ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ; ಎಚ್ಡಿಕೆ
ಮೈಸೂರು, ಡಿಸೆಂಬರ್ 4: ಜೆಡಿಎಸ್ ಅಲ್ಲ ಜೆಡಿಎಫ್ ಮಾಡಿ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ ಎಂದು ಟೀಕಿಸಿದ್ದಾರೆ.
ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಜೆಡಿಎಸ್ ಅಲ್ಲ ಜೆಡಿಎಫ್ ಪಕ್ಷ ಮಾಡಿ ಎಂದಿರುವ ಸಿದ್ದರಾಮಯ್ಯನವರಿಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಸಿದ್ದರಾಮಯ್ಯ ಮಗ ಶಾಸಕರಾಗಿದ್ದು, ಕೆಪಿಸಿಸಿ ಅಧ್ಯಕ್ಷರ ಕುಟುಂಬದ ನಾಲ್ವರು ರಾಜಕಾರಣದಲ್ಲಿದ್ದಾರೆ. ಇನ್ನು ಸಿದ್ದರಾಮಯ್ಯ ಮಗ ಅಕಾಲಿಕ ಮರಣಕ್ಕೀಡಾದರು. ಅವರು ಸಹ ಸಕ್ರಿಯ ರಾಜಕಾರಣದಲ್ಲಿದ್ದರು. ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಹಲವರು ಈ ರೀತಿ ಇದ್ದಾರೆ," ಎಂದು ತಿರುಗೇಟು ನೀಡಿದರು.
"ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದವರು ಇದಕ್ಕೆ ಕಾನೂನು ಜಾರಿ ಮಾಡಲಿ, ತಮ್ಮ ಸಾಮರ್ಥ್ಯದಿಂದ ಸಂವಿಧಾನ ತಿದ್ದುಪಡಿ ಮಾಡಲಿ. ಕುಟುಂಬದ ಎಷ್ಟು ಜನ ರಾಜಕಾರಣಕ್ಕೆ ಬರಬೇಕು ಎಂಬ ನಿಯಮ ಮಾಡಲಿ," ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದರು.
ಅಲ್ಲದೇ ಜೆಡಿಎಸ್ ಬಿಜೆಪಿಯ ಬಿ ಟೀಂ ಎದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡಿರುವ ಕುರಿತು ಮಾತನಾಡಿದ ಎಚ್ಡಿಕೆ, "ಸಿದ್ದರಾಮಯ್ಯ ತಮ್ಮ ಬಾಯಿಗೆ ಏಕೆ ಶ್ರಮ ಕೊಡುತ್ತಿದ್ದಾರೆ. ಈ ರೀತಿಯ ಒಂದು ಸ್ಲೇಟ್ ಅನ್ನು ಸಿದ್ದರಾಮಯ್ಯ ಕುತ್ತಿಗೆಗೆ ಹಾಕಿಕೊಳ್ಳಲಿ. ಅದನ್ನು ಕುತ್ತಿಗೆಗೆ ಹಾಕಿಕೊಂಡು ಓಡಾಡಲಿ. ಸುಮ್ಮನೆ ಪದೇ ಪದೇ ಈ ರೀತಿ ಹೇಳಿ ಬಾಯಿ ಏಕೆ ನೋಯಿಸಿಕೊಳ್ಳಬೇಕು," ಎಂದರು.
"2018ರಿಂದ ಇದೇ ರೀತಿ ಹೇಳಿಕೆಯನ್ನು ನೀಡುತ್ತಿದ್ದು, ಇದು ಸಿದ್ದರಾಮಯ್ಯ ಅವರಿಗೆ ತಿರುಗುಬಾಣವಾಗಲಿದೆ. ಇದರ ಪರಿಣಾಮ 2023ರಲ್ಲಿ ಜೆಡಿಎಸ್ಗೆ ಲಾಭವಾಗಲಿದೆ. ವಿಧಾನ ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ಗೆ ಸ್ವಲ್ಪ ಅನುಕೂಲವಾಗಲಿದೆ. ಬಿಜೆಪಿ ಅನುಕಂಪದ ಮತ ಜೆಡಿಎಸ್ಗೆ ಬರಲಿದೆ," ಎಂದು ಹೇಳಿದರು.
ಇನ್ನು ರಾಜ್ಯ ರಾಜಕಾರಣದಲ್ಲಿ ವೈಯಕ್ತಿಕ ಟೀಕೆ ವಿಚಾರವಾಗಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, "ಮೈಸೂರು ಸೇರಿದಂತೆ ಇತರ ಕ್ಷೇತ್ರದಲ್ಲಿ ಎಲ್ಲರ ಹೇಳಿಕೆ ನೋಡಿದ್ದೇನೆ. ವೈಯಕ್ತಿಕ ಟೀಕೆ ಅವರ ಸ್ಥಾನಕ್ಕೆ ಅಗೌರವ ತೋರುತ್ತದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ನಾನೂ ಈ ಹಿಂದೆ ಅಂತಹ ಹೇಳಿಕೆಗಳನ್ನು ಕೊಟ್ಟಿದ್ದೆ. ನನ್ನ ಅಭಿಮಾನಿಗಳು ಈ ಬಗ್ಗೆ ಚರ್ಚೆ ಮಾಡಿದ ಮೇಲೆ ನಾನು ತಿದ್ದುಕೊಂಡಿದ್ದೇನೆ. ಹೀಗಾಗಿ ವೈಯಕ್ತಿಕ ಟೀಕೆ ಯಾರಿಗೂ ಶೋಭೆ ತರಲ್ಲ. ಸದ್ಯ ನನ್ನ ಗುರಿ ಇರುವುದು 2023ರ ಚುನಾವಣೆ," ಎಂದು ತಿಳಿಸಿದರು.
ವಿಧಾನ ಪರಿಷತ್ ಚುನಾವಣೆ ಕುರಿತು ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ವಿಧಾನ ಪರಿಷತ್ ಮೈಸೂರು- ಚಾಮರಾಜನಗರ ಕ್ಷೇತ್ರದ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಮಂಜೇಗೌಡರು ಗೆದ್ದೇ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
"ಮೈಸೂರು ಹಾಗೂ ಚಾಮರಾಜನಗರದಲ್ಲಿ ಉತ್ತಮ ಪ್ರತಿಕ್ರಿಯೆ ಇದೆ. ಈ ಬಾರಿ ಜೆಡಿಎಸ್ ಅಭ್ಯರ್ಥಿಯೇ ಗೆಲ್ಲುತ್ತಾರೆ. ಈ ಬಾರಿಯ ಪರಿಷತ್ ಚುನಾವಣೆಯನ್ನು ನಮ್ಮ ಕಾರ್ಯಕರ್ತರು ಸವಾಲಾಗಿ ತೆಗೆದುಕೊಂಡಿದ್ದಾರೆ. ಹೀಗಾಗಿ ಗೆಲ್ಲುವ ವಿಶ್ವಾಸವಿದೆ," ಎಂದು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
Recommended Video