ಆರ್ಥಿಕವಾಗಿ ಹಿಂದುಳಿದವರಿಗೆ ಉದ್ಯಮ ಸ್ಥಾಪಿಸಲು ಸಬ್ಸಿಡಿ: ಸಚಿವ ಮುರುಗೇಶ್ ನಿರಾಣಿ

ಮೈಸೂರು, ಏಪ್ರಿಲ್ 28: ಆರ್ಥಿಕವಾಗಿ ಹಿಂದುಳಿದ ವರ್ಗದವರು ಉದ್ಯಮ ಸ್ಥಾಪಿಸಲು ಅನುಕೂಲವಾಗುವಂತೆ ಕೆಐಎಡಿಬಿಯಿಂದ ಕೈಗಾರಿಕಾ ನಿವೇಶನಕ್ಕೆ ಶೇಕಡಾ 75ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಗುರುವಾರ "ಉದ್ಯಮಿಯಾಗು ಉದ್ಯೋಗ ನೀಡು' ಕಾರ್ಯಕ್ರಮ ಉದ್ಘಾಟಿಸಿ ಮುರುಗೇಶ್ ನಿರಾಣಿ ಮಾತನಾಡಿದರು.

"ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉದ್ದಿಮೆಶೀಲರಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ (ಕೆಐಎಡಿಬಿ)ಯಿಂದ ಕೈಗಾರಿಕೆ ನಿವೇಶನಕ್ಕೆ ಶೇಕಡಾ 75ರಷ್ಟು ರಿಯಾಯಿತಿ ನೀಡಲಾಗುತ್ತದೆ. ಅದೇ ರೀತಿ ಆರ್ಥಿಕವಾಗಿ ಹಿಂದುಳಿದವರಿಗೂ ಶೇ.75ರಷ್ಟು ರಿಯಾಯಿತಿ ನೀಡಲಾಗುವುದು,'' ಎಂದು ಹೇಳಿದರು.

 ಆರಂಭದಿಂದ ಕೊನೆಯವರೆಗೆ ಎಲ್ಲ ರೀತಿಯ ಸಹಕಾರ

ಆರಂಭದಿಂದ ಕೊನೆಯವರೆಗೆ ಎಲ್ಲ ರೀತಿಯ ಸಹಕಾರ

"ಮೈಸೂರು ಅಲ್ಲದೇ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮಂಡ್ಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸುಮಾರು 5000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಬಹಳ ಸಂತಸದ ವಿಚಾರ. ಕಾರ್ಯಕ್ರಮಕ್ಕೆ ನೋಂದಣಿ ಮಾಡಿಕೊಂಡಿರುವವರ ಪೈಕಿ ಉದ್ಯಮ ಸ್ಥಾಪಿಸುವ ಆಸಕ್ತಿ ತೋರುವವರಿಗೆ ಅವರ ಆಯ್ಕೆಯ ಕ್ಷೇತ್ರದಲ್ಲಿ ಒಂದು ತಿಂಗಳವರೆಗೆ ವಿಶೇಷ ತರಬೇತಿ ನೀಡಲಾಗುತ್ತದೆ. ಬ್ಯಾಂಕ್‌ ಲೋನ್‌, ಪ್ರಾಜೆಕ್ಟ್‌ ರಿಪೋರ್ಟ್ ಸಲ್ಲಿಸುವವರೆಗೆ ಆರಂಭದಿಂದ ಕೊನೆಯವರೆಗೆ ಎಲ್ಲ ರೀತಿಯ ಸಹಕಾರ ಒದಗಿಸಲಾಗುವುದು,'' ಎಂದು ಕೈಗಾರಿಕಾ ಸಚಿವರು ಭರವಸೆ ನೀಡಿದರು.

