ಶ್ರೀರಾಮುಲುಗೆ ಡಿಸಿಎಂ ಪಟ್ಟ ನೀಡುವಂತೆ ಮೈಸೂರಿನಲ್ಲಿ ಪ್ರತಿಭಟನೆ
ಮೈಸೂರು, ಆಗಸ್ಟ್ 28: ನೂತನ ಸರ್ಕಾರದಲ್ಲಿ ಸಚಿವ ಬಿ.ಶ್ರೀರಾಮುಲು ಅವರಿಗೆ ಕೊನೇ ಕ್ಷಣದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಕೈತಪ್ಪಿರುವುದು ಅವರ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆ, ಸಚಿವ ಶ್ರೀರಾಮುಲುಗೆ ಕೂಡಲೇ ಆ ಸ್ಥಾನ ನೀಡುವಂತೆ ಮೈಸೂರಿನಲ್ಲಿ ವಾಲ್ಮೀಕಿ ಸಮುದಾಯದಿಂದ ಪ್ರತಿಭಟನೆ ನಡೆಯಿತು.
ರಾಮುಲು ವಿರುದ್ಧ ಡಿಕೆಶಿ ರಣಕಹಳೆ, ಬಳ್ಳಾರಿಯಲ್ಲಿ ಬೃಹತ್ ಸಮಾವೇಶ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಮಾಯಿಸಿದ ವಾಲ್ಮಿಕಿ ಸಮುದಾಯದ ನಾಯಕರು, ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಷ್ಟ್ರಿಯ ಸಂಘಟನಾ ಕಾರ್ಯದರ್ಶಿ ಸಂತೋಷ್ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು. ಬಿಜೆಪಿ ಹೈಕಮಾಂಡ್ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಶ್ರೀರಾಮುಲು ಹಾಗೂ ರಾಜುಗೌಡರ ಭಾವಚಿತ್ರ ಹಿಡಿದು ಘೋಷಣೆ ಕೂಗಿದರು.
ಸಿಎಂ ಯಡಿಯೂರಪ್ಪ ಅವರು ವಾಲ್ಮೀಕಿ ಜನಾಂಗಕ್ಕೆ ಅನ್ಯಾಯವೆಸಗುತ್ತಿದ್ದಾರೆ. ರಾಮುಲುರವರಿಗೆ ಡಿಸಿಎಂ ಪಟ್ಟ ನೀಡದೆ ದ್ರೋಹ ಮಾಡಿದ್ದಾರೆ. ಈ ಕೂಡಲೇ ಅವರಿಗೆ ಉತ್ತಮ ಸ್ಥಾನವನ್ನು ನೀಡಬೇಕು ಎಂದು ಆಗ್ರಹಿಸಿದರು.