ವರ್ಷದ ಮೊದಲ ಮಳೆಯ ಅಬ್ಬರಕ್ಕೆ ಪುಳಕಗೊಂಡ ಮೈಸೂರು ಜನತೆ
ಮೈಸೂರು, ಫೆಬ್ರವರಿ 11: ಜಿಲ್ಲೆಯಲ್ಲಿ ಭಾನುವಾರ ರಾತ್ರಿ ವರ್ಷದ ಮೊದಲ ಮಳೆ ಗುಡುಗು, ಸಿಡಿಲುಗಳಿಂದ ಆರ್ಭಟಿಸುತ್ತ ಸುರಿಯಿತು. ಕಳೆದ ಕೆಲವು ದಿನಗಳಿಂದ ವಾತಾವರಣದಲ್ಲಿ ಏರಿಕೆಯಾಗಿದ್ದ ಉಷ್ಣಾಂಶವು ಹದವಾದ ಮಳೆಗೆ ತಂಪಾಯಿತು.
ನಾಗರಹೊಳೆ ಹುಲಿ ರಕ್ಷಿತಾರಣ್ಯದ ಕೆಲವು ಭಾಗಗಳಲ್ಲಿ ಮಳೆ ಸುರಿದಿರುವುದು ಕಾಳ್ಗಿಚ್ಚಿನ ಭೀತಿಯನ್ನು ದೂರ ಮಾಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಬಿದ್ದಿರುವ ಮಳೆಯು ರೈತರಲ್ಲಿ ಹರ್ಷ ತರಿಸಿದೆ. ಮುಂಗಾರು ಪೂರ್ವದ ಮಳೆಯ ಆರ್ಭಟ ತುಸು ಜೋರಾಗಿಯೇ ಇತ್ತು. ಗುಡುಗು, ಮಿಂಚುಗಳ ಜತೆಗೆ ಆರ್ಭಟಿಸಿದ ಸಿಡಿಲುಗಳಿಂದ ಮಕ್ಕಳು ಬೆದರಿದರು.
ಬೆಂಗಳೂರು, ಕರಾವಳಿ ಭಾಗದಲ್ಲಿ ಮುಂದಿನ 48 ಗಂಟೆ ಭಾರಿ ಮಳೆ
ರಸ್ತೆಯಲ್ಲಿ ಮಣ್ಣಿನ ಸುವಾಸನೆ ಮೂಗಿಗೆ ಅಡರಿ ಹೃನ್ಮಸುಗಳನ್ನು ಪುಳಕಗೊಳಿಸಿತು. ಸದ್ಯ ಬಿದ್ದಿರುವ ಮಳೆಯು ಬತ್ತಿರುವ ಸಣ್ಣ ಹಳ್ಳಗಳಲ್ಲಿ ಒಂದಿಷ್ಟು ನೀರು ಸೇರುವಂತೆ ಮಾಡಿದೆ. ಕೆಲವೆಡೆ ಬತ್ತುತ್ತಿರುವ ಕೆರೆಗಳಿಗೆ ಜೀವ ಒದಗಿಸಿದೆ. ದನಕರುಗಳಿಗೆ ಮೇವಿನ ಸಮಸ್ಯೆ ನೀಗಿಸಿದೆ. ಮತ್ತೆ ಇದೇ ರೀತಿ ಒಂದೆರಡು ದಿನಗಳವರೆಗೆ ಮಳೆ ಮುಂದುವರಿದರೆ ಬರದ ಬೇಗೆ ನಿಜಕ್ಕೂ ಪರಿಹಾರವಾಗಲಿದೆ ಎಂದು ರೈತರು ಹೇಳಿದ್ದಾರೆ.
ಕಾಳಿದಾಸ ರಸ್ತೆಯಲ್ಲಿ ತೆಂಗಿನಮರವೊಂದಕ್ಕೆ ಸಿಡಿಲು ಬಡಿದು ಹೊತ್ತಿ ಉರಿಯಿತು. ಅಗ್ನಿಶಾಮಕಪಡೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ನಂದಿಸಿದರು. ಅಗ್ರಹಾರದ ಶಂಕರಮಠದ ಬಳಿ ದೊಡ್ಡಮಾವಿನಮರ ಉರುಳಿ ಬಿದ್ದಿದ್ದರಿಂದ ವಿದ್ಯುತ್ ಪೂರೈಕೆ ಅಸ್ತವ್ಯಸ್ತಗೊಂಡಿತು.
ಬೆಂಗಳೂರಲ್ಲಿ ಚಳಿ ಇಳಿಕೆ, ಸೆಕೆ ಆರಂಭ, 2 ದಿನ ತುಂತುರು ಮಳೆ ಸಾಧ್ಯತೆ
ಭಾನುವಾರ ಜಿಲ್ಲೆಯಲ್ಲಿ ಅತ್ಯಧಿಕ ಮಳೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಆಗಿದೆ. ಇಲ್ಲಿನ ಬೆಳತ್ತೂರು ಗ್ರಾಮದಲ್ಲಿ 42.5 ಮಿ.ಮೀ, ಹುಣಸೂರಿನ ಬೀಜಗನಹಳ್ಳಿಯಲ್ಲಿ 42 ಮಿ.ಮೀ, ತಟ್ಟೆಕೆರೆಯಲ್ಲಿ 24.5 ಮಿ.ಮೀ, ಪಿರಿಯಾಪಟ್ಟಣದ ಕೊಪ್ಪದಲ್ಲಿ 39 ಮಿ.ಮೀ, ಮೈಸೂರು ನಗರದಲ್ಲಿ 18.5, ತಿ.ನರಸೀಪುರದ ರಂಗಸಮುದ್ರದಲ್ಲಿ 16, ನಂಜನಗೂಡಿನ ಹಾಡ್ಯದಲ್ಲಿ 16.5, ಮೈಸೂರು ತಾಲ್ಲೂಕಿನ ಜಯಪುರದಲ್ಲಿ 17.5, ಬೋಗಾದಿಯಲ್ಲಿ 16 ಮಿ.ಮೀ ಮಳೆಯಾಗಿದೆ.
ಸೋಮವಾರ ಮೈಸೂರು ಭಾಗದಲ್ಲಿ ಮಳೆಯ ಮುನ್ಸೂಚನೆ ಇಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮೂಲಗಳು ತಿಳಿಸಿವೆ.