ಮೈಸೂರಿಗೆ ಕಾಂಗ್ರೆಸ್ ಟಿಕೆಟ್ ಕೊಡಲು ಷರತ್ತು ಹಾಕಿದ ಸಿದ್ದರಾಮಯ್ಯ
ಮೈಸೂರು, ಮಾರ್ಚ್ 02: ಲೋಕಸಭಾ ಚುನಾವಣೆಯಲ್ಲಿ ಮೈಸೂರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಸಿದ್ದರಾಮಯ್ಯ ಅವರು ಷರತ್ತೊಂದನ್ನು ಹಾಕಿದ್ದಾರೆ.
ನಿನ್ನೆ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಂದಿಗಿನ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವಿಧಾನಸಭೆಯಲ್ಲಿ ನನಗೆ ಸೋಲಾಗಿದೆ. ಆ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಲೀಡ್ ಕೊಡಿಸುವುದಾಗಿ ಭರವಸೆ ನೀಡಿದರೆ ಮಾತ್ರವೇ ಮೈಸೂರಿಗೆ ಕಾಂಗ್ರೆಸ್ ಟಿಕೆಟ್ ಕೊಡಿಸುವ ಯತ್ನ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕಾರ್ಯಕರ್ತರೆಲ್ಲಾ ಸೇರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಲೀಡ್ ಕೊಡಿಸಿ, ಒಟ್ಟಾರೆಯಾಗಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಡುವುದಾಗಿ ಭರವಸೆ ನೀಡಿದರೆ ಮಾರ್ಚ್ 04ರಂದು ನಡೆಯುವ ಸೀಟು ಹಂಚಿಕೆ ಸಭೆಯಲ್ಲಿ ಚರ್ಚೆ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು-ಕೊಡಗು ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದಿಲ್ಲ
ಮೈಸೂರು-ಕೊಡಗು ಕ್ಷೇತ್ರವನ್ನು ಒಮ್ಮೆಯೂ ಜೆಡಿಎಸ್ ಗೆದ್ದಿಲ್ಲ ಎಂದು ಸಿದ್ದರಾಮಯ್ಯ ಈ ಕಾರಣಕ್ಕಾದರೂ ಮೈಸೂರು-ಕೊಡಗಿಗೆ ಕಾಂಗ್ರೆಸ್ ಅಭ್ಯರ್ಥಿಯೇ ಕಣಕ್ಕಿಳಿಯಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

'ಜೆಡಿಎಸ್ನಲ್ಲಿದ್ದಾಗಲೇ ಸೋತಿದ್ದೆ'
ತಾವೇ ಲೋಕಸಭೆ ಚುನಾವಣೆಗೆ ಮೈಸೂರು-ಕೊಡಗು ಭಾಗದಿಂದ ಸ್ಪರ್ಧಿಸಿ ಎಂದು ಸಿದ್ದರಾಮಯ್ಯ ಅವರನ್ನು ಕಾರ್ಯಕರ್ತರನ್ನು ಒತ್ತಾಯ ಮಾಡಿದರು. ಆದರೆ ಅದನ್ನು ನಿರಾಕರಿಸಿದ ಅವರು ನಾನು ಜೆಡಿಎಸ್ ನಲ್ಲಿದ್ದಾಗ ಒಮ್ಮೆ ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದೆ ಎಂದರು.

ಲೋಕಸಭಾ ಚುನಾವಣೆಗೆ ಸ್ಪರ್ಧೆ ಇಲ್ಲ: ಸಿದ್ದರಾಮಯ್ಯ
ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಈಗಾಗಲೇ ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು. ಈ ಹಿಂದೆಯೂ ಅವರನ್ನು ಬೇರೆ ಬೇರೆ ಕ್ಷೇತ್ರಗಳಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಕಾರ್ಯಕರ್ತರು ಕೇಳಿದ್ದರು ಆದರೆ ಸಿದ್ದರಾಮಯ್ಯ ಅವರು ಚುನಾವಣೆಗೆ ಸ್ಪರ್ಧಿಸಿರಲಿಲ್ಲ.

ಚಾಮುಂಡೇಶ್ವರಿಯಲ್ಲಿ ಸೋತಿದ್ದ ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಅವರು ಜೆಡಿಎಸ್ನ ಜಿ.ಟಿ.ದೇವೇಗೌಡ ಅವರ ವಿರುದ್ಧ ಭಾರಿ ಅಂತರದಿಂದ ಸೋಲನ್ನಪ್ಪಿದ್ದರು. ಆ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳಬೇಕು ಎಂಬ ಕಾರಣದಿಂದ ಚಾಮುಂಡೇಶ್ವರಿಯಲ್ಲಿ ಲೀಡ್ ಕೊಡಿಸಲು ಕಾರ್ಯಕರ್ತರ ಬಳಿ ಷರತ್ತು ಹಾಕಿದ್ದಾರೆ.












Click it and Unblock the Notifications