T Narasipura Accident: ಆಸ್ಪತ್ರೆಯಲ್ಲಿ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಿದ ಸಚಿವ ಡಾ.ಎಚ್.ಸಿ.ಮಹದೇವಪ್ಪ
ಮೈಸೂರು, ಮೇ, 30: ಮೈಸೂರು ಜಿಲ್ಲೆ ತಿ. ನರಸೀಪುರ ತಾಲೂಕಿನ ಕುರುಬೂರು ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಜನ ದುರ್ಮರಣ ಹೊಂದಿದ್ದು, ಮತ್ತೆ ಕೆಲವರು ಗಂಭೀರ ಗಾಯಗಳಾಗಿ ಆಸ್ಪತ್ರೆ ಸೇರಿದ್ದರು. ಈ ಸಂಬಂಧ ಸೋಮವಾರ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಚೆಲುವಾಂಬ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿದರು.
ನಂತರ ಮಾತನಾಡಿದ ಸಚಿವರು, ಈ ಘಟನೆ ದುರದೃಷ್ಟಕರವಾದದ್ದು. ಹತ್ತು ಮಂದಿ ಮೃತಪಟ್ಟಿರುವುದು ಮನಸ್ಸಿಗೆ ತುಂಬಾ ನೋವಾಗಿದೆ. ಈಗಾಗಲೇ ಸರ್ಕಾರ ಮೃತರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ಹಾಗೆಯೇ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಬಳ್ಳಾರಿಯ ಜನಾರ್ಧನ್, ಪುನೀತ್, ಸಂಗನಕಲ್ ಗ್ರಾಮದ ಶಶಿಕುಮಾರ್ ಸಹ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಹಾಗೂ ಅಧಿಕಾರಿಗಳು ಉಪಸ್ಧಿತರಿದ್ದರು.
ಮೂವರಿಗೆ ಪ್ರಾಥಮಿಕ ಚಿಕಿತ್ಸೆ
ಮೈಸೂರು ಜಿಲ್ಲೆ ತಿ.ನರಸೀಪುರ ಸಮೀಪದ ಕುರುಬೂರು ಬಳಿ ಸೋಮವಾರ ನಡೆದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಮೂವರಿಗೆ ನಗರದ ಸಿಮ್ಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕಳುಹಿಸಿಕೊಡಲಾಯಿತು. ಬಳ್ಳಾರಿ ಮೂಲದ ಇನ್ನೋವಾ ಕಾರಿನಲ್ಲಿ ತೀವ್ರ ಗಾಯಗೊಂಡಿದ್ದ ಜನಾರ್ಧನ್, ಶಶಿಕುಮಾರ್ ಹಾಗೂ ಬಾಲಕ ಪುನೀತ್ ಅವರನ್ನು ಆಂಬ್ಯುಲೆನ್ಸ್ ಮೂಲಕ ಚಾಮರಾಜನಗರದ ಸಿಮ್ಸ್ ಆಸ್ಪತ್ರೆಗೆ ಕರೆ ತರಲಾಗಿತ್ತು.
ಗಾಯಾಳುಗಳಿಗೆ ಜಿಲ್ಲಾ ಶಸ ಚಿಕಿತ್ಸಕ (ಡಿ.ಎಸ್) ಡಾ. ಕೃಷ್ಣಪ್ರಸಾದ್ ಅವರೇ ಪ್ರಾಥಮಿಕ ಚಿಕಿತ್ಸೆ ನೀಡಿದರು. ಆದರೆ, ಮೂವರ ತಲೆಗೂ ತೀವ್ರ ರೀತಿಯಲ್ಲಿ ಪೆಟ್ಟಾಗಿತ್ತು. ಅದರಲ್ಲೂ ಜನಾರ್ಧನ್ ಅವರ ಪರಿಸ್ಥಿತಿ ಗಂಭೀರವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಅವರನ್ನು ರವಾನಿಸಲಾಯಿತು.
ಇನ್ನು ಗಾಯಾಳಗಳ ತಲೆ ತೀವ್ರ ಪೆಟ್ಟಾಗಿದ್ದ ಕಾರಣ ನರರೋಗ ತಜ್ಞರ ಸಲಹೆ ಅಗತ್ಯವಿತ್ತು. ಆದ್ದರಿಂದ ನಾವು ಮೂವರು ಗಾಯಾಳುಗಳನ್ನು ಪ್ರಥಮ ಚಿಕಿತ್ಸೆ ನೀಡಿ ಮೈಸೂರಿಗೆ ರವಾನಿಸಿದೆವು ಎಂದು ಜಿಲ್ಲಾ ಶಸ ಚಿಕಿತ್ಸಕ ಡಾ.ಕೃಷ್ಣಪ್ರಸಾದ್ ಮಾಹಿತಿ ನೀಡಿದ್ದಾರೆ.












Click it and Unblock the Notifications