ಮೈಸೂರಿಗೆ ಇಂದು ಆರೋಗ್ಯ ಇಲಾಖೆ ತಾಂತ್ರಿಕ ತಜ್ಞರ ತಂಡ ಆಗಮನ
ಮೈಸೂರು, ಅಕ್ಟೋಬರ್ 9: ಮೈಸೂರು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೇ ಸಂದರ್ಭದಲ್ಲಿ ದಸರಾ ಸಮೀಪಿಸುತ್ತಿದೆ.
ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲು ಆರೋಗ್ಯ ಇಲಾಖೆಯ ತಾಂತ್ರಿಕ ತಜ್ಞರ ತಂಡ ಇಂದು ಮೈಸೂರು ನಗರಕ್ಕೆ ಆಗಮಿಸಲಿದೆ. ದಸರಾ ಉತ್ಸವಕ್ಕೆ ಕೈಗೊಂಡಿರುವ ಸಿದ್ಧತೆ, ದೀಪಾಲಂಕಾರ, ಸಾಂಸ್ಕೃತಿಕ ಕಾರ್ಯಕ್ರಮಗಳು ಇರಬೇಕೇ, ಬೇಡವೇ? ಎಷ್ಟು ಜನರನ್ನು ಸೇರಿಸಬೇಕು ಎಂಬುದರ ಕುರಿತು ತೀರ್ಮಾನ ತೆಗೆದುಕೊಳ್ಳಲಿದೆ.
ಮೈಸೂರಿನಲ್ಲಿ ಶೇ.100ಕ್ಕಿಂತ ಹೆಚ್ಚು ಕೋವಿಡ್-19 ಪರೀಕ್ಷೆ: ಡಿಸಿ ರೋಹಿಣಿ ಸಿಂಧೂರಿ
ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ಸ್ಥಳೀಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾಹಿತಿ ಕಲೆ ಹಾಕಲಿದ್ದು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ಸುದರ್ಶನ್, ಸದಸ್ಯ ಡಾ.ಲೋಕೇಶ್, ಸದಸ್ಯ ಕಾರ್ಯದರ್ಶಿ ಡಾ.ಮಹಮ್ಮದ್ ಷರೀಫ್ ಅವರುಗಳ ತಂಡ ಆಗಮಿಸಲಿದೆ.
ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ಮೈಸೂರು ಅರಮನೆ, ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ. ಭದ್ರತಾ ತಂಡ ಕೂಡ ಬಂದು ಪರಿಶೀಲನೆ ನಡೆಸಲಿವೆ ಎಂದು ಮೂಲಗಳು ತಿಳಿಸಿವೆ.
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಸೋಂಕು ಹರಡುವಿಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮೈಸೂರಿನಲ್ಲಿ ಶೇ.100ಕ್ಕಿಂತ ಹೆಚ್ಚು ಕೋವಿಡ್-19 ಪರೀಕ್ಷೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಗುರುವಾರ ಮಾಹಿತಿ ನೀಡಿದ್ದಾರೆ.
ಮೈಸೂರಿನಲ್ಲಿ ಕೋವಿಡ್-19 ನಿರ್ವಹಣೆಗೆ 4 ವಲಯಗಳಾಗಿ ವಿಂಗಡಿಸಲಾಗಿದೆ. ಇದಕ್ಕಾಗಿ ಹಿರಿಯ ಅಧಿಕಾರಿಗಳನ್ನು ತಂಡದೊಂದಿಗೆ ನೇಮಿಸಲಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಕಡಿವಾಣ ಹಾಕಲು ಎಲ್ಲಾ ಪ್ರಯತ್ನಗಳನ್ನು ಮುಂದುವರಿಸಲಿದೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಗುರುವಾರ ಸಹ 642 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 40,232ಕ್ಕೆ ಏರಿಕೆಯಾಗಿದ್ದು, ಇಂದು ಗುಣಮುಖರಾದ 563 ಸೋಂಕಿತರು ಸೇರಿದಂತೆ ಈವರೆಗೂ ಒಟ್ಟು 32,257 ಮಂದಿ ಕೊರೊನಾಗೆ ಸಡ್ಡು ಹೊಡೆದಿದ್ದಾರೆ.
ಸದ್ಯ ಜಿಲ್ಲೆಯಲ್ಲಿ 7,123 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಕೊರೊನಾಗೆ ಇಂದು ಸಹ 12 ಮಂದಿ ಬಲಿಯಾಗಿದ್ದು, ಈವರೆಗೂ 852 ಸೋಂಕಿತರು ಕೊರೊನಾದಿಂದ ಮೃತಪಟ್ಟಿದ್ದಾರೆ.
Recommended Video