಂಡೋತ್ಸವ, 22ರಂದು ಹಾಲರವೆ ಉತ್ಸವ, 23ರಂದು ಸುತ್ತೂರು ರಥೋತ್ಸವ,24ರಂದು ಲಕ್ಷ ದೀಪೋತ್ಸವ, 25ರಂದು ತೆಪ್ಪೋತ್ಸವ, 26 ರಂದು ಅನ್ನಬ್ರಹ್ಮೋತ್ಸವ ಸೇರಿದಂತೆ ಹಲವು ಧಾರ್ಮಿಕ ಕೈಂಕರ್ಯಗಳು ನಡೆಯಲಿವೆ.
ಸಿಎಂ ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಬಸವರಾಜ್ ಬೊಮ್ಮಯಿ, ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಕುಮಾರಸ್ವಾಮಿ ಸೇರಿದಂತೆ ಜನಪ್ರತಿನಿಧಿಗಳು ಭಾಗಿಯಾಗಲಿರುವುದಾಗಿ ತಿಳಿದುಬಂದಿದೆ.