MUDA Case: 3.16 ಎಕರೆ ಜಾಗದ ಮರುದಾಖಲೀಕರಣಕ್ಕೆ ಸ್ನೇಹಮಯಿ ಕೃಷ್ಣ ಮನವಿ
ಮುಡಾ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಬೆನ್ನಲ್ಲೇ ದೂರುದಾರ ಸ್ನೇಹಮಯಿ ಕೃಷ್ಣ ಲೋಕಾಯುಕ್ತ ಪೊಲೀಸರಿಗೆ ವಿಶೇಷ ಮನವಿ ಮಾಡಿದ್ದಾರೆ. ಬಡವಾಣೆ ನಿರ್ಮಾಣವಾಗಿರುವ ಬಗ್ಗೆ ಫೋಟೊ, ವಿಡಿಯೋ ದಾಖಲೀಕರಣ ಮಾಡಿ ತನಿಖೆಗೆ ಸೇರಿಸಿಕೊಳ್ಳಬೇಕು ಎಂದು ಕೇಳಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರಿಗೆ ಸೇರಿದ್ದು ಎನ್ನಲಾದ 3.16 ಎಕರೆ ಸ್ವತ್ತಿನ ಮಹಜರು ನಡೆಸುವ ಸಂದರ್ಭ ಗಿಡಗಂಟಿಗಳು ಬೆಳೆದುಕೊಂಡಿದ್ದರಿಂದ, ರಸ್ತೆ, ಒಳಚರಂಡಿ ಮತ್ತು ಉದ್ಯಾನಗಳನ್ನು ನಿರ್ಮಾಣ ಮಾಡಿರುವ ಕುರುಹುಗಳು ಸ್ಪಷ್ಟವಾಗಿ ಕಾಣಿಸಲಿಲ್ಲ. ಹಾಗಾಗಿ ಜಾಗದ ಮರು ದಾಖಲೀಕರಣ ಆಗಬೇಕೆಂದು ಒತ್ತಾಯಿಸಿದ್ದಾರೆ.

ಫೋಟೊ, ವಿಡಿಯೋದಲ್ಲಿ ಗಿಡಗಳನ್ನು ಬೆಳೆದಿರುವುದನ್ನೇ ಆಧಾರವಾಗಿಟ್ಟುಕೊಂಡು, ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ಈ ಜಮೀನಿನಲ್ಲಿ ಬಡಾವಣೆ ನಿರ್ಮಾಣದ ಕುರುಹುಗಳಿಲ್ಲ ಎಂದು ಹೇಳುವ ಮೂಲಕ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಹಾಗಾಗಿ ಈ ಜಾಗದಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ತೆರವು ಮಾಡಿ ಅಲ್ಲಿ ಬಡಾವಣೆ ನಿರ್ಮಾಣವಾಗಿರುವ ಬಗ್ಗೆ ಫೋಟೊ, ವೀಡಿಯೊ ದಾಖಲೀಕರಣ ಮಾಡಿ ತನಿಖೆಗೆ ಸೇರಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಸಿಎಂ ಪತ್ನಿ ಪಾರ್ವತಿ ಅವರಿಗೆ ಸೇರಿದ ಕೆಸರೆ ಗ್ರಾಮದ 3.16 ಎಕರೆ ಸ್ವತ್ತಿನಲ್ಲಿ ಬೆಳೆದುಕೊಂಡಿರುವ ಗಿಡಗಂಟಿಗಳನ್ನು ತೆರವುಗೊಳಿಸಿ, ಮತ್ತೊಮ್ಮೆ ದಾಖಲೀಕರಣ ಮಾಡಬೇಕು. ಜಿ.ಕುಮಾರ್ನಾಯಕ್ ಅವರನ್ನು ಮತ್ತೊಮ್ಮೆ ವಿಚಾರಣೆಗೊಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಪತ್ನಿ ವಿಚಾರಣೆ
ಮುಡಾ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದರು. ಸತತ 4 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ ಎಂದು ವರದಿಯಾಗಿದೆ. ಈ ಸಂದರ್ಭದಲ್ಲಿ ಸೈಟು ಹಂಚಿಕೆಗೆ ಸಂಬಂಧಿಸಿದಂತೆ ಸಾಕಷ್ಟು ಪ್ರಶ್ನೆಗಳನ್ನು ಲೋಕಾಯುಕ್ತ ಪೊಲೀಸರು ಕೇಳಿದ್ದು, ಪಾರ್ವತಿ ಅವರು ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದಾರೆ ಎನ್ನಲಾಗಿದೆ.
ನಿವೃತ್ತ ಐಎಎಸ್ ಅಧಿಕಾರಿ ವಿಚಾರಣೆ
ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿವೃತ್ತ ಐಎಎಸ್ ಅಧಿಕಾರಿಯನ್ನು ಕೂಡ ವಿಚಾರಣೆ ಮಾಡಲಾಗಿದೆ. ನಿವೃತ್ತ ಐಎಎಸ್ ಅಧಿಕಾರಿ ಎಸ್.ಪಾಲಯ್ಯ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ಮಾಡಿದ್ದಾರೆ. 2004-05ರಲ್ಲಿ ಮೈಸೂರಿನ ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಕೆಲ ಕಾಲ ಮುಡಾದ ಆಯುಕ್ತರಾಗಿ ಪಾಲಯ್ಯ ಸೇವೆ ಸಲ್ಲಿಸಿದ್ದರು. ಪಾರ್ವತಿ ಅವರ ಸಹೋದರ ಕೆಸರೆ ಗ್ರಾಮದಲ್ಲಿ ಖರೀದಿ ಮಾಡಿದ್ದ ಜಮೀನು ಪರಭಾರೆ, ಖಾತೆ ಸೇರಿದಂತೆ ಹಲವು ಕಡತಗಳಿಗೆ ಪಾಲಯ್ಯ ಅಪರ ಜಿಲ್ಲಾಧಿಕಾರಿ ಕರ್ತವ್ಯ ನಿರ್ವಹಿಸಿದ್ದ ವೇಳೆ ಸಹಿ ಮಾಡಿದ್ದರಿಂದ ಅವರನ್ನು ವಿಚಾರಣೆ ಮಾಡಲಾಗಿದೆ.












Click it and Unblock the Notifications