ಪ್ರೊ.ಮಾನೆ ವಿರುದ್ಧದ ಕಿರುಕುಳ ಪ್ರಕರಣ: ಹೈಕೋರ್ಟ್ ನಿಂದ ಬಂತು ಖಡಕ್ ಆದೇಶ
ಮೈಸೂರು, ಜನವರಿ 10: ಮೈಸೂರು ವಿಶ್ವವಿದ್ಯಾನಿಲಯದ ಪ್ರಭಾರ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದ ಸಾರ್ವಜನಿಕ ಆಡಳಿತ ವಿಭಾಗದ ಪ್ರೊ.ದಯಾನಂದ ಮಾನೆ ವಿರುದ್ಧ ಬಂದಿರುವ ಲೈಂಗಿಕ ಕಿರುಕುಳ ಆರೋಪ ಪ್ರಕರಣದ ತನಿಖೆಯನ್ನು ಆರು ವಾರಗಳಲ್ಲಿ ಪೂರ್ಣಗೊಳಿಸುವಂತೆ ಉಚ್ಚ ನ್ಯಾಯಾಲಯ ನಿರ್ದೇಶಿಸಿದೆ.
ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಏಕಸದಸ್ಯ ಪೀಠ ದಯಾನಂದ ಮಾನೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿತು. ತನಿಖೆಯನ್ನು ಆರು ವಾರಗಳಲ್ಲಿ ಪೂರ್ಣಗೊಳಿಸಿ ಎಂದು ರಾಜ್ಯ ಸರ್ಕಾರ ಮತ್ತು ಮೈಸೂರು ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಿ ವಿಚಾರಣೆಯನ್ನು ಮುಂದೂಡಿತು.
ಮೈಸೂರು ವಿವಿ ಹಂಗಾಮಿ ಕುಲಪತಿಗೆ ಲೇಡಿಸ್ ಹಾಸ್ಟೇಲ್ ನಲ್ಲೇನು ಕೆಲಸ?!
ವಿಚಾರಣೆಯ ವೇಳೆ ಅರ್ಜಿದಾರರ ಪರ ವಕೀಲ ಎಸ್.ರೂಪೇಶ್ ಕುಮಾರ್ ವಾದ ಮಂಡಿಸಿ, ಅರ್ಜಿದಾರರನ್ನು 2018ರ ಸೆಪ್ಟೆಂಬರ್ 3ರಂದು ವಿಶ್ವವಿದ್ಯಾನಿಲಯದ ಸಾರ್ವಜನಿಕ ಆಡಳಿತ ವಿಭಾಗದ ಮುಖ್ಯಸ್ಥರ ಹುದ್ದೆಯಿಂದ ತೆಗೆದುಹಾಕಲಾಗಿದೆ. ವಿಶ್ವವಿದ್ಯಾನಿಲಯ ಹೊರಡಿಸಿದ ಈ ಆದೇಶವನ್ನು ರದ್ದುಗೊಳಿಸಬೇಕೆಂದು ನ್ಯಾಯಪೀಠವನ್ನು ಕೋರಿತ್ತು. ಇದಕ್ಕೆ ನ್ಯಾಯಪೀಠ ಪ್ರತಿಕ್ರಿಯಿಸಿ ನೀಡಿದ ಸಮಯದಲ್ಲಿ ತನಿಖೆ ಪೂರ್ಣಗೊಳಿಸುವಂತೆ ಆದೇಶಿಸಿತು.
2016ರಲ್ಲಿ ಅನಾಮಧೇಯ ಪತ್ರವೊಂದರಲ್ಲಿ ದಯಾನಂದ ಮಾನೆ ವಿರುದ್ಧ ಸಂಶೋಧನಾ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವನ್ನು ಹೊರಿಸಲಾಗಿತ್ತು. ಇದರ ಆಧಾರದ ಮೇಲೆ ವಿಶ್ವವಿದ್ಯಾನಿಲಯ ದೂರು ಸಮಿತಿ ತನಿಖೆ ನಡೆಸಿ ವರದಿ ಸಲ್ಲಿಸಿತ್ತು. ಆರೋಪಗಳನ್ನು ರುಜುವಾತುಪಡಿಸುವ ಸಾಕ್ಷ್ಯಗಳಿಲ್ಲದ ಕಾರಣ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಮಿತಿ ವರದಿಯನ್ನು ತಿರಸ್ಕರಿಸಿತು.