ಪಕ್ಷದಲ್ಲಿ ಒಂದೇ ಒಂದು ಪರ್ಸೆಂಟ್ ಒಡಕಿಲ್ಲ; ಎಸ್.ಟಿ.ಸೋಮಶೇಖರ್
ಮೈಸೂರು, ಮೇ 29: ಸರ್ಕಾರದ ಯೋಜನೆಗಳ ಬಗ್ಗೆ ಶಾಸಕರಾದವರು ತಾವೇ ಮುಂದಡಿ ಇಟ್ಟರೆ ಬೇಗ ಕೆಲಸಗಳಾಗುತ್ತವೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
Recommended Video
ಪಿರಿಯಾಪಟ್ಟಣ ತಾಲೂಕಿನ ಕಣಗಾಲು ಗ್ರಾಮದ ಕಾವೇರಿ ನದಿ ಮೂಲದಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಇಂದು ಚಾಲನೆ ನೀಡಿ ಮಾತನಾಡಿದ ಅವರು, ನೀರಾವರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಸಹಕಾರ ನೀಡುತ್ತಿದ್ದಾರೆ. ಹಾಗಾಗಿ ಈ ಕ್ಷೇತ್ರದ ಅಭಿವೃದ್ಧಿ ಕೆಲಸಕ್ಕೆ ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು. ಸಂಸದರಾದ ಪ್ರತಾಪ್ ಸಿಂಹ ಅವರು ಒಳ್ಳೇ ಕೆಲಸಗಾರ. ತಮ್ಮ ಕ್ಷೇತ್ರ ಹಾಗೂ ಮೈಸೂರಿಗೆ ಬೇಕಾದ ಕೆಲಸವನ್ನು ಮಾಡಿಸಿಕೊಂಡು ಬರುತ್ತಿದ್ದಾರೆ. ಇಂತಹ ಸಂಸದರು ಸಿಗುವುದು ಅಪರೂಪ. ಇನ್ನು ಜಿಲ್ಲಾಧಿಕಾರಿ ಸಹಿತ ಎಲ್ಲ ಜನಪ್ರತಿನಿಧಿಗಳು ಕೋವಿಡ್-19 ನಿಯಂತ್ರಣಕ್ಕೆ ಶ್ರಮಿಸಿದ್ದಾರೆ ಎಂದು ಪ್ರಶಂಸಿಸಿದರು.

"ಪರಿಷತ್ತಿನ ಸ್ಥಾನಕ್ಕೆ ಲಾಬಿ ಸಹಜ"
ಆಯಾ ಜಿಲ್ಲೆಗಳಲ್ಲಿ ಪಕ್ಷಕ್ಕೆ ದುಡಿದವರು ಪರಿಷತ್ತಿನ ಸ್ಥಾನಕ್ಕಾಗಿ ಲಾಬಿ ಮಾಡುವುದು ಸಹಜ. ಪಕ್ಷದಲ್ಲಿ ಒಂದೇ ಒಂದು ಪರ್ಸೆಂಟ್ ಸಹ ಒಡಕಿಲ್ಲ. ಮುಖ್ಯಮಂತ್ರಿಗಳು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಅಂತಿಮವಾಗಿ ಯಾರಿಗೆ ಸ್ಥಾನ ನೀಡಬೇಕೆಂದು ನಿರ್ಧರಿಸುತ್ತಾರೆ ಎಂದು ಸಚಿವರು ತಿಳಿಸಿದರು.

ಮೇ 31ರ ನಂತರ ಹಲವು ವಿಷಯಗಳ ತೀರ್ಮಾನ
ಮೇ 31ರ ಬಳಿಕ ದೇವಸ್ಥಾನ, ಮಾಲ್ ಗಳ ಪ್ರಾರಂಭ ಸೇರಿದಂತೆ ಇನ್ನಿತರ ಚಟುವಟಿಕೆ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡ ನಂತರ ರಾಜ್ಯ ಸರ್ಕಾರವು ಯಾವುದಕ್ಕೆ ಅನುಮತಿ ನೀಡಬೇಕು ಎಂಬುದನ್ನು ನಿರ್ಧರಿಸುತ್ತದೆ ಎಂದು ಸಚಿವರು ತಿಳಿಸಿದರು. ಸಂಸದರಾದ ಪ್ರತಾಪ್ ಸಿಂಹ ಮಾತನಾಡಿ, "ಎಲ್ಲರ ಮನವಿಗೆ ಸ್ಪಂದಿಸುವ ಗುಣವನ್ನು ಉಸ್ತುವಾರಿ ಸಚಿವರು ಹೊಂದಿದ್ದಾರೆ. ಅವರಿಗೆ ಅಪಾರ ಕಾಳಜಿ ಇದೆ ಎಂದರು. ಈ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದ ಸುತ್ತಮುತ್ತಲಿನ 15 ಗ್ರಾಮಗಳಿಗೆ ಅನುಕೂಲವಾಗುತ್ತಿದೆ. ಇದಕ್ಕೆ ಕಾರಣರಾದ ಎಲ್ಲರಿಗೂ ಧನ್ಯವಾದಗಳು ಎಂದರು.

ಹೊರಗಿನಿಂದ ಬಂದವರಿಂದಲೇ ಸೋಂಕು
ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ನಿಯಂತ್ರಣಕ್ಕೆ ಬಂದಿದ್ದವು. ಆದರೆ, ಪುನಃ ಸೋಂಕು ಕಾಣಿಸಿಕೊಂಡಿರುವುದು ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯದಿಂದ ಬಂದವರಿಂದ. ಹೀಗಾಗಿ ಅಂಥವರನ್ನು ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೆ, ಅಲ್ಲಿಂದ ಬರುವವರಲ್ಲೇ ಹೆಚ್ಚು ಸೋಂಕು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿ, ಹೊರ ರಾಜ್ಯಗಳಿಂದ ಬರುವವರಿಗೆ ತಾತ್ಕಾಲಿಕವಾಗಿ ತಡೆ ನೀಡಿ ಆದೇಶಿಸಲಾಗಿದೆ ಎಂದು ತಿಳಿಸಿದರು.

"ಮುಖ್ಯಮಂತ್ರಿಗಳ ತೀರ್ಮಾನವೇ ಅಂತಿಮ"
ಕಣಗಾಲು ಗ್ರಾಮದ 66/11 ಕೆವಿ ಸಾಮರ್ಥ್ಯದ ಉಪ ವಿದ್ಯುತ್ ಕೇಂದ್ರವನ್ನು ಸಚಿವ ಎಸ್.ಟಿ.ಸೋಮಶೇಖರ್ ಇಂದು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, "ಮೈಸೂರಿನ ಬಿಜೆಪಿ ಪ್ರಮುಖ ನಾಯಕರು ಹಾಗೂ ಮಾಜಿ ಸಚಿವರಾದ ಎಚ್. ವಿಶ್ವನಾಥ್ ಸೇರಿದಂತೆ, ಎಂಟಿಬಿ ನಾಗರಾಜ್, ಜಿ.ಶಂಕರ್ ಎಲ್ಲರ ಬಗ್ಗೆಯೂ ಸ್ಥಾನ ನೀಡುವಂತೆ ನಾನು ಹಾಗೂ ಗೆಳೆಯರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಮುಖ್ಯಮಂತ್ರಿಗಳ ನಿರ್ಧಾರವೇ ಅಂತಿಮ. ಸಾಮಾಜಿಕ, ವಿಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೂ ಸಚಿವ ಸ್ಥಾನ ದೊರೆಯಲಿದೆ" ಎಂದು ತಿಳಿಸಿದರು.











Click it and Unblock the Notifications