ಸಚಿವ ಮಹದೇವಪ್ಪ ತವರು ಕ್ಷೇತ್ರದಲ್ಲಿ ಗಲ್ಲಿಗಳೇ ಮಾಯ!
ಮೈಸೂರು, ಮಾರ್ಚ್ 24: ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಪ್ರತಿನಿಧಿಸುವ ತಿ.ನರಸೀಪುರ ಕ್ಷೇತ್ರದಲ್ಲಿ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗುತ್ತಿದೆಯಾದರೂ ಅವುಗಳೆಲ್ಲವೂ ಕಳಪೆಯಿಂದ ಕೂಡಿದೆ ಎಂಬ ಆರೋಪಗಳು ಕೇಳಿಬರತೊಡಗಿದೆ.
ತಿ.ನರಸೀಪುರ ಪುರಸಭೆ ವ್ಯಾಪ್ತಿಯಲ್ಲಿ ಕಳೆದ ಹಲವು ವರ್ಷಗಳಿಂದ ನಡೆದಿರುವ ಕಾಮಗಾರಿಗಳು ಸಂಪೂರ್ಣವಾಗಿ ಕಳಪೆಯಾಗಿದೆ ಎಂಬ ಆರೋಪವನ್ನು ಮಾಡುತ್ತಿದ್ದು, ಇಲ್ಲಿನ ಖಾಸಗಿ ಬಸ್ ನಿಲ್ದಾಣವನ್ನು ಹಳೆಯ ಎಪಿಎಂಸಿ ಗೋದಾಮು ರೀತಿಯಲ್ಲಿ ನಿರ್ಮಾಣ ಮಾಡಲಾಗಿದೆ. ಕೊಟ್ಯಂತರ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಪುರಸಭೆ ವಾಣಿಜ್ಯ ಸಂಕೀರ್ಣ ಕೂಡ ಅವೈಜ್ಞಾನಿಕವಾಗಿದ್ದು, ಮಳೆ ಬಂದರೇ ಕೊಳಚೆ ನೀರಲ್ಲ ವಾಣಿಜ್ಯ ಮಳಿಗೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗುವುದು ಮಾಮೂಲಿಯಾಗಿದೆ.

ಪುರಸಭೆ ವ್ಯಾಪ್ತಿಯಲ್ಲಿನ ಎಲ್ಲ ಕಾಮಗಾರಿಗಳನ್ನು ಕಳೆದ ಹಲವು ವರ್ಷಗಳಿಂದ ಪುರಸಭೆಯಲ್ಲಿನ ಇಂಜಿನಿಯರ್ ರೊಬ್ಬರೇ ಮಾಡುತ್ತಿದ್ದು, ಅವರ ಮೇಲೆಯೇ ಇದೀಗ ಸಂಶಯಪಡುವಂತಾಗಿದೆ.
ಪಟ್ಟಣದಲ್ಲಿ ಕನ್ಸರ್ವೆನ್ಸಿ ಗಲ್ಲಿಗಳು ಸಂಪೂರ್ಣ ಒತ್ತುವರಿಯಾಗಿದ್ದು, ನಾಲೆಗಳನ್ನು ಸಹ ಒತ್ತುವರಿ ಮಾಡಿಕೊಂಡು ಮನೆ, ಕಟ್ಟಡಗಳನ್ನು ನಿರ್ಮಾಣ ಮಾಡಿಕೊಳ್ಳಲಾಗುತ್ತಿದೆ. ಈ ಬಗ್ಗೆ ಯಾವುದೇ ರೀತಿಯ ಕ್ರಮಗಳನ್ನು ಕೈಗೊಳ್ಳದಿರುವುದು ಅಚ್ಚರಿಗೆ ಕಾರಣವಾಗಿದೆ. ಈಗಾಗಲೇ ಇಲ್ಲಿನ ಗಲ್ಲಿಗಳನ್ನು ಕೆಲವು ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿರುವುದು ಗೋಚರಿಸುತ್ತಿದೆ. ಒತ್ತುವರಿಯಿಂದಾಗಿ ಕೆಲವರಿಗೆ ಓಡಾಡಲು ರಸ್ತೆಯೇ ಇಲ್ಲದಂತಾಗಿದೆ.
ಇನ್ನೊಂದೆಡೆ ಹುಲ್ಲಹಳ್ಳಿ ನಾಲೆಯನ್ನು ಒತ್ತುವರಿ ಮಾಡಿಕೊಂಡು ಸರ್ಕಾರಿ ನೌಕರ ಸಂಘದವರು, ವಾಣಿಜ್ಯ ಕಟ್ಟಡ ಹಾಗೂ ಮಠದ ಶಾಲಾ ಕಟ್ಟಡದ ಜೊತೆಗೆ ವಾಣಿಜ್ಯ ಮಳಿಗೆ ನಿರ್ಮಿಸಿ ಬಾಡಿಗೆಗೆ ನೀಡಿದ್ದಾರೆ. ಮತ್ತೊಬ್ಬರು ಎರಡಂತಸ್ತಿನ ಮನೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಆದರೂ ಪುರಸಭೆ, ತಾಲೂಕು ಆಡಳಿತ ಕಣ್ಮುಚ್ಚಿ ಕುಳಿತಿದೆ ಎಂಬುದು ಸಾರ್ವಜನಿಕರ ಆರೋಪವಾಗಿದೆ.












Click it and Unblock the Notifications