ಮುಖ್ಯಮಂತ್ರಿ ಭೇಟಿ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ ಬಿಗಿ ಬಂದೋಬಸ್ತ್
ಮೈಸೂರು, ಅಕ್ಟೋಬರ್ 15: ದಸರಾ ಹಬ್ಬದ ಉದ್ಘಾಟನೆಯ ಹಿನ್ನೆಲೆಯಲ್ಲಿ ಇಂದು ಚಾಮುಂಡಿ ಬೆಟ್ಟಕ್ಕೆ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಭೇಟಿ ನೀಡಿ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.
ಅಕ್ಟೋಬರ್ 17ರಂದು ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಅವರು ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ. ಈ ವೇಳೆ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಕೆಲ ಸಚಿವರು ಭಾಗಿಯಾಗಲಿದ್ದಾರೆ.
ಅ.17ರಿಂದ ಮೈಸೂರಿನ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ
ಉದ್ಘಾಟನಾ ಸಮಾರಂಭಕ್ಕೆ ಚಾಮುಂಡಿ ಬೆಟ್ಟದಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗುತ್ತಿದ್ದು, ಈಗಾಗಲೇ ಮೈಸೂರು ಜಿಲ್ಲಾಡಳಿತ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ. ಚಾಮುಂಡಿ ಬೆಟ್ಟದ ಮೇಲೆ ಪೊಲೀಸ್ ಸರ್ಪಗಾವಲು ಏರ್ಪಡಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ನಾಳೆ ಸಂಜೆ 6.05ಕ್ಕೆ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಬಳಿಕ ಮೈಸೂರಿಗೆ ಆಗಮಿಸಿ 6.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಕೋವಿಡ್-19 ನಿಯಂತ್ರಣ ಮತ್ತು ದಸರಾ ಸಂಬಂಧ ಸಭೆ ನಡೆಸಲಿದ್ದಾರೆ. ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಿ ಅ.17ರಂದು ಬೆಳಿಗ್ಗೆ 7.35ಕ್ಕೆ ಚಾಮುಂಡಿ ಬೆಟ್ಟಕ್ಕೆ ತೆರಳಿ ದಸರಾ ಮಹೋತ್ಸವ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ.