ಒಂದು ಸಾವಿರ ಜನಕ್ಕೆ ಸೀಮಿತವಾಗಿ ಪಂಚಲಿಂಗ ದರ್ಶನ
ಬೆಂಗಳೂರು, ನ. 25: ಒಂದು ಸಾವಿರ ಜನಕ್ಕೆ ಸೀಮಿತಗೊಳಿಸಿ, ಸರಳವಾಗಿ ಪಂಚಲಿಂಗ ದರ್ಶನ ಮಹೋತ್ಸವ ನಡೆಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮೈಸೂರು ಜಿಲ್ಲೆ ತಿ. ನರಸೀಪುರ ತಾಲ್ಲೂಕಿನ ತಲಕಾಡಿನಲ್ಲಿ ನಡೆದ ಪಂಚಲಿಂಗ ದರ್ಶನ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, ಪಂಚಲಿಂಗ ದರ್ಶನದ ಹಿನ್ನೆಲೆ ಅಗತ್ಯವಿರುವ ಕೆಲಸಗಳನ್ನು ಈಗ ತುರ್ತಾಗಿ ಕೈಗೊಳ್ಳಬೇಕು. ತಲಕಾಡು ಅಭಿವೃದ್ಧಿಗೆ ಬೇಕಾಗುವ ಶಾಶ್ವತ ಕೆಲಸಗಳನ್ನು ನಂತರ ಕೈಗೆತ್ತುಕೊಳ್ಳಿ. ಈಗ ತಯಾತುರಿಯಲ್ಲಿ ಮಾಡುವುದು ಬೇಡ ಎಂದು ಹೇಳಿದರು.
ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಮಾತನಾಡಿ, ಪಂಚಲಿಂಗ ದರ್ಶನ ಮಹೋತ್ಸವಕ್ಕೆ 2.2 ಕೋಟಿ ರೂ. ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಜಿಲ್ಲಾಡಳಿತ ಸರ್ಕಾರಕ್ಕೆ ಸಲ್ಲಿಸಿದೆ. ಈ ವೆಚ್ಚವನ್ನು ಮರುಪರಿಶೀಲಿಸಿ ಸಲ್ಲಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದರು.

ಬರುವ ಡಿಸೆಂಬರ್ 14 ರಂದು ಪಂಚಲಿಂಗ ದರ್ಶನ ಮಹೋತ್ಸವ ನಡೆಸಲು ತೀರ್ಮಾನ ಮಾಡಲಾಗಿದೆ. ಪಂಚಲಿಂಗ ಸಮೂಹ ದೇವಸ್ಥಾನಗಳಾದ ವೈದ್ಯನಾಥೇಶ್ವರ, ಪಾತಾಳೇಶ್ವರ, ಮರಳೇಶ್ವರ, ಅರ್ಕೆಶ್ವರ, ಮುಡುಕುತೊರೆ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನಗಳಲ್ಲಿ ಪಂಚಲಿಂಗ ದರ್ಶನ ಮಹೋತ್ಸವ ನಡೆಯಲಿದೆ.

ಮುಜರಾಯಿ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಎಸ್.ಎ.ರಾಮದಾಸ್, ಎಂ.ಅಶ್ವಿನ್ ಕುಮಾರ್, ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಂ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ. ರಿಷ್ಯಂತ್, ಜಿಲ್ಲಾ ಪಂಚಾಯತ್ ಸಿಇಒ ಡಿ.ಭಾರತಿ, ಪ್ರಾದೇಶಿಕ ಆಯುಕ್ತರಾದ ಪ್ರಕಾಶ್ ಇನ್ನಿತರರು ಇದ್ದರು.












Click it and Unblock the Notifications