ಮೈಸೂರು: ದೆಹಲಿಯಲ್ಲಿನ ರೈತರ ಹೋರಾಟಕ್ಕೆ ಕೇಂದ್ರ ಕೃಷಿ ಸಚಿವೆ ಆಕ್ಷೇಪ
ಮೈಸೂರು, ಆಗಸ್ಟ್ 17: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟದ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, "ನಿದ್ರೆ ಮಾಡುವವರನ್ನು ಎಚ್ಚರಿಸಬಹುದು, ಆದರೆ ನಿದ್ರೆ ಮಾಡುವಂತೆ ನಟಿಸುವವರನ್ನು ಅಲ್ಲ," ಅಂತಾ ಟೀಕಿಸಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಮಂಗಳವಾರ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯ ರೈತರು ನಡೆಸುತ್ತಿರುವ ಹೋರಾಟ ಈಗ ಕೇವಲ ದಲ್ಲಾಳಿಗಳ ಹೋರಾಟವಾಗಿ ಉಳಿದಿದೆ. ಹೀಗಾಗಿ ರೈತರ ಮನವೊಲಿಸಬಹುದು. ಆದರೆ ರೈತರಂತೆ ನಟಿಸುವವರ ಮನವೊಲಿಸಲು ಸಾಧ್ಯವಿಲ್ಲ," ಎಂದು ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
"ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ಕೃಷಿ ಕಾಯ್ದೆಯಿಂದ ರೈತರು ಎಪಿಎಂಸಿ ಹೊರತಾಗಿ ಹೊರಗೆ ವ್ಯಾಪಾರ ಮಾಡಬಹುದು. ಇದರಿಂದ ಮಂಡ್ಯದ ರೈತನ ಹೊಲಕ್ಕೆ ಮುಂಬೈನಿಂದ ಟ್ರಕ್ ಬಂದು ನಿಲ್ಲುವಂತೆ ಆಗುತ್ತದೆ. ರೈತ ಹೆಚ್ಚಿನ ಬೆಲೆಗೆ ತನ್ನ ಬೆಳೆ ಮಾರಾಟ ಮಾಡಲು ಅನುಕೂಲ ಆಗಿದೆ," ಎಂದ ಸಚಿವೆ ಶೋಭಾ ಕರಂದ್ಲಾಜೆ, ರೈತರ ವಿರೋಧಕ್ಕೆ ಕಾರಣವಾಗಿರುವ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡರು.

ರೈತರ ಸಮಸ್ಯೆಗಳಿಗೆ ಪರಿಹಾರ
ರಾಜ್ಯದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, "ಕೇಂದ್ರ ಕೃಷಿ ಸಚಿವೆಯಾದ ನಂತರ ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಮಾಡುತ್ತೇನೆ. ಒಂದೊಂದು ಜಿಲ್ಲೆಯ ರೈತರ ಸಮಸ್ಯೆ ಬೇರೆಯದಾಗಿದ್ದು, ಆಯಾ ಜಿಲ್ಲೆಗಳಿಗೆ ತೆರಳಿ ಅಲ್ಲಿನ ಬೆಳೆ, ಸಮಸ್ಯೆಗಳನ್ನು ಆಲಿಸಿ ಅದಕ್ಕೆ ಪರಿಹಾರ ಕಲ್ಪಿಸುವ ಕೆಲಸ ಮಾಡುತ್ತೇನೆ. ಪ್ರಧಾನಿ ನರೇಂದ್ರ ಮೋದಿ ದೇಶದ ರೈತನ ಮಗಳೊಬ್ಬಳನ್ನು ಗುರುತಿಸಿ ಕೃಷಿ ಖಾತೆ ನೀಡಿದ್ದಾರೆ."
