ವೈಭವದ ಸುತ್ತೂರು ಶಿವರಾತ್ರೀಶ್ವರ ಜಾತ್ರೆಯೊಳಗೊಂದು ಸುತ್ತು...
ಮೈಸೂರು, ಜನವರಿ 21: ಸುತ್ತೂರು ಕ್ಷೇತ್ರದಲ್ಲಿ ಆದಿಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಇಂದಿನಿಂದ ಇದೇ 26ರವರೆಗೆ ನಡೆಯಲಿದ್ದು, ಈಗಾಗಲೇ ಕ್ಷೇತ್ರ ಜಾತ್ರೆಗೆ ಸಂಪೂರ್ಣ ಸಿದ್ಧಗೊಂಡಿದೆ. ಎಲ್ಲೆಡೆ ಸಡಗರ ಸಂಭ್ರಮ ಮನೆ ಮಾಡಿದೆ. ಜಾತ್ರೆಯಲ್ಲಿ ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಬಿಂಬಿಸುವ ಸಲುವಾಗಿಯೇ ಹೊರರಾಜ್ಯದ ಲಕ್ಷಾಂತರ ಮಂದಿ ಆಗಮಿಸಿದ್ದಾರೆ.
ಆರು ದಿನಗಳ ಕಾಲ ನಡೆಯುವ ಜಾತ್ರೆಯಲ್ಲಿ ಹಲವಾರು ಕಾರ್ಯಕ್ರಮಗಳು ಜನರ ಮನ ಸೆಳೆಯಲಿವೆ. ಜಾತ್ರೆಯ ಆರಂಭ ದಿನವಾದ ಇಂದು ವೀರಭದ್ರೇಶ್ವರ ಕೊಂಡೋತ್ಸವ, 23ರಂದು ರಥೋತ್ಸವ, 24ರಂದು ಮಹದೇಶ್ವರ ಕೊಂಡೋತ್ಸವ, 25 ರಂದು ತೆಪ್ಪೋತ್ಸವಗಳ ಜೊತೆಗೆ ಲಕ್ಷದೀಪೋತ್ಸವ, ಹಾಲ್ಹರವಿ ಉತ್ಸವ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು, ವೈವಿಧ್ಯಮಯ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಕ್ರೀಡಾಚಟುವಟಿಕೆಗಳು ನಡೆಯಲಿವೆ.
700ಕ್ಕೂ ಹೆಚ್ಚು ತಂಡಗಳು ಭಾಗವಹಿಸುವ ನಿರೀಕ್ಷೆ
ಜ.22ರಂದು ಕರ್ತೃ ಗದ್ದುಗೆಯಲ್ಲಿ ಶ್ರೀ ನಂಜುಂಡೇಶ್ವರ, ನಂದಿ ಹಾಗೂ ವಿನಾಯಕ ಮೂರ್ತಿಗಳ ಪುನರ್ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಈ ವರ್ಷ 28ನೇ ರಾಜ್ಯಮಟ್ಟದ ಭಜನಾ ಮತ್ತು ಏಕತಾರಿ ಸ್ಪರ್ಧೆ ನಡೆಯಲಿದೆ. ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಸುಮಾರು 700ಕ್ಕೂ ಹೆಚ್ಚು ಪುರುಷ, ಮಹಿಳಾ, ಮಕ್ಕಳ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ಒಟ್ಟು ಏಳು ವಿಭಾಗಗಳಲ್ಲಿ ಈ ಸ್ಪರ್ಧೆ ನಡೆಯಲಿದ್ದು, ಪ್ರತಿ ವಿಭಾಗಕ್ಕೂ ಪ್ರತ್ಯೇಕ ಬಹುಮಾನ ನೀಡಲಾಗುತ್ತದೆ.
