ಶ್ರೀನಿವಾಸ್ ಪ್ರಸಾದ್ ಗೆ ಅಧಿಕೃತ ಆಹ್ವಾನ ನೀಡಿದ ಬಿಜೆಪಿ
ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರಿಗೆ ಬಿಜೆಪಿ ಪಕ್ಷಕ್ಕೆ ಸೇರುವಂತೆ ಇಂದು (ಡಿ.26) ಅಧಿಕೃತ ಆಹ್ವಾನ ನೀಡಲಾಯಿತು. ಮಾಜಿ ಸಚಿವ ಕೋಟೆ ಶಿವಣ್ಣ ಅವರು ಹಲವಾರು ಬಿಜೆಪಿ ಮುಖಂಡರೊಂದಿಗೆ ಶ್ರೀನಿವಾಸ್ ಪ್ರಸಾದ್ ಅವರನ್ನು ಬಿಜೆಪಿಗೆ ಸೇರುವಂತೆ ಪಕ್ಷದ ಪರವಾಗಿ ಅಧಿಕೃತ ಆಹ್ವಾನ ನೀಡಿದರು.
ತಮ್ಮನ್ನು ಸಚಿವ ಸ್ಥಾನದಿಂದ ಕೈಬಿಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಏಕಪಕ್ಷೀಯ ನಿರ್ಧಾರ ವಿರೋಧಿಸಿ ಶ್ರೀನಿವಾಸ್ ಪ್ರಸಾದ್ ಅವರು ಕಾಂಗ್ರೆಸ್ಸಿನಿಂದ ಆಯ್ಕೆಯಾಗಿದ್ದ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.
ಮುಖ್ಯಮಂತ್ರಿ ವಿರುದ್ಧ ಸತತ ವಾಗ್ದಾಳಿ ನಡೆಸಿದ್ದ ಅವರು, ಸ್ವಲ್ಪದಿನ ತಟಸ್ಥವಾಗಿರುವ ನಿರ್ಧಾರಕ್ಕೆ ಬಂದಿದ್ದರು. ನಂತರ ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿ ಬಿಜೆಪಿ ಸೇರುವ ಬಗ್ಗೆ ನಿರ್ಧರಿಸಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಜೊತೆಗಿನ ಭೇಟಿ ವೇಳೆ ಬಿಜೆಪಿ ಸೇರ್ಪಡೆಗೊಳ್ಳುವ ಕುರಿತು ತಮ್ಮ ನಿರ್ಧಾರ ತಿಳಿಸಿದ್ದರು.
ಇದೀಗ ಅವರಿಗೆ ಬಿಜೆಪಿ ಸೇರುವಂತೆ ಅಧಿಕೃತ ಆಹ್ವಾನ ನೀಡಲಾಗಿದ್ದು, ವಿಧಾನಸಭೆಯ ನಂಜನಗೂಡು ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಹಾದಿ ಸುಗಮವಾಗಿದೆ.