ನಾರಾಯಣಗೌಡ ಮೇಲೆ ಚಪ್ಪಲಿ ಎಸೆತ: ಜೆಡಿಎಸ್ ಕಾರ್ಯಕರ್ತರ ಬಂಧನ
ಮೈಸೂರು, ನವೆಂಬರ್ 19: ಬಿಜೆಪಿ ಅಭ್ಯರ್ಥಿ 'ಅನರ್ಹ' ನಾರಾಯಣಗೌಡ ಮೇಲೆ ಚಪ್ಪಲಿ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪೇಟೆ ಪೊಲೀಸರು ನಾಲ್ವರು ಜೆಡಿಎಸ್ ಕಾರ್ಯಕರ್ತರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದ್ದಾರೆ.
ನಿನ್ನೆ (ಸೋಮವಾರ) ನಾರಾಯಣಗೌಡ ಅವರು ಬಿಜೆಪಿ ಅಭ್ಯರ್ಥಿಯಾಗಿ ಕೆ.ಆರ್.ಪೇಟೆ ಕ್ಷೇತ್ರ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಆಗಮಿಸುವ ವೇಳೆ ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರು ಅವರ ಮೇಲೆ ಚಪ್ಪಲಿ ಎಸೆದಿದ್ದರು.
ಈ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿದ್ದ ಕೆ.ಆರ್.ಪೇಟೆ ಪೊಲೀಸರು ಇಂದು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ನಂತರ ಬಿಡುಗಡೆ ಮಾಡಿದ್ದಾರೆ. ಈ ಪ್ರಕರಣ ಸಂಬಂಧ ಇನ್ನೂ ಕೆಲವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ನಿನ್ನೆ ಚಪ್ಪಲಿ ತೂರಿದ ಘಟನೆ ನಡೆದ ನಂತರ ಸ್ಥಳದಲ್ಲಿ ಸಾಕಷ್ಟು ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ನಾರಾಯಣಗೌಡ ಅವರನ್ನು ಪೊಲೀಸರು ರಕ್ಷಿಸಿ ತಮ್ಮ ವಾಹನದಲ್ಲಿ ಕರೆದುಕೊಂಡು ಹೋಗಿದ್ದರು.
ಜೆಡಿಎಸ್ ಶಾಸಕರಾಗಿ ಆಯ್ಕೆ ಆಗಿದ್ದ ನಾರಾಯಣಗೌಡ ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಈಗ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದು ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರನ್ನು ಕೆರಳಿಸಿದ್ದು, ನಾರಾಯಣಗೌಡ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ್ದರು.
ಕೆ.ಆರ್.ಪೇಟೆಯ ಪ್ರಸ್ತುತ ಜೆಡಿಎಸ್ ಅಭ್ಯರ್ಥಿಯ ಕುಮ್ಮಕ್ಕಿನಿಂದಲೇ ಜೆಡಿಎಸ್ ಕಾರ್ಯಕರ್ತರು ತಮ್ಮ ಮೇಲೆ ಚಪ್ಪಲಿ ಎಸೆದಿದ್ದಾರೆ. ಜೆಡಿಎಸ್ ನಡೆಸುತ್ತಿರುವ ಪ್ರತಿಭಟನೆಗಳಿಗೂ ಜೆಡಿಎಸ್ ಅಭ್ಯರ್ಥಿ ಬಿ.ಎಲ್.ದೇವರಾಜ್ ಕಾರಣ ಎಂದು ನಾರಾಯಣಗೌಡ ಆರೋಪಿಸಿದ್ದಾರೆ.












Click it and Unblock the Notifications