"ಹಳ್ಳಿಯಲ್ಲಿ ನಾನು ಓದುವಾಗ ಕರೆಂಟ್, ರಸ್ತೆ ಕೂಡ ಇರಲಿಲ್ಲ. ಅಂತಹ ಹಳ್ಳಿಯಿಂದ ಬಂದವಳಿಕೆಗೆ ಇಂತಹ ಖಾತೆ ಕೊಟ್ಟು ಕೆಲಸ ಮಾಡಲು ಅನುಕೂಲ ಮಾಡಿ ಕೊಟ್ಟಿದ್ದಾರೆ. ನಾವು ದೇಶದ ಶೇ.80ರಷ್ಟು ರೈತರ ಹಿತ ಕಾಯಬೇಕಿದೆ. ಅವರು ಬೇರೆ ಬೇರೆ ಕೆಲಸಗಳಿಗೆ ಹೋಗದೆ ಕೃಷಿಯಲ್ಲೇ ಉಳಿಯುವಂತೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಇಲಾಖೆಯಿಂದ ಕಾರ್ಯಯೋಜನೆ ರೂಪಿಸುತ್ತೇನೆ," ಎಂದರು.
ಕೊರೊನಾದಿಂದ ಕೃಷಿಗೆ ತೊಡಕಾಗಿಲ್ಲ
"ದೇಶದಲ್ಲಿ ಎದುರಾಗಿರುವ ಮಹಾಮಾರಿ ಕೊರೊನಾ ಸಂಕಷ್ಟದಿಂದ ಕೃಷಿಗೆ ಯಾವುದೇ ರೀತಿಯಲ್ಲೂ ತೊಡಕಾಗಿಲ್ಲ. ಬದಲಾಗಿ ದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಆಹಾರ ಪದಾರ್ಥಗಳ ಶೇಖರಣೆ ಆಗಿರುವುದನ್ನು ವರದಿಗಳು ಹೇಳುತ್ತಿವೆ. ಕೊರೊನಾ ಸಂದರ್ಭದಲ್ಲೂ ದೇಶದಲ್ಲಿ ದಾಖಲೆ ಪ್ರಮಾಣದ ಕೃಷಿ ಉತ್ಪನ್ನ ಶೇಖರಣೆಯಾಗಿದೆ. ಅದೇ ರೀತಿ ದಾಖಲೆ ಪ್ರಮಾಣದಲ್ಲಿ ಹಣ್ಣು ತರಕಾರಿ ಬೆಳೆಯಲಾಗಿದೆ. ನಗರಗಳಲ್ಲಿದ್ದ ನಮ್ಮ ಯುವಕರು ಹಳ್ಳಿಗೆ ಹೋಗಿ ಕೃಷಿ ಮಾಡಿದರ ಪರಿಣಾಮ ಇದು ಸಾಧ್ಯವಾಗಿದೆ," ಎಂದು ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಾಡದೇವತೆ ದರ್ಶನ ಪಡೆದ ಶೋಭಾ
ಇದಕ್ಕೂ ಮುನ್ನ ಮಂಗಳವಾರ ಮುಂಜಾನೆ ಚಾಮುಂಡಿ ಬೆಟ್ಟಕ್ಕೆ ತೆರಳಿದ ಸಚಿವೆ ಶೋಭಾ ಕರಂದ್ಲಾಜೆ, ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದರು. ಕಾರಿನಲ್ಲಿ ಬಂದು ದೇವಿಯ ದರ್ಶನ ಪಡೆದ ಸಚಿವೆ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಪ್ರತಿ ವರ್ಷ ಆಷಾಢ ಮಾಸದಲ್ಲಿ ಮೆಟ್ಟಿಲುಗಳ ಮೂಲಕ ಬೆಟ್ಟ ಹತ್ತುತ್ತಿದ್ದ ಶೋಭಾ ಕರಂದ್ಲಾಜೆ ಈ ಬಾರಿ ಕೊರೊನಾ ಕಾರಣದಿಂದ ಆಷಾಢ ಮಾಸದಲ್ಲಿ ಬೆಟ್ಟಕ್ಕೆ ಭೇಟಿ ನೀಡಿರಲಿಲ್ಲ.
