ಲೋಕಸಭಾ ಚುನಾವಣೆಯಲ್ಲಿ ಸ್ವರಾಜ್ ಇಂಡಿಯಾ ಅಭ್ಯರ್ಥಿಗಳು ಕಣಕ್ಕೆ
ಮೈಸೂರು, ಫೆಬ್ರವರಿ 19: ಈ ಬಾರಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಅಥವಾ ಮಂಡ್ಯ, ಉತ್ತರ ಕರ್ನಾಟಕ ಭಾಗದಿಂದ ಕೊಪ್ಪಳ ಅಥವಾ ರಾಯಚೂರಿನಿಂದ ಸ್ವರಾಜ್ ಇಂಡಿಯಾ ಪಕ್ಷ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲಿ ಪಾಟೀಲ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೂ ಲೋಕಸಭಾ ಚುನಾವಣೆ ವೇಳೆ ಮೋದಿ - ರಾಹುಲ್, ಭ್ರಷ್ಟಾಚಾರ, ಹಿಂದೂ ಮುಸ್ಲಿಂ ಎಂಬ ವಿಷಯಗಳೇ ಪ್ರಧಾನವಾಗುತ್ತಿತ್ತು. ಅಲ್ಲದೇ ರೈತರನ್ನು ಮರೆಮಾಚಲಾಗಿತ್ತು. ಆದರೆ ರೈತರಿಗೆ ಪ್ರಾಮುಖ್ಯತೆ ನೀಡಬೇಕೆಂದು ರೈತ ಸಂಘಟನೆಗಳ ಒಕ್ಕೂಟ ರಾಷ್ಟ್ರ ಮಟ್ಟದಲ್ಲಿ ಹೋರಾಟ ನಡೆಸಿದೆ. ಈ ಕಾರಣಕ್ಕಾಗಿ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ತಿಳಿಸಿದರು.
ಕೆ.ಆರ್.ಎಸ್ ಬಳಿ ಗಣಿಗಾರಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಗಣಿಗಾರಿಕೆ ವಿರುದ್ಧವಾಗಿ ಮಂಡ್ಯದಲ್ಲಿ ದೊಡ್ಡಮಟ್ಟದ ಹೋರಾಟ ಮಾಡುತ್ತೇವೆ. ಗಣಿಗಾರಿಕೆ ಸಂಪೂರ್ಣ ನಿಷೇಧ ಮತ್ತು ಅದರಿಂಗಾದುವ ಅನಾಹುತಗಳ ಬಗ್ಗೆ ಎಚ್ಚರಿಸುವ ಸಂಬಂಧ ರೈತ ಮುಖಂಡರ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಸಭೆ ನಡೆಸಲಾಗುತ್ತದೆ ಎಂದರು.

ಇದೇ ವೇಳೆ ಮಾತನಾಡಿದ ರೈತ ಮುಖಂಡ ದರ್ಶನ್, ಲೋಕಸಭಾ ಚುನಾವಣೆಗೆ ನಾನು ಆಕಾಂಕ್ಷಿ ಅಲ್ಲ. ರೈತ ಸಂಘದಿಂದ ಅಭ್ಯರ್ಥಿ ಯಾರು ಎಂಬುದು ಇನ್ನು ತೀರ್ಮಾನವಾಗಿಲ್ಲ. ತಾಲ್ಲೂಕು, ಜಿಲ್ಲಾ ಘಟಕದ ಮುಖಂಡರ ಜೊತೆ ಚರ್ಚೆ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ಹಾಗೆಯೇ ರಾಜ್ಯ ರೈತ ಸಂಘದಲ್ಲಿ ಯಾವುದೇ ಗೊಂದಲ ಇಲ್ಲ. ಕೇವಲ ಮಿಸ್ ಕಮ್ಯೂನಿಕೇಷನ್ ಆಗಿತ್ತು ಅಷ್ಟೇ. ಎಲ್ಲಾ ಗೊಂದಲ ನಿವಾರಣೆಯಾಗಿದೆ ಎಂದು ತಿಳಿಸಿದರು.












Click it and Unblock the Notifications