ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಬೇಡಿಕೆ ಮುಂದಿಟ್ಟ ಸಿದ್ದರಾಮಯ್ಯ!
Recommended Video

ಮೈಸೂರು, ಜುಲೈ 27 : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಕುರಿತು ಚರ್ಚೆ ನಡೆಯುತ್ತಿದೆ. ಆದರೆ, ಸೀಟುಗಳ ಹಂಚಿಕೆ ಮೈತ್ರಿ ಪಕ್ಷಗಳಿಗೆ ಕಗ್ಗಂಟಾಗಲಿದೆ. ಕೆಲವು ಕ್ಷೇತ್ರಗಳನ್ನು ಬಿಟ್ಟುಕೊಡಲು ಎರಡೂ ಪಕ್ಷಗಳು ಒಪ್ಪುವುದು ಕಷ್ಟವಾಗಿದೆ.
ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವು ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದಾರೆ. ಆ ಕ್ಷೇತ್ರಗಳನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡಲು ಅವರು ಒಪ್ಪಿಗೆ ನೀಡಲಿದ್ದಾರೆಯೇ? ಎಂದು ಕಾದು ನೋಡಬೇಕು.
ಸಿದ್ದರಾಮಯ್ಯ ಮಂಡ್ಯ ಮತ್ತು ಮೈಸೂರು ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದಾರೆ. ತಮ್ಮ ಆಪ್ತ ನಾಯಕರಿಗೆ ಟಿಕೆಟ್ ಕೊಡಿಸಿ ಗೆಲ್ಲಿಸಿಕೊಂಡು ಬರುವ ಆಲೋಚನೆಯಲ್ಲಿದ್ದಾರೆ. ಮಂಡ್ಯದ 7 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರ ನಮಗೆ ಬೇಕು ಎಂದು ಪಟ್ಟು ಹಿಡಿಯುವ ಸಾಧ್ಯತೆ ಇದೆ.
ಚಾಮರಾಜನಗರ, ಮೈಸೂರು-ಕೊಡಗು, ಮಂಡ್ಯ, ಹಾಸನ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಸೀಟು ಹಂಚಿಕೆ ವಿಚಾರದಲ್ಲಿ ಜೆಡಿಎಸ್-ಕಾಂಗ್ರೆಸ್ ನಡುವೆ ಹಗ್ಗಜಗ್ಗಾಟ ನಡೆಯುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರು ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ? ಎಂದು ಕಾದು ನೋಡಬೇಕಿದೆ...

ಸಿ.ಎಚ್.ವಿಜಯ ಶಂಕರ್ ಅಭ್ಯರ್ಥಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು-ಕೊಡಗು ಕ್ಷೇತ್ರಕ್ಕೆ ಸಿ.ಎಚ್.ವಿಜಯಶಂಕರ್ ಅವರ ಹೆಸರನ್ನು ಪ್ರಸ್ತಾಪಿಸಲಿದ್ದಾರೆ. ಹಾಲಿ ಸಂಸದ ಪ್ರತಾಪ್ ಸಿಂಹ ಅವರನ್ನು ಎದುರಿಸಲು ವಿಜಯಶಂಕರ್ ಅವರು ಸರಿಯಾದ ಅಭ್ಯರ್ಥಿ ಎಂಬುದು ಸಿದ್ದರಾಮಯ್ಯ ಅವರ ಆಲೋಚನೆಯಾಗಿದೆ.
ಕುರುಬ ಸಮುದಾಯಕ್ಕೆ ಸೇರಿದ ಸಿ.ಎಚ್.ವಿಜಯ್ ಶಂಕರ್ ಮೈಸೂರು ಭಾಗದ ಪ್ರಭಾವಿ ನಾಯಕರು. ಬಿಜೆಪಿ ನಾಯಕರು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ವಿಧಾನಸಭೆ ಚುನಾವಣೆ 2018ರ ಸಮಯದಲ್ಲಿ ಅವರು ಕಾಂಗ್ರೆಸ್ ಸೇರಿದಿದ್ದಾರೆ.

