ಜುಲೈ 10ರಿಂದ ಎಚ್.ಡಿ.ಕೋಟೆಯಲ್ಲಿ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು, ಜುಲೈ 9: ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಹರಡದಂತೆ ಈಗಾಗಲೇ ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿರುವ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ನಾಳೆಯಿಂದ ಎಚ್.ಡಿ.ಕೋಟೆ ತಾಲೂಕಿಗೆ ಹೊರರಾಜ್ಯ/ವಿದೇಶ/ಹೊರಜಿಲ್ಲೆಗಳಿಂದ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದ್ದಾರೆ.
ಇಂದು ಮಾಧ್ಯಮ ಹೇಳಿಕೆ ನೀಡಿರುವ ಅವರು, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಕ್ಷತೆಯ ದೃಷ್ಟಿಯಿಂದ ಹೊರರಾಜ್ಯ ಮತ್ತು ವಿದೇಶದಿಂದ ಬರುವ ಪ್ರವಾಸಿಗರಿಗೆ ಹೋಟೆಲ್, ಹೋಂ ಸ್ಟೇ, ರೆಸಾರ್ಟ್, ಲಾಡ್ಜ್, ವಸತಿಗೃಹಗಳಲ್ಲಿ ಸೌಕರ್ಯ ನೀಡದಂತೆ ಆದೇಶ ಹೊರಡಿಸಲಾಗಿದೆ. ಈ ನಡವೆ ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಹೋ ಸ್ಟೇ, ರೆಸಾರ್ಟ್, ಲಾಡ್ಜ್ , ವಸತಿ ಗೃಹಗಳಿಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಅಧಿಕವಾಗಿದೆ.
ಜಿಲ್ಲೆಗೆ ಹೊರ ಜಿಲ್ಲೆಗಳಿಂದ ಪ್ರವಾಸಿಗರು ಆಗಮಿಸಿ ಸುರಕ್ಷತಾ ಕ್ರಮಗಳ ಬಗ್ಗೆ ಮುತುವರ್ಜಿ ಹಾಗೂ ಕಾಳಜಿ ವಹಿಸದಿರುವ ಬಗ್ಗೆ ಸ್ಥಳೀಯರು ಆತಂಕಗೊಂಡಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಹೀಗಾಗಿ ಸಾರ್ವಜನಿಕರ ಹಿತದೃಷ್ಟಿಯಿಂದ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ವ್ಯಾಪ್ತಿಗೆ ಹೊರ ಜಿಲ್ಲೆಗಳಿಂದ ಬರುವ ಪ್ರವಾಸಿಗರಿಗೆ ನಿರ್ಬಂಧಿಸುವ ಸಲುವಾಗಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಜುಲೈ 10ರಿಂದ ಮುಂದಿನ ಆದೇಶದವರೆಗೆ ಹೊರಜಿಲ್ಲೆ/ರಾಜ್ಯ/ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ಎಚ್.ಡಿ.ಕೋಟೆ ತಾಲೂಕಿನ ಎಲ್ಲಾ ಹೋಟೆಲ್, ಹೋಂ ಸ್ಟೇ, ರೆಸಾರ್ಟ್, ಲಾಡ್ಜ್, ವಸತಿಗೃಹ ಇತ್ಯಾದಿಗಳಲ್ಲಿ ವಸತಿ ಸೌಕರ್ಯ ನೀಡಬಾರದು. ಈಗಾಗಲೇ ಇಲ್ಲಿಗೆ ಬಂದು, ವಸತಿ ಸೌಕರ್ಯವನ್ನು ಹೊಂದಿರುವ ಪ್ರವಾಸಿಗರನ್ನು ಬಲವಂತವಾಗಿ ವಾಪಸ್ ಕಳುಹಿಸದೆ ಅವರ ಅವಧಿ ಪೂರ್ಣಗೊಳ್ಳುವವರೆಗೆ ಕಾಯಬೇಕು ಎಂದು ಹೇಳಿದ್ದಾರೆ.
ಪ್ರವಾಸಿ ಉದ್ದೇಶಕ್ಕಾಗಿ ಈಗಾಗಲೇ ಮುಂಗಡ ಬುಕ್ಕಿಂಗ್ ಮಾಡಿದ್ದಲ್ಲಿ ಅವರಿಗೆ ಸೂಕ್ತ ಮಾಹಿತಿ ನೀಡಿ ಬುಕ್ಕಿಂಗ್ ರದ್ದು ಮಾಡಬೇಕು. ಈ ನಿರ್ಬಂಧಗಳು ಎಚ್.ಡಿ.ಕೋಟೆ ತಾಲೂಕು ವ್ಯಾಪ್ತಿಯಲ್ಲಿ ಬರುವ ದಮ್ಮನಕಟ್ಟೆ, ಬಂಡೀಪುರ ಹಾಗೂ ನಾಗರಹೊಳೆ ಅಭಯಾರಣ್ಯಗಳಲ್ಲಿ ಬರುವ ಎಲ್ಲಾ ಸಫಾರಿಗೂ ಅನ್ವಯಯವಾಗಲಿದೆ. ಆದೇಶ ಮೀರಿದಲ್ಲಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.












Click it and Unblock the Notifications