'ಎಲ್ಲವೂ ಕ್ಲೈಮ್ಯಾಕ್ಸ್ ಹಂತ ತಲುಪಿದೆ, ಕಾದು ನೋಡಿ' ಎಂದ ಸಚಿವ ಸಾರಾ ಮಹೇಶ್
ಮೈಸೂರು, ಫೆಬ್ರವರಿ 4 : ಹಿಂದೆ ಹೇಳಿದಂತೆ ಬಿಜೆಪಿಯ ಕೆಲವು ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಎಲ್ಲವೂ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ನೀವೇ ಕಾದು ನೋಡಿ ಎಂದು ಹೇಳುವ ಮೂಲಕ ಸಚಿವ ಸಾರಾ ಮಹೇಶ್ ಹೊಸ ಬಾಂಬ್ ಸಿಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ನಾಯಕರಿಗೆ ಕೇಂದ್ರದ ನಾಯಕರು ತಿಳಿ ಹೇಳಬೇಕು. ನಾವು ಅಧಿಕಾರ ಸ್ವೀಕಾರ ಮಾಡಿದ್ದನಿಂದಾಗಲೂ ಬಿಜೆಪಿ ಅಧಿಕಾರದ ದಾಹದಿಂದ ನಮಗೆ ತೊಂದರೆ ಕೊಡುತ್ತಿದೆ. ಈಗ ಕೊನೆಯ ಪ್ರಯತ್ನಕ್ಕೆ ಮುಂದಾಗಿದ್ದಾರೆ. ರಾಜ್ಯದ ಜನರು ಇದೆಲ್ಲವನ್ನು ನೋಡುತ್ತಿದ್ದಾರೆ. ಬಿಜೆಪಿ ಇಂತಹ ಅಸಹ್ಯ ರಾಜಕಾರಣ ಮಾಡಬಾರದು ಎಂದ ಅವರು, ಹಿಂದೆ ಹೇಳಿದಂತೆ ಬಿಜೆಪಿಯ ಕೆಲ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಎಲ್ಲವೂ ಕ್ಲೈಮ್ಯಾಕ್ಸ್ ಹಂತ ತಲುಪಿದೆ ಕಾದು ನೋಡಿ ಎಂದರು.
ಬಿಜೆಪಿ ನಾಯಕರು ಕೆಲವರನ್ನು ಅಧಿವೇಶನಕ್ಕೆ ಬಾರದಂತೆ ತಡೆಯಲು ಮುಂದಾಗಿದ್ದಾರೆ. ಬಿಜೆಪಿ ಕೆಲ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರಿಗೆ ಹಣ ಹಾಗೂ ಮಂತ್ರಿ ಸ್ಥಾನದ ಅಮಿಷವೊಡ್ಡಿದೆ. ಬಿಜೆಪಿ ಅವರು ಹೇಗೆ ಶಾಸಕರನ್ನು ಮಂತ್ರಿ ಮಾಡುತ್ತಾರೋ ಗೊತ್ತಿಲ್ಲ. ಆಪರೇಷನ್ ಕಮಲದ ಬಗ್ಗೆ ನಾವು ಸಿಎಂ ಕುಮಾರಸ್ವಾಮಿ ಗಮನಕ್ಕೆ ತಂದಿದ್ದೇವೆ. ಖುದ್ದು ಶಾಸಕರೇ ಬಿಜೆಪಿ ಅವರು ತಮ್ಮನ್ನು ಸಂಪರ್ಕಿಸಿರುವ ಬಗ್ಗೆ ಸಿಎಂಗೆ ತಿಳಿಸಿದ್ದಾರೆ ಎಂದರು.

ಕೆ.ಆರ್.ಎಸ್.ನಲ್ಲಿ ಡಿಸ್ನಿಲ್ಯಾಂಡ್ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ ಇದರಿಂದ ಹಿಂದೆ ಸರಿಯುವ ಮಾತೇ ಇಲ್ಲ. ಬಜೆಟ್ ನಲ್ಲಿ ಡಿಸ್ನಿಲ್ಯಾಂಡ್ ವಿಚಾರ ಪ್ರಸ್ತಾಪ ಆಗಿಲ್ಲ. ಇದಕ್ಕೆ ಕೆಲವು ಕಡೆಯಿಂದ ವಿರೋಧ ವ್ಯಕ್ತವಾಗಿದೆ.ಇದಕ್ಕೆ ಸಂಬಂಧಿಸಿದಂತೆ ಅವರಿಗೆ ಮನವರಿಕೆ ಮಾಡಲಾಗುವುದು. ಯಾವುದೇ ಕಾರಣಕ್ಕೂ ಇದನ್ನು ಕೈ ಬಿಡುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದರು.












Click it and Unblock the Notifications