ಜ.21-26ರವರೆಗೆ ಸುತ್ತೂರು ಶಿವರಾತ್ರೀಶ್ವರ ಶಿವಯೋಗಿ ಜಾತ್ರಾ ಮಹೋತ್ಸವ
ಕೃಷಿ ಮೇಳದ ಆಯೋಜನೆ
ಕೃಷಿ ಹಾಗೂ ಕೃಷಿಗೆ ಸಂಬಂಧಿಸಿದ ತಾಂತ್ರಿಕತೆ ಬಗ್ಗೆ ರೈತರಿಗೆ ಮಾಹಿತಿ ನೀಡಲು ಕೃಷಿ ಮೇಳ ಆಯೋಜಿಸಲಾಗಿದೆ. ಸಮಗ್ರ ಬೆಳೆ ನಿರ್ವಹಣೆ, ವೈವಿಧ್ಯಮಯ ಬೆಳೆಗಳ ಪ್ರಾತ್ಯಕ್ಷಿಕೆ, ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಹಾಗೂ ಮಾರಾಟದ ವ್ಯವಸ್ಥೆ ಮಾಡಲಾಗಿದೆ. ಹನಿ ನೀರಾವರಿಯಲ್ಲಿ ಭತ್ತ ಬೆಳೆಯುವ ಪ್ರಾತ್ಯಕ್ಷಿಕೆ, ಒಂದು ಎಕರೆಯಲ್ಲಿ ಕೃಷಿ ಬ್ರಹ್ಮಾಂಡ ಪ್ರದರ್ಶನ, ಸಿರಿ ಧಾನ್ಯಗಳು, ದ್ವಿದಳ ಧಾನ್ಯಗಳ ವಿವಿಧ ತಳಿಗಳ ಪ್ರದರ್ಶನವಿರುತ್ತದೆ. ಅತಿ ಹೆಚ್ಚು ಸಸಾರಜನಕ, ಶರ್ಕರ, ಪಿಷ್ಟ ಹಾಗೂ ನಾರು ಹೊಂದಿರುವ ವಿದೇಶಿ ಬೆಳೆಗಳಾದ ಚಿಯಾ ಮತ್ತು ಟೆಫ್ ಗಳ ಪ್ರದರ್ಶನವಿರುತ್ತದೆ. ಹಸು, ಕುರಿ, ಮೇಕೆ, ಕೋಳಿಗಳ ದೇಸಿ ತಳಿಗಳ ಪ್ರದರ್ಶನವೂ ನಡೆಯುತ್ತಿದೆ.
22ಕ್ಕೆ ಉಚಿತ ಸಾಮೂಹಿಕ ವಿವಾಹ
ಜ.22ರಂದು ಜಾತಿ-ಮತ ಭೇದವಿಲ್ಲದೆ ಸರ್ವಧರ್ಮಗಳ ಉಚಿತ ಸಾಮೂಹಿಕ ವಿವಾಹ ಹಾಗೂ ಜ.24ರಂದು ಸಾವಯವ ಕೃಷಿ ಮತ್ತು ಜಲ ವೈಜ್ಞಾನಿಕ ಬಳಕೆ ಕುರಿತು ಕೃಷಿ ವಿಚಾರ ಸಂಕಿರಣ, ಜ.25ರಂದು 40ನೇ ರಾಷ್ಟ್ರಮಟ್ಟದ ನಾಡ ಕುಸ್ತಿ ಪಂದ್ಯಗಳು ನಡೆಯಲಿವೆ. ಇನ್ನು ಜನರ ಮನರಂಜನೆಗಾಗಿ ಜಾತ್ರೆಯ ಎಲ್ಲ ದಿನಗಳಲ್ಲಿಯೂ ದೋಣಿ ವಿಹಾರವಿದೆ.
ಜಾತ್ರೆಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ
ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುವ ಸಮಸ್ತ ಭಕ್ತರಿಗೆ ಪ್ರತಿನಿತ್ಯ ಬೆಳಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಮಹಾ ದಾಸೋಹ ಸೇರಿದಂತೆ ಐದು ಕಡೆಗಳಲ್ಲಿ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ವಿಐಪಿ, ವಿವಿಐಪಿ, ಸ್ವಯಂ ಸೇವಕರು, ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಸ್ವಚ್ಛತೆಗೆ ಆದ್ಯತೆ ನೀಡುವ ಉದ್ದೇಶದಿಂದ ಪ್ಲಾಸ್ಟಿಕ್ ಬಳಕೆ ನಿಷೇಧಿಸಿದ್ದು, ರಾಜಸ್ಥಾನದಿಂದ 46 ಸಾವಿರ ಸ್ಟೀಲ್ ತಟ್ಟೆಗಳನ್ನು ತರಿಸಲಾಗಿದೆ. ಪ್ರಸಾದ ವಿತರಿಸುವ ಸ್ಥಳಗಳಲ್ಲಿ ಸಿಸಿ ಟಿವಿಗಳನ್ನು ಅಳವಡಿಸಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ದೂರದಿಂದ ಬರುವವರಿಗೆ ತಾತ್ಕಾಲಿಕ ಕುಟೀರಗಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಜಾತ್ರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.