"ಬೇರೆಯವರ ಕೈ ಕೆಳಗೆ ನೀವು ದುಡಿಯಬೇಕಿಲ್ಲ. ಛಲ ಬಿಡದೆ ಸಾಧಿಸಿದರೆ ನೀವೇ ಉದ್ಯಮ ಸ್ಥಾಪಿಸಿ ಇತರರಿಗೆ ಕೆಲಸ ಕೊಡಬಹುದು. ಈ ಕಾರ್ಯಕ್ರಮದಲ್ಲಿ ಉದ್ಯಮಿಗಳಾಗುವುದು ಹೇಗೆ? ಎಲ್ಲಿ ಮತ್ತು ಹೇಗೆ ಸಾಲ ಸೌಲಭ್ಯ ದೊರೆಯುತ್ತದೆ? ಯಾವ ಯಾವ ಕ್ಷೇತ್ರಗಳಲ್ಲಿ ಹೂಡಿಕೆಗೆ ಅವಕಾಶ ಇದೆ ಎಂಬುದನ್ನು ತಜ್ಞರು ವಿವರಿಸಿದ್ದಾರೆ. ಉದ್ದಿಮೆ ಸ್ಥಾಪಿಸಲು ಹಣ ಮುಖ್ಯವಲ್ಲ. ಸಾಧಿಸುವ ಛಲ, ಗುರಿ ಇರಬೇಕು. ಅದಕ್ಕೆ ಪೂರಕವಾಗಿ ನಮ್ಮ ಇಲಾಖೆಯಿಂದ ಎಲ್ಲ ಅಗತ್ಯ ಮಾರ್ಗದರ್ಶನ ನೀಡಲು ಸಿದ್ಧ. ಮುಂದಿನ ದಿನಗಳಲ್ಲಿ ಕರಾವಳಿ ಹಾಗೂ ಬೆಂಗಳೂರಿನ ಕಂದಾಯ ವಿಭಾಗ 2ರಲ್ಲಿ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ,'' ಎಂದು ಹೇಳಿದರು.

ಬಂಡವಾಳ ಹೂಡಿಕೆಗೆ ಉತ್ತಮ ವಾತಾವರಣ

ಬಂಡವಾಳ ಹೂಡಿಕೆಗೆ ಉತ್ತಮ ವಾತಾವರಣ

"ಬೆಂಗಳೂರು ನಗರದಂತೆಯೇ ರಾಜ್ಯದ ಎರಡನೇ ಹಾಗೂ ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹಾಗೂ ಬಂಡವಾಳ ಹೂಡಿಕೆಗೆ ಉತ್ತಮ ವಾತಾವರಣ ನಿರ್ಮಾಣವಾಗಿದೆ. ನೂತನ ಕೈಗಾರಿಕಾ ನೀತಿಯಲ್ಲಿ ಸಾಕಷ್ಟು ವಿಶೇಷ ಅನುಕೂಲಗಳನ್ನು ಮಾಡಲಾಗಿದೆ. ಹೂಡಿಕೆ ಮಾಡುವ ಕೈಗಾರಿಕೆಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡಲಿದೆ,'' ಎಂದರು.

"ನಮ್ಮವರೇ ಆದ ಇನ್ಫೋಸಿಸ್‌ನ ಶ್ರೀಮತಿ ಸುಧಾ ನಾರಾಯಣಮೂರ್ತಿ, ಏಕಸ್ ಅರವಿಂದ್‌ ಮೆಳ್ಳಗೇರಿ, ಉದ್ಯಮಿ ವಿದ್ಯಾ ಮರಕುಂಬಿ ಮುಂತಾದವರೇ ನಮಗೆ ಪ್ರೇರಣೆಯಾಗಬೇಕು. ಮೈಸೂರು ಸಂಸ್ಥಾನದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ರಾಜ್ಯದ ಇತಿಹಾಸದಲ್ಲಿ ಅಭಿವೃದ್ಧಿಗೆ ಹೊಸ ವ್ಯಾಖ್ಯಾನ ಬರೆದವರು. ಆಗಿನ ಕಾಲದಲ್ಲೇ ಪ್ರಾಂತ್ಯವಾರು ಕೈಗಾರಿಕೆಗಳಿಗೆ ಆದ್ಯತೆ ನೀಡಿದ್ದು, ಮಹಾರಾಜರ ದೂರದೃಷ್ಟಿಯ ಪ್ರತೀಕ. ಹಾಗಾಗಿ ನನ್ನ ಪಾಲಿಗೆ ಅವರೇ 'ರೋಲ್‌ ಮಾಡಲ್‌' ಹಾಗಾಗಿಯೇ ಇಂದು ನಾನು 21 ಕಾರ್ಖಾನೆ ಸ್ಥಾಪಿಸಿ 72 ಸಾವಿರ ಮಂದಿಗೆ ಉದ್ಯೋಗ ನೀಡಿದ್ದೇನೆ,'' ಎಂದರು.

ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ

ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ

"ವಿದೇಶಿ ನೇರ ಹೂಡಿಕೆಯಲ್ಲಿ ಒಟ್ಟು ಶೇ.42ರಷ್ಟು ಹೂಡಿಕೆಯನ್ನು ಆಕರ್ಷಿಸುವ ಮೂಲಕ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. 2021-2022ರ ಹಣಕಾಸು ವರ್ಷದಲ್ಲಿ ಸತತ ಎರಡು ತ್ರೈಮಾಸಿಕಗಳಲ್ಲಿ, ಕರ್ನಾಟಕವು ದೇಶದಲ್ಲೇ ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಆಕರ್ಷಿಸಿದೆ ಎಂಬುದು ಹೆಮ್ಮೆಯ ವಿಷಯ," ಎಂದರು.

ಕಾರ್ಯಕ್ರಮದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವರಾದ ಎಂಟಿಬಿ ನಾಗರಾಜ್, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಲ್‌. ನಾಗೇಂದ್ರ, ಮೈಸೂರಿನ ಚೇಂಬರ್‌ ಆಫ್‌ ಕಾರ್ಮಸ್‌ನ ಅಧ್ಯಕ್ಷರಾದ ಲಿಂಗರಾಜು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಎನ್‌. ಶಿವಶಂಕರ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ (ಎಂಎಸ್‌ಎಂಇ ಮತ್ತು ಪಿಪಿ) ಅಪರ ನಿರ್ದೇಶಕ ಎಚ್‌.ಎಂ. ಶ್ರೀನಿವಾಸ್‌, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಉಪಸ್ಥಿತರಿದ್ದರು.

ಉದ್ಯಮಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಇತ್ಯರ್ಥ

ಉದ್ಯಮಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಇತ್ಯರ್ಥ

ಉದ್ಯಮಿಗಳ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕೈಗಾರಿಕಾ ಇಲಾಖೆಯು ಬೆಳಗಾವಿ ವಿಭಾಗದಲ್ಲಿ ಗುರುವಾರ "ಕೈಗಾರಿಕಾ ಅದಾಲತ್' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. "ಕೈಗಾರಿಕಾ ಅದಾಲತ್ ಮೂಲಕ ಸರ್ಕಾರವೇ ಉದ್ಯಮಿಗಳ ಮನೆ ಬಾಗಿಲಿಗೆ ಹೋಗಿ ಉದ್ಯಮಿಗಳ ಸಮಸ್ಯೆ ಆಲಿಸಿ, ಸಮಸ್ಯೆ ಇತ್ಯರ್ಥ ಪಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಿದೆ,'' ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

"ಜಿಲ್ಲೆಯಿಂದ ನಾನಾ ಇಲಾಖೆಗಳಿಗೆ ಸಂಬಂಧಿಸಿದ ಒಟ್ಟು 39 ಅರ್ಜಿಗಳು ಬಂದಿದ್ದವು. ಈಗಾಗಲೇ ಕೆಲವರ ಸಮಸ್ಯೆಗೆ ಪರಿಹಾರ ಸೂಚಿಸಲಾಗಿದೆ. ಇನ್ನು ಕೆಲವು ಅರ್ಜಿಗಳ ಕುರಿತು ಕೈಗಾರಿಕಾ ಅದಾಲತ್‌ನಲ್ಲಿ ನೇರವಾಗಿ ಉದ್ಯಮಿಗಳ ಜತೆ ಚರ್ಚಿಸಿ, ಪರಿಹಾರ ಸೂಚಿಸಲಾಗಿದೆ," ಎಂದರು.

ವಿದ್ಯುತ್‌ ಸರಬರಾಜು ಕಂಪನಿ, ಪೌರಾಡಳಿತ ಇಲಾಖೆ, ನಗರಾಭಿವೃದ್ಧಿ ಇಲಾಖೆ, ನಗರ ಯೋಜನಾ ಇಲಾಖೆ, ಕಾರ್ಮಿಕ ಇಲಾಖೆ, ಕಾರ್ಖಾನೆ ಮತ್ತು ಬಾಯ್ಲರ್‌ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ ಮುಂತಾದ ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ ವಹಿಸಲಾಗುತ್ತದೆ ಎಂದು ಸಚಿವರು ಭರವಸೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+