ಕಳೆದ ಬಾರಿ ಹಾಸನದಿಂದ ಸ್ಪರ್ಧೆ
ಸಿ.ಎಚ್.ವಿಜಯಶಂಕರ್ 2014ರ ಚುನಾವಣೆಯಲ್ಲಿ ಬಿಜೆಪಿಯಿಂದ ಮೈಸೂರು-ಕೊಡಗು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದರು. ಆದರೆ, ಪ್ರತಾಪ್ ಸಿಂಹ ಅವರ ಆಗಮನದಿಂದಾಗಿ ಅವರಿಗೆ ಟಿಕೆಟ್ ಕೈ ತಪ್ಪಿತ್ತು.
ಚುನಾವಣೆಯಲ್ಲಿ ಸಿ.ಎಚ್.ವಿಜಯಶಂಕರ್ ಮೈಸೂರು ಬಿಟ್ಟು ಹಾಸನದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದರು. 1,65,688 ಮತಗಳನ್ನು ಪಡೆದು 3ನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದರು. ಆದರೆ, ಈಗ ಅವರು ಬಿಜೆಪಿಯಲ್ಲಿಲ್ಲ.

ಚಾಮರಾಜನಗರ ಜೆಡಿಎಸ್ಗೆ?
ಚಾಮರಾಜನಗರ ಕ್ಷೇತ್ರವನ್ನು ಕಾಂಗ್ರೆಸ್ ಜೆಡಿಎಸ್ ಗೆ ಬಿಟ್ಟುಕೊಡಲಿದೆಯೇ? ಕಾದು ನೋಡಬೇಕು. ಕ್ಷೇತ್ರದ ಹಾಲಿ ಸಂಸದರು ಕಾಂಗ್ರೆಸ್ನ ಧ್ರುವ ನಾರಾಯಣ. ಜೆಡಿಎಸ್ ಜಿಲ್ಲೆಯಲ್ಲಿ ಸಾಕಷ್ಟು ಪ್ರಭಾವವನ್ನು ಹೊಂದಿಲ್ಲ. ಆದ್ದರಿಂದ, ಕ್ಷೇತ್ರವನ್ನು ಪಕ್ಷವೇ ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ ಎಂಬುದು ಸದ್ಯದ ಸುದ್ದಿ.
ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಹಂಚಿಕೆ ವಿಚಾರದಲ್ಲಿ ಎರಡೂ ಪಕ್ಷಗಳ ನಡುವೆ ಹಗ್ಗ-ಜಗ್ಗಾಟ ನಡೆಯುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರ ನಿರ್ಧಾರವೇ ಈ ಕ್ಷೇತ್ರದಲ್ಲಿ ಅಂತಿಮವಾಗುವ ಸಾಧ್ಯತೆ ಇದೆ.

ಬಿಜೆಪಿಗೆ ಮೈತ್ರಿ ಭಯ
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 20+ ಸ್ಥಾನಗಳಲ್ಲಿ ಜಯಗಳಿಸಬೇಕು ಎಂಬುದು ಬಿಜೆಪಿಯ ಗುರಿಯಾಗಿದೆ. ಆದರೆ, ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಪಕ್ಷಕ್ಕೆ ಹಿನ್ನಡೆ ಉಂಟಾಗುವ ಆತಂಕವಿದೆ. ಪಕ್ಷ ಮೈಸೂರನ್ನು ಉಳಿಸಿಕೊಳ್ಳಬೇಕು ಎಂದು ಪ್ರಯತ್ನ ನಡೆಸುತ್ತಿದೆ.
ಹಾಲಿ ಸಂಸದರು
* ಮೈಸೂರು-ಕೊಡಗು ಪ್ರತಾಪ್ ಸಿಂಹ (ಬಿಜೆಪಿ)
* ಚಾಮರಾಜನಗರ - ಧ್ರುವ ನಾರಾಯಣ (ಕಾಂಗ್ರೆಸ್)
* ಮಂಡ್ಯ - ಸಿ.ಎಸ್.ಪುಟ್ಟರಾಜು ರಾಜೀನಾಮೆ ಬಳಿಕ ತೆರವು
* ಬೆಂಗಳೂರು ಗ್ರಾಮಾಂತರ - ಡಿ.ಕೆ.ಸುರೇಶ್ (ಕಾಂಗ್ರೆಸ್)
* ತುಮಕೂರು - ಮುದ್ದ ಹನುಮೇಗೌಡ (ಕಾಂಗ್ರೆಸ್)












Click it and Unblock the Notifications