ಈ ಬಗ್ಗೆ ಮಾತನಾಡಿದ ಅವರು, "ನಾನು ಪ್ರತಿ ವರ್ಷ ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟದ ಮೆಟ್ಟಿಲುಗಳನ್ನು ಹತ್ತುತ್ತಿದ್ದೆ. ಈ ವರ್ಷ ಸಚಿವರೆಲ್ಲ ದೆಹಲಿಯಲ್ಲೇ ಇರಬೇಕು ಎಂಬ ಆದೇಶ ಬಂದಿತ್ತು. ಈ ಹಿನ್ನೆಲೆಯಲ್ಲಿ ಆಷಾಢಕ್ಕೆ ಬರಲು ಸಾಧ್ಯ ಆಗಿರಲಿಲ್ಲ. ಮುಂದೆ ನವರಾತ್ರಿಗೆ ಬಂದು ಮೆಟ್ಟಿಲು ಹತ್ತುತ್ತೇನೆ ಎಂದ ಅವರು, ತಾಯಿ ಚಾಮುಂಡೇಶ್ವರಿ ನನಗೆ ಎಲ್ಲಾ ಬಗೆಯ ಶಕ್ತಿ ತುಂಬಿದ್ದಾಳೆ. ನಾನು ಮೊದಲು ಮೈಸೂರಿಗೆ ಬಂದಾಗ ಎಲ್ಲರೂ ಗೇಲಿ ಮಾಡಿದ್ದರು. ದಸರಾ ಆಚರಣೆ ಮಾಡುವುದು ಗೊತ್ತಿಲ್ಲ ಅಂತ ಗೇಲಿ ಮಾಡುತ್ತಿದ್ದರು. ಆದರೆ ತಾಯಿ ಕೃಪೆಯಿಂದ ಅದನ್ನು ಮಾಡಿ ತೋರಿಸಿದ್ದೇನೆ," ಎಂದು ಹೇಳಿದರು.
ವಿಶ್ವಸಂಸ್ಥೆ ಮೇಲೆ ಒತ್ತಡ
ಇದೇ ವೇಳೆ ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, 'ಇದೊಂದು ತೀವ್ರ ಖಂಡನೀಯ ವಿಚಾರ. ಪ್ರಜಾಪ್ರಭುತ್ವ ರಾಷ್ಟ್ರಗಳ ಮೇಲೆ ಇಂತಹ ದಾಳಿ ನಡೆಯುತ್ತಿರುವುದು ಆತಂಕ ತಂದಿದೆ. ಆಫ್ಘಾನಿಸ್ತಾನದ ಪಕ್ಕದಲ್ಲೇ ಪಾಕಿಸ್ತಾನ ಇದೆ. ಈ ವಿಚಾರದಲ್ಲಿ ಎಲ್ಲಾ ದೇಶಗಳು ಒಟ್ಟಾಗಿ ದನಿ ಎತ್ತಬೇಕು ಹಾಗೂ ವಿಶ್ವಸಂಸ್ಥೆ ಮೇಲೆ ಒತ್ತಡ ಏರಿ ಸಮಸ್ಯೆ ಬಗೆ ಹರಿಸಬೇಕು," ಎಂದರು.

ಸುತ್ತೂರು ಮಠಕ್ಕೆ ಭೇಟಿ
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಬಳಿಕ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದರು. ಕೇಂದ್ರ ಸಚಿವೆಯಾದ ಬಳಿಕ ಮೊದಲ ಬಾರಿಗೆ ಮಠಕ್ಕೆ ಆಗಮಿಸಿದ ಸಚಿವೆ ಶೋಭಾ ಕರಂದ್ಲಾಜೆಗೆ ಸುತ್ತೂರು ಮಠದಿಂದ ಪೂರ್ಣಕುಂಭ ಸ್ವಾಗತ ನೀಡಲಾಯಿತು. ನಂತರ ಸುತ್ತೂರು ದೇಶಿಕೇಂದ್ರ ಶ್ರೀಗಳ ಆಶೀರ್ವಾದ ಪಡೆದ ಶೋಭಾ ಕರಂದ್ಲಾಜೆ, ಶ್ರೀಗಳ ಕುಶಲೋಪರಿ ವಿಚಾರಿಸಿ ಕೆಲಕಾಲ ಮಾತುಕತೆ ನಡೆಸಿದರಲ್ಲದೇ, ಮಠದಲ್ಲೇ ಉಪಹಾರ ಸೇವಿಸಿದರು. ಈ ವೇಳೆ ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್. ನಾಗೇಂದ್ರ ಮುಡಾ ಅಧ್ಯಕ್ಷ ಎಚ್.ವಿ. ರಾಜೀವ್ ಸೇರಿದಂತೆ ಸ್ಥಳೀಯ ಮುಖಂಡರು ಸಾಥ್ ನೀಡಿದರು.












Click it and Unblock